ಕರ್ನಾಟಕ

karnataka

ಸಿಎಂ ರಾಜೀನಾಮೆಗೆ ಆಗ್ರಹಿಸಿ ಮಂಗಳೂರು, ಚಾಮರಾಜನಗರದಲ್ಲಿ ಬಿಜೆಪಿ ಪ್ರತಿಭಟನೆ - BJP Protest

By ETV Bharat Karnataka Team

Published : Jun 28, 2024, 10:33 PM IST

ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ದ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

Former MP Nalin Kumar Kateel
ನಳಿನ್ ಕುಮಾರ್ ಕಟೀಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಾಗ (ETV Bharat)

ಮಂಗಳೂರು(ದಕ್ಷಿಣ ಕನ್ನಡ): ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ, ನಗರದ ಮಿನಿ ವಿಧಾನಸೌಧದ ಮುಂಭಾಗ ಇಂದು ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆಯ ಬಳಿಕ ಕಾರ್ಯಕರ್ತರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದರು. ಬ್ಯಾರಿಕೇಡ್‌ಗಳನ್ನು ಅಳವಡಿಸಿ ಮುತ್ತಿಗೆ ಹಾಕದಂತೆ ತಡೆದರು. ಈ ವೇಳೆ ನೂಕಾಟ, ತಳ್ಳಾಟ ನಡೆಯಿತು.

ಚಾಮರಾಜನಗರದಲ್ಲೂ ಬಿಜೆಪಿ ಪ್ರತಿಭಟನೆ: ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಬಿಜೆಪಿ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ ಕುಮಾರ್, ಹನೂರು ವೆಂಕಟೇಶ್ ಸೇರಿ 30ಕ್ಕೂ ಅಧಿಕ ಮಂದಿ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಇಂಧನ ಬೆಲೆ ಏರಿಕೆ ಬಳಿಕ ಹಾಲಿನ ದರವನ್ನು ಸರ್ಕಾರ ಹೆಚ್ಚಿಸಿದೆ. ಗ್ಯಾರಂಟಿ ಹಣ ಕೊಡಲು ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಪ.ವರ್ಗದ ಕಲ್ಯಾಣಕ್ಕೆ ಬಳಸಬೇಕಿದ್ದ ನೂರಾರು ಕೋಟಿ ಹಣ ಗುಳುಂ ಮಾಡಲಾಗಿದೆ ಎಂದು ಕಿಡಿಕಾರಿದರು.

ಹಗರಣದ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೂ ಯಾವ ನೈತಿಕತೆ ಮೇಲೆ ಇವರು ಆಡಳಿತ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ - BJP protest in Belagavi

ABOUT THE AUTHOR

...view details