ಕರ್ನಾಟಕ

karnataka

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ - BJP protest in Belagavi

By ETV Bharat Karnataka Team

Published : Jun 28, 2024, 2:33 PM IST

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.

BJP protest in Belagavi
ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ (ETV Bharat)

ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ (ETV Bharat)

ನಗರದ ಸರ್ದಾರ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ರ್ಯಾಲಿ ನಡೆಸಲಾಯಿತು. ಈ ವೇಳೆ, ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ, ದಲಿತರಿಗೆ ಅನ್ಯಾಯ ಮಾಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವಂತೆ ಒತ್ತಾಯಿಸಿದರು. ಡಿಸಿ ಕಚೇರಿ ಆವರಣದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಕಚೇರಿಗೆ ಮುತ್ತಿಗೆ ಹಾಕಲು ಬಂದ ಬಿಜೆಪಿ ಕಾರ್ಯಕರ್ತರನ್ನು ಈ ವೇಳೆ ಪೊಲೀಸರು ತಡೆದರು.

ಅನಿಲ್ ಬೆನಕೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನವನ್ನು ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಬಳಸಿದೆ. ಡೆತ್ ನೋಟ್​​ನಲ್ಲಿ ಮಂತ್ರಿಗಳ ಹೆಸರಿದ್ದರೂ ಸಹ ಎಫ್​​ಐಆರ್ ಆಗಿಲ್ಲ. ಕೇವಲ ರಾಜೀನಾಮೆ ಪಡೆದು ಬಿಟ್ಟಿದ್ದಾರೆ. ಇದೇ ವಿಚಾರಕ್ಕೆ ಈಗಾಗಲೇ ಒಂದು ವಿಕೆಟ್​​ ಬಿದ್ದಿದೆ. ಈ ಪ್ರಕರಣದಲ್ಲಿ ಹಲವರ ಕೈವಾಡವಿದ್ದು, ಆ ವಿಕೆಟ್​ಗಳು ಕೂಡ ಬೀಳಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ದಲಿತರು, ಡಾ. ಬಾಬಾಸಾಹೇಬ್​ ಅಂಬೇಡ್ಕರ್ ಅವರ ಬಗ್ಗೆ ದೊಡ್ಡ ಭಾಷಣ ಮಾಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರಿಗೆ ದ್ರೋಹ ಬಗೆದಿದ್ದಾರೆ. ಲೂಟಿ ಮಾಡಿದ ಆ 187 ಕೋಟಿ ರೂ. ಹಣವನ್ನು ತೆಲಂಗಾಣದ ಚುನಾವಣೆಯಲ್ಲಿ ಬಳಸಿಕೊಂಡಿದ್ದಾರೆ. ಹಾಗಾಗಿ, ಈ ಸರ್ಕಾರವನ್ನು ಮನೆಗೆ ಕಳುಹಿಸಲು ಬೀದಿಗಿಳಿದು ಬಿಜೆಪಿ ಪ್ರತಿಭಟಿಸುತ್ತಿದೆ ಎಂದರು.

ಇದನ್ನೂ ಓದಿ:ಡಿಎಂಕೆ ಸರ್ಕಾರದ ವಿರುದ್ಧ ದಳಪತಿ ವಿಜಯ್​ ವಾಗ್ದಾಳಿ.. ಯಾವ ಕಾರಣಕ್ಕೆ ಟೀಕೆ ಗೊತ್ತಾ? - Vijay Slams DMK govt

ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಡೆತ್ ನೋಟ್​​ನಲ್ಲಿ ನಾಗೇಂದ್ರ ಅವರ ಹೆಸರು ಬರೆದಿದ್ದರೂ ಕೂಡ ಈವರೆಗೆ ರಾಜ್ಯ ಸರ್ಕಾರ ಅವರ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ. ಕಲಂ 302, 307 ಅಡಿ ನಾಗೇಂದ್ರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:ಉತ್ತರಕನ್ನಡದಲ್ಲಿ ಶತಕ ತಲುಪಿದ ಡೆಂಗ್ಯೂ: ಕಳೆದ 5 ವರ್ಷದಲ್ಲೇ ಈ ಬಾರಿ ಮಹಾಮಾರಿ ಅಬ್ಬರ ಜೋರು - Uttara Kannada Dengue Cases

ಬಳಿಕ ಬಿ.ನಾಗೇಂದ್ರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಾಸಕ ವಿಠಲ ಹಲಗೇಕರ್, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ಡಾ. ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡರ, ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮುರುಘೇಂದ್ರಗೌಡ ಪಾಟೀಲ, ರುದ್ರಣ್ಣ ಚಂದರಗಿ ಸೇರಿ ಮತ್ತಿತರರು ಇದ್ದರು.

ABOUT THE AUTHOR

...view details