ಕರ್ನಾಟಕ

karnataka

ETV Bharat / state

ವಾಲ್ಮೀಕಿ ನಿಗಮ ಪ್ರಕರಣವನ್ನು ಸಿಬಿಐಗೆ ಕೊಡುವವರೆಗೂ ಬಿಡಲ್ಲ: ಬಿ ವೈ ವಿಜಯೇಂದ್ರ - B Y Vijayendra

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.

By ETV Bharat Karnataka Team

Published : Jun 1, 2024, 7:00 AM IST

BJP State President B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (ETV Bharat, ಸಂಗ್ರಹ ಚಿತ್ರ)

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವವರೆಗೂ ಹಾಗೂ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿ, ಅವರಿಗೆ ತಕ್ಕ ಶಿಕ್ಷೆ ಆಗುವವರೆಗೂ ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

ಬಿ.ವೈ ವಿಜಯೇಂದ್ರ ಟ್ವೀಟ್: ಎಸ್ಐಟಿ ರಚನೆ ವಿರೋಧಿಸಿ ಸಾಮಾಜಿಕ ಜಾಲತಾಣ 'ಎಕ್ಸ್' ಮೂಲಕ ಪೋಸ್ಟ್ ಮಾಡಿರುವ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವದ ದಿಕ್ಕು ತಪ್ಪಿಸಿ, ಭ್ರಷ್ಟಾರನ್ನು ರಕ್ಷಿಸುವ ಉದ್ದೇಶದಿಂದ ಎಸ್ಐಟಿ ರಚನೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆರೋಪಿತರನ್ನು ರಕ್ಷಿಸಲು ಹೊರಟಿದೆ. ಎಸ್.ಐ.ಟಿ ರಚನೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಇದನ್ನು ಭಾರತೀಯ ಜನತಾ ಪಾರ್ಟಿಯು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರನ್​​ ಅವರು ಬರೆದ ಡೆತ್ ನೋಟ್​ನಲ್ಲಿ ಈಗಾಗಲೇ ಉಲ್ಲೇಖವಾಗಿರುವಂತೆ ಸ್ವತಃ ಸಚಿವ ಬಿ ನಾಗೇಂದ್ರ ಹೆಸರಿರುವುದು ಬಹಿರಂಗವಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಈಗಾಗಲೇ ಸಂಪುಟದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕಿತ್ತು. ಆದರೆ ಆರೋಪ ಹೊತ್ತವರನ್ನು ಅವ್ಯವಹಾರದ ಜಾಲದಿಂದ ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಿಜಯೇಂದ್ರ ದೂರಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ; ಕೇಸ್​ ದಾಖಲು - Contractor suicide in Davanagere

ಪರಿಶಿಷ್ಟ ಪಂಗಡದ ಹಿತಾಸಕ್ತಿಗೆ ದ್ರೋಹಬಗೆದು ಹಣ ದುರುಪಯೋಗ ಮಾಡಿಕೊಂಡಿರುವುದರ ವಿರುದ್ಧ ಹಾಗೂ ಅಮೂಲ್ಯ ಜೀವವೊಂದು ಆತ್ಮಹತ್ಯೆಗೆ ಈಡಾಗಿರುವುದರ ಕುರಿತು ಈ ಸರ್ಕಾರ ಎಳ್ಳಷ್ಟೂ ತಲೆಕೆಡಿಸಿಕೊಳ್ಳದೇ, ಯೂನಿಯನ್ ಬ್ಯಾಂಕ್ ಮೇಲೆ ಗೂಬೆ ಕೂರಿಸಲು ಹೊರಟಿದೆ. ಸದ್ಯ 'ಅಂಗೈ ಹುಣ್ಣಿಗೆ ಕನ್ನಡಿ ಬೇಕೆ' ಎಂಬ ಪರಿಸ್ಥಿತಿ ನಿರ್ಮಾಣವಾಗಿರುವುದರ ಹಿನ್ನೆಲೆ, ಗತ್ಯಂತರವಿಲ್ಲದೇ ಎಸ್ಐಟಿ ರಚಿಸಿ ಜನರ ಕಣ್ಣಿಗೆ ಮಣ್ಣೆರಚಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆರೋಪಿಸಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ‌ ನಿಗಮದ ಅಕ್ರಮ ತನಿಖೆಗೆ ಎಸ್ಐಟಿ ರಚನೆ: ಒಂದೇ ವರ್ಷದಲ್ಲಿ ಮೂರನೇ ತನಿಖಾ ತಂಡ ಅಸ್ತಿತ್ವಕ್ಕೆ! - Valmiki tribal corporation scam

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಂತಾರಾಜ್ಯ ವ್ಯಾಪ್ತಿಯಲ್ಲಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ಹೊರತುಪಡಿಸಿ ಇನ್ಯಾವ ಬಗೆಯ ತನಿಖೆಯನ್ನು ರಾಜ್ಯ ಬಿಜೆಪಿ ಒಪ್ಪುವುದಿಲ್ಲ. ಸಿಬಿಐ ತನಿಖೆಯ ಬೇಡಿಕೆಗೆ ಸರ್ಕಾರ ಒಪ್ಪುವವರೆಗೂ, ಆರೋಪಿತ ಸಚಿವ ಬಿ.ನಾಗೇಂದ್ರ ಸ್ಥಾನ ತೆರವಾಗಿ ಅವರಿಗೆ ತಕ್ಕ ಶಿಕ್ಷೆಯಾಗುವವರೆಗೂ ತಾರ್ಕಿಕ ಅಂತ್ಯಕ್ಕೆ ನಾವು ಹೋರಾಟವನ್ನು ಕೊಂಡೊಯ್ಯಲಿದ್ದೇವೆ ಎಂದು ಸರ್ಕಾರಕ್ಕೆ ಬಿ ವೈ ವಿಜಯೇಂದ್ರ ಎಚ್ಚರಿಕೆ ರವಾನಿಸಿದ್ದಾರೆ.

ABOUT THE AUTHOR

...view details