ಕರ್ನಾಟಕ

karnataka

ETV Bharat / state

ಜನಾರ್ದನರೆಡ್ಡಿ- ಶ್ರೀರಾಮುಲು ಮನಸ್ತಾಪ ಶಮನಕ್ಕೆ ಪ್ರಹ್ಲಾದ್‌ ಜೋಶಿ ಸಂಧಾನ? - B Y VIJAYENDRA

ಬಿಜೆಪಿ ನಾಯಕ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ಮನಸ್ತಾಪ ಶಮನಕ್ಕೆ ಪ್ರಹ್ಲಾದ್​ ಜೋಶಿ ಅವರಿಗೆ ಜವಾಬ್ದಾರಿವಹಿಸಲಾಗಿದೆ ಎಂದು ತಿಳಿದುಬಂದಿದೆ.

Prahlad Joshi, Janardhan Reddy- Sriramulu
ಪ್ರಹ್ಲಾದ್‌ ಜೋಶಿ, ಜನಾರ್ದನರೆಡ್ಡಿ- ಶ್ರೀರಾಮುಲು (ETV Bharat)

By ETV Bharat Karnataka Team

Published : Jan 24, 2025, 6:54 PM IST

ಬೆಂಗಳೂರು :ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ, ಮತ್ತೊಂದೆಡೆ ಬಿಜೆಪಿ ನಾಯಕರಾದ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ನಡುವಿನ ಮನಸ್ತಾಪದ ಸ್ಫೋಟದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಇಬ್ಬರ ನಡುವೆ ಸಂಧಾನ ನಡೆಸಲು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ವರದಿಯಾಗಿದೆ.

ದೆಹಲಿಗೆ ಇಂದು ತೆರಳಿದ ವಿಜಯೇಂದ್ರ ಅವರು, ಪಕ್ಷದ ಕೆಲ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮಾಜಿ ಸಚಿವರಾದ ಜರ್ನಾದನ ರೆಡ್ಡಿ, ಶ್ರೀರಾಮುಲು ನಡುವಿನ ಜಗಳ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬೀದಿ ರಂಪಾಟದ ನಡುವೆ ವಿಜಯೇಂದ್ರ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಮೂಡಿಸಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕೆಂದು ಒಂದು ಬಣ ಪಟ್ಟು ಹಿಡಿದಿದೆ. ಇದರ ನಡುವೆ ಜಿಲ್ಲಾಧ್ಯಕ್ಷರ ನೇಮಕಾತಿ, ಪದಾಧಿಕಾರಿಗಳ ನೇಮಕ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಸನಗೌಡ ಪಾಟೀಲ್ ಯತ್ನಾಳ್ ಬಣದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸುವ ಸುಳಿವು ನೀಡಿದ್ದು, ಆದರೆ ವಿಜಯೇಂದ್ರ ಅವಿರೋಧವಾಗಿ ಆಯ್ಕೆಯಾಗಲು ರಣತಂತ್ರ ರೂಪಿಸಿದ್ದಾರೆ. ಈ ಬೆಳವಣಿಗೆಗಳ ನಡುವೆಯೇ ವಿಜಯೇಂದ್ರ ಅವರು ದೆಹಲಿಗೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಅವರು ತಮ್ಮ ಸ್ವಂತ ಕೆಲಸಕ್ಕೆ ದೆಹಲಿಗೆ ತೆರಳಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ರೆಡ್ಡಿ-ರಾಮುಲು ಮನಸ್ತಾಪದ ಸಂಧಾನಕ್ಕೆ ಜೋಶಿ? : ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ಮಧ್ಯೆ ಉಂಟಾಗಿರುವ ಮನಸ್ತಾಪಕ್ಕೆ ಅಂತ್ಯ ಹಾಡಲು ಕೇಂದ್ರ ಬಿಜೆಪಿ ವರಿಷ್ಠರು ಮುಂದಾಗಿದ್ದು, ಇಬ್ಬರ ನಡುವೆ ಸಂಧಾನ ನಡೆಸಲು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ದೆಹಲಿಗೆ ಕರೆತರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರು, ಜೋಶಿ ಅವರಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಇಬ್ಬರ ನಡುವೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಹ್ಲಾದ್ ಜೋಶಿ ಅವರು, ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲೇ ಚರ್ಚಿಸಬೇಕು. ಆರೋಪ - ಪ್ರತ್ಯಾರೋಪ, ಟೀಕೆ - ಟಿಪ್ಪಣಿ ಮಾಡಬಾರದು. ಇದರಿಂದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಜೆ. ಪಿ ನಡ್ಡಾ ಅವರ ಲಭ್ಯತೆ ನೋಡಿಕೊಂಡು ಸಮಯ ನಿಗದಿಪಡಿಸಲಾಗುತ್ತದೆ. ಅಲ್ಲಿಯ ತನಕ ಮಾತನಾಡಬಾರದು ಎಂದು ಜೋಶಿ ಹೇಳಿದ್ದಾರೆ ಎಂಬುದು ತಿಳಿದು ಬಂದಿದೆ.

ಜೆ. ಪಿ ನಡ್ಡಾ ಅವರ ಸೂಚನೆ ಮೇರೆಗೆ ರೆಡ್ಡಿ ಮತ್ತು ಶ್ರೀರಾಮುಲು ಮುಂದಿನ ವಾರ ದೆಹಲಿಗೆ ತೆರಳುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಜೆಪಿ ನಡ್ಡಾ ಕರೆ ಮಾಡಿದ್ದರು, ಅವರಿಗೆ ಎಲ್ಲ ಮಾಹಿತಿ ನೀಡಿದ್ದೇನೆ : ಬಿ ಶ್ರೀರಾಮುಲು - B SRIRAMULU

ABOUT THE AUTHOR

...view details