ಕರ್ನಾಟಕ

karnataka

ETV Bharat / state

ಗೋಪಾಲ್​ ಜೋಶಿ ವಿರುದ್ಧದ ವಂಚನೆ ಆರೋಪ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ಬಿಜೆಪಿ ಟಿಕೆಟ್ ಆಮಿಷ ನೀಡಿ ಗೋಪಾಲ್ ಜೋಶಿ ಅವರು 2 ಕೋಟಿ ರೂ ಪಡೆದ ಆರೋಪ ಪ್ರಕರಣದ ದಾಖಲೆಗಳನ್ನು ಕೋರ್ಟ್​ ಮುಂದಿಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಪ್ರಲ್ಹಾದ್ ಜೋಶಿ ಅಣ್ಣನ ವಿರುದ್ಧ ವಂಚನೆ ಆರೋಪ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಗೋಪಾಲ್ ಜೋಶಿ ವಿರುದ್ಧ ವಂಚನೆ ಆರೋಪ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ (ETV Bharat)

By ETV Bharat Karnataka Team

Published : 7 hours ago

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 2 ಕೋಟಿ ರೂ. ಪಡೆದ ಆರೋಪದಲ್ಲಿ ಬಂಧಿತರಾಗಿರುವ ಗೋಪಾಲ ಜೋಶಿ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ತನ್ನ ವಿರುದ್ಧ ಪ್ರಕರಣ ರದ್ದತಿ ಕೋರಿ ಗೋಪಾಲ್ ಜೋಶಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠದ ಮುಂದೆ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌ ಮೆಮೋ ಸಲ್ಲಿಸಿ ವಿಚಾರಣೆ ನಡೆಸಲು ಕೋರಿದರು. ಅಲ್ಲದೇ, ಇಡೀ ಪ್ರಕರಣ ಹಣ ವರ್ಗಾವಣೆಗೆ ಸಂಬಂಧಿಸಿದ್ದಾಗಿದೆ. ಕಳೆದ ಮಾರ್ಚ್‌, ಏಪ್ರಿಲ್‌, ಮೇ ಹಾಗೂ ಆಗಸ್ಟ್‌ನಲ್ಲಿ ಘಟನಾವಳಿಗಳು ನಡೆದಿವೆ. ಆದರೆ, ಅಕ್ಟೋಬರ್‌ 17ರಂದು ಪ್ರಕರಣ ದಾಖಲಿಸಿದ್ದು, ಗೋಪಾಲ ಜೋಶಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಇದರಲ್ಲಿ ಇಬ್ಬರನ್ನು ಪೊಲೀಸ್‌ ಕಸ್ಟಡಿಗೆ, ಇನ್ನಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದರು.

ಈ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌.ಜಗದೀಶ್‌, ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೊಡಿಸುವ ವಿಚಾರವು ಪ್ರಲ್ಹಾದ್‌ ಜೋಶಿ ಅವರ ಕಚೇರಿಯಲ್ಲಿ ನಡೆದಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ಅಕ್ಟೋಬರ್‌ 28ರಂದು ಪ್ರಕರಣದ ವಿಚಾರಣೆ ನಡೆಸಲಾಗುವುದು. ಅಂದು ಪ್ರಕರಣದ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತು.

ಪ್ರಕರಣದ ಹಿನ್ನೆಲೆ:ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್‌ ಫೂಲ್‌ ಸಿಂಗ್‌ ಚವ್ಹಾಣ್‌ ಅವರಿಂದ 2 ಕೋಟಿ ರೂ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಸುನೀತಾ ಚವ್ಹಾಣ್‌ ನೀಡಿದ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವಾನಂದ್‌ ಚವ್ಹಾಣ್‌ ಅವರು ಗೋಪಾಲ ಜೋಶಿ ಅವರನ್ನು ಹುಬ್ಬಳ್ಳಿಯ ನಿವಾಸದಲ್ಲಿ ಭೇಟಿ ಮಾಡಿದ್ದರು. ಸೋಮಶೇಖರ್‌ ನಾಯಕ್‌ ಅವರು ಗೋಪಾಲ ಜೋಶಿ ಅವರನ್ನು ಭೇಟಿ ಮಾಡಿಸಿದ್ದರು. ಕೇಂದ್ರದಲ್ಲಿ ನನ್ನ ಸಹೋದರ ಪ್ರಲ್ಹಾದ್‌ ಜೋಶಿ ಅವರ ವರ್ಚಸ್ಸು ಚೆನ್ನಾಗಿದ್ದು, ವಿಜಯಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಗೋಪಾಲ ಜೋಶಿ ಆಮಿಷವೊಡ್ಡಿದ್ದರು. ಇದಕ್ಕಾಗಿ ₹5 ಕೋಟಿ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದರು. ಅಷ್ಟು ಹಣವಿಲ್ಲ ಎಂದಾಗ ಸದ್ಯಕ್ಕೆ ₹25 ಲಕ್ಷ ಕೊಡುವಂತೆ ತಿಳಿಸಿದ್ದರು. ಆ ಹಣವನ್ನು ಗೋಪಾಲ ಜೋಶಿ ಸೂಚಿಸಿದ ವಿಜಯಕುಮಾರಿ ಅವರ ಮನೆಗೆ ತಲುಪಿಸಲಾಗಿತ್ತು. ಅಲ್ಲದೇ, ₹5 ಕೋಟಿ ಮೌಲ್ಯ ನಮೂದಿಸಿದ್ದ ಚೆಕ್‌ ಸಹ ಪಡೆದುಕೊಂಡಿದ್ದರು.

ಟಿಕೆಟ್‌ ಸಂಬಂಧ ಅಮಿತ್‌ ಶಾ ಅವರ ಆಪ್ತ ಸಹಾಯಕರ ಜೊತೆಗೆ ಮಾತನಾಡಿರುವುದಾಗಿ ಗೋಪಾಲ ಜೋಶಿ ಹೇಳಿದ್ದರು. ಆದರೆ, ಟಿಕೆಟ್‌ ಕೊಡಿಸದೇ ವಂಚಿಸಿದ್ದಾರೆ. ಅದಾದ ಮೇಲೆ ಬಸವೇಶ್ವರನಗರದ ವಿಜಯಕುಮಾರಿ ಅವರ ಮನೆಗೆ ಕರೆಸಿಕೊಂಡು ಚೆಕ್‌ ವಾಪಸ್‌ ನೀಡಿದ್ದರು. 25 ಲಕ್ಷವನ್ನೂ ವಾಪಸ್‌ ನೀಡುವಂತೆ ಕೇಳಿದಾಗ ₹200 ಕೋಟಿ ಮೊತ್ತದ ಯೋಜನೆಗಳ ಬಿಲ್‌ ತೋರಿಸಿ ₹1.75 ಕೋಟಿ ನೀಡಿದರೆ 20 ದಿನಗಳಲ್ಲಿ ಎಲ್ಲಾ ಹಣವನ್ನೂ ವಾಪಸ್‌ ನೀಡುವುದಾಗಿ ಹೇಳಿದ್ದರು. ಅವರ ಮಾತು ನಂಬಿ ಹಂತ ಹಂತವಾಗಿ ₹1.75 ಕೋಟಿ ನೀಡಿದ್ದೆ ಎಂದು ದೇವಾನಂದ್‌ ಚವ್ಹಾಣ್‌ ಅವರ ಪತ್ನಿ ಸುನೀತಾ ಚವ್ಹಾಣ್‌ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ನನಗೆ ಸಹೋದರಿಯೇ ಇಲ್ಲ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಪ್ರಲ್ಹಾದ್​ ಜೋಶಿ

ABOUT THE AUTHOR

...view details