ಮೈಸೂರು:ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಅರ್ಪಿಸಿದ ಬಳಿಕ ಮುಖ್ಯಮಂತ್ರಿಗಳು ವಿಜೃಂಭಣೆಯ ದಸರಾ ವೈಭವವನ್ನು ಮೆಚ್ಚಿಕೊಂಡು ಜಿಲ್ಲಾಡಳಿತವನ್ನು ಅಭಿನಂದಿಸಿದ್ದಾರೆ.
ಅಂಬಾರಿ ಏರಿದ ತಾಯಿ ಚಾಮುಂಡೇಶ್ವರಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲವೂ ಒಟ್ಟಾಗಿ ದಸರಾ ಸಂಭ್ರಮವನ್ನು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ದಸರಾ ಪೂರ್ವಭಾವಿ ಸಭೆಗಳಲ್ಲಿ ಕೊಟ್ಟ ಸೂಚನೆ ಮತ್ತು ತೆಗೆದುಕೊಂಡ ನಿರ್ಣಯಗಳನ್ನು ಜಿಲ್ಲಾಡಳಿತ ಶಿಸ್ತುಬದ್ದವಾಗಿ ಜಾರಿಗೊಳಿಸಿದೆ. ಇದೇ ಮೊದಲ ಬಾರಿಗೆ ಯುವ ದಸರಾವನ್ನು ಚಾಮುಂಡಿ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಂಘಟಿಸಿ ಲಕ್ಷ ಲಕ್ಷ ಮಂದಿ ಸಂಭ್ರಮಿಸಿದರು. ಶಾಸ್ತ್ರೀಯ ನೃತ್ಯದಿಂದ ಸಮಕಾಲೀನ ನೃತ್ಯ ಪ್ರಕಾರಗಳು, 20ಕ್ಕೂ ಹೆಚ್ಚು ತಂಡಗಳು ಹಾಗೂ ನೂರಾರು ಕಲಾವಿದರು ಯುವ ದಸರಾ ಸಡಗರವನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ.
ಪುರಾತನ ಪಂಜಿನ ಬೆಳಕಿನ ಜೊತೆ ಆಧುನಿಕ ಡ್ರೋನ್: ಹಾಗೆಯೇ, ದಸರಾದ ಮುಖ್ಯ ಸಾಂಸ್ಕೃತಿಕ ವೇದಿಕೆಯಲ್ಲೂ ಸಾಹಿತ್ಯ, ಸಂಗೀತ, ಕಲೆ, ನೃತ್ಯಗಳು ಮೇಳೈಸಿ ಖುಷಿ ಕೊಟ್ಟಿದೆ. ಒಟ್ಟಾರೆ, ದಸರಾ ಉದ್ಘಾಟನೆಯಿಂದ ಅಂಬಾರಿಯ ತಾಯಿ ಚಾಮುಂಡಿಗೆ ಪುಷ್ಪಾರ್ಚನೆವರೆಗೂ ಯಾವುದೇ ಅಡಚಣೆಗಳು ಇಲ್ಲದಂತೆ 9 ದಿನಗಳ ಕಲಾ ಸಾಂಪ್ರದಾಯಿಕ ದಸರಾ ಸಂಭ್ರಮದಿಂದ ಮುಗಿದಿದೆ. ಪಂಜಿನ ಮೆರವಣಿಗೆ ಕೂಡ ಹಳತು ಮತ್ತು ಆಧುನಿಕತೆಯ ಮಿಶ್ರಣವಾಗಿದ್ದು ಈ ಬಾರಿಯ ವಿಶೇಷ. ಅತ್ಯಂತ ಪುರಾತನವಾದ ಪಂಜಿನ ಬೆಳಕಿನ ಜೊತೆಗೆ ಆಕಾಶದಲ್ಲಿ ರಚಿಸಿದ ಅತ್ಯಂತ ಆಧುನಿಕವಾದ 1,500 ಡ್ರೋನ್ಗಳ ಬೆಳಕಿನ ರಂಗೋಲಿ ನೆರೆದಿದ್ದವರನ್ನು ವಿಸ್ಮಯದ ಜೊತೆಗೆ ರಂಜಿಸಿದ್ದಕ್ಕೂ ಸಿಎಂ ಜಿಲ್ಲಾಡಳಿತಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.