ಕರ್ನಾಟಕ

karnataka

ETV Bharat / state

ಅದ್ಧೂರಿ, ಅಚ್ಚುಕಟ್ಟಾದ ಮೈಸೂರು ದಸರಾ: ಜಿಲ್ಲಾಡಳಿತದ ಶ್ರಮ, ಶಿಸ್ತಿಗೆ ಸಿಎಂ ಅಭಿನಂದನೆ

ಮೈಸೂರು ದಸರಾ ಯಶಸ್ಸಿನಲ್ಲಿ ಪೌರ ಕಾರ್ಮಿಕರಿಂದ ಜಿಲ್ಲಾಧಿಕಾರಿಗಳವರೆಗೆ, ಮಾವುತರಿಂದ ಜಿಲ್ಲಾ ಮಂತ್ರಿಗಳವರೆಗೆ ಪ್ರತಿಯೊಬ್ಬರ ಶ್ರಮ, ಕರ್ತವ್ಯ ಪ್ರಜ್ಞೆ, ವೃತ್ತಿಪರತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

By ETV Bharat Karnataka Team

Published : 5 hours ago

mysuru dasara
ದಸರಾ ಜಂಬೂ ಸವಾರಿ, ಸಿಎಂ, ಡಿಸಿಎಂ ಹಾಗೂ ಇತರರು (ETV Bharat)

ಮೈಸೂರು:ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಅರ್ಪಿಸಿದ ಬಳಿಕ ಮುಖ್ಯಮಂತ್ರಿಗಳು ವಿಜೃಂಭಣೆಯ ದಸರಾ ವೈಭವವನ್ನು ಮೆಚ್ಚಿಕೊಂಡು ಜಿಲ್ಲಾಡಳಿತವನ್ನು ಅಭಿನಂದಿಸಿದ್ದಾರೆ.

ಅಂಬಾರಿ ಏರಿದ ತಾಯಿ ಚಾಮುಂಡೇಶ್ವರಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್​​ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲವೂ ಒಟ್ಟಾಗಿ ದಸರಾ ಸಂಭ್ರಮವನ್ನು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ದಸರಾದಲ್ಲಿ ಸಿಎಂ ಸಿದ್ದರಾಮಯ್ಯ (ETV Bharat)

ದಸರಾ ಪೂರ್ವಭಾವಿ ಸಭೆಗಳಲ್ಲಿ ಕೊಟ್ಟ ಸೂಚನೆ ಮತ್ತು ತೆಗೆದುಕೊಂಡ ನಿರ್ಣಯಗಳನ್ನು ಜಿಲ್ಲಾಡಳಿತ ಶಿಸ್ತುಬದ್ದವಾಗಿ ಜಾರಿಗೊಳಿಸಿದೆ. ಇದೇ ಮೊದಲ ಬಾರಿಗೆ ಯುವ ದಸರಾವನ್ನು ಚಾಮುಂಡಿ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಂಘಟಿಸಿ ಲಕ್ಷ ಲಕ್ಷ ಮಂದಿ ಸಂಭ್ರಮಿಸಿದರು. ಶಾಸ್ತ್ರೀಯ ನೃತ್ಯದಿಂದ ಸಮಕಾಲೀನ ನೃತ್ಯ ಪ್ರಕಾರಗಳು, 20ಕ್ಕೂ ಹೆಚ್ಚು ತಂಡಗಳು ಹಾಗೂ ನೂರಾರು ಕಲಾವಿದರು ಯುವ ದಸರಾ ಸಡಗರವನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ.

ಪುರಾತನ ಪಂಜಿನ ಬೆಳಕಿನ ಜೊತೆ ಆಧುನಿಕ ಡ್ರೋನ್: ಹಾಗೆಯೇ, ದಸರಾದ ಮುಖ್ಯ ಸಾಂಸ್ಕೃತಿಕ ವೇದಿಕೆಯಲ್ಲೂ ಸಾಹಿತ್ಯ, ಸಂಗೀತ, ಕಲೆ, ನೃತ್ಯಗಳು ಮೇಳೈಸಿ ಖುಷಿ ಕೊಟ್ಟಿದೆ. ಒಟ್ಟಾರೆ, ದಸರಾ ಉದ್ಘಾಟನೆಯಿಂದ ಅಂಬಾರಿಯ ತಾಯಿ ಚಾಮುಂಡಿಗೆ ಪುಷ್ಪಾರ್ಚನೆವರೆಗೂ ಯಾವುದೇ ಅಡಚಣೆಗಳು ಇಲ್ಲದಂತೆ 9 ದಿನಗಳ ಕಲಾ ಸಾಂಪ್ರದಾಯಿಕ ದಸರಾ ಸಂಭ್ರಮದಿಂದ ಮುಗಿದಿದೆ. ಪಂಜಿನ ಮೆರವಣಿಗೆ ಕೂಡ ಹಳತು ಮತ್ತು ಆಧುನಿಕತೆಯ ಮಿಶ್ರಣವಾಗಿದ್ದು ಈ ಬಾರಿಯ ವಿಶೇಷ.‌ ಅತ್ಯಂತ ಪುರಾತನವಾದ ಪಂಜಿನ ಬೆಳಕಿನ ಜೊತೆಗೆ ಆಕಾಶದಲ್ಲಿ ರಚಿಸಿದ ಅತ್ಯಂತ ಆಧುನಿಕವಾದ 1,500 ಡ್ರೋನ್​ಗಳ ಬೆಳಕಿನ ರಂಗೋಲಿ ನೆರೆದಿದ್ದವರನ್ನು ವಿಸ್ಮಯದ ಜೊತೆಗೆ ರಂಜಿಸಿದ್ದಕ್ಕೂ ಸಿಎಂ ಜಿಲ್ಲಾಡಳಿತಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಮೈಸೂರು : ಆಕರ್ಷಕ ಸ್ತಬ್ಧಚಿತ್ರಕ್ಕೆ ಮನಸೋತ ಜನ, ಪ್ರವಾಸಿಗರು

ಪೊಲೀಸರಿಗೆ ಮೆಚ್ಚುಗೆ:ದಸರಾದಲ್ಲಿ ಕಾನೂನು ಸುವ್ಯವಸ್ಥೆಗೆ ಎಲ್ಲೂ ಧಕ್ಕೆ ಆಗದಂತೆ, ಸಂಚಾರ ನಿರ್ವಹಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತೋರಿಸಿದ ಸಂಯಮ, ಶ್ರಮ ಫಲ ನೀಡಿದೆ. ಅನಿವಾರ್ಯ ಕಾರಣಗಳಿಂದ, ಏಕಾಏಕಿ ಮೈಸೂರಿಗೆ ರಾಜ್ಯದ ಮೂಲೆ ಮೂಲೆಗಳಿಂದ, ಅಕ್ಕ‌ಪಕ್ಕದ ರಾಜ್ಯಗಳಿಂದ ಬಂದಿಳಿದ ವಾಹನಗಳ ಪ್ರವಾಹ ನಿಭಾಯಿಸಲು ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕಾಯಿತು. ಇದರಿಂದ ಸ್ವಲ್ಪಮಟ್ಟದ ಕಿರಿಕಿರಿ ಮೈಸೂರಿಗರಿಗೆ ಆಗಿದ್ದರೂ, ಒಟ್ಟಾರೆ ಜಿಲ್ಲಾ ಪೊಲೀಸ್ ಮತ್ತು ನಗರ ಪೊಲೀಸ್ ಕಮಿಷನರೇಟ್ ಶ್ರಮ ಮತ್ತು ವೃತ್ತಿಪರತೆಗೆ ನಾವು ಮೆಚ್ಚುಗೆ ಸೂಚಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ದಸರಾ ಜಂಬೂ ಸವಾರಿಯಲ್ಲಿ ನೆರೆದಿದ್ದ ಜನಸ್ತೋಮ (ETV Bharat)

ತುತ್ತೂರಿ, ಪೀಪಿ ನಿಷೇಧ ಒಳ್ಳೆಯ ಕ್ರಮ:ಹಾಗೆಯೇ, ಶುಕ್ರವಾರ ಸಂಜೆ ಅಂಬಾರಿ ಬಸ್​ನಲ್ಲಿ ನಗರ ಪ್ರದಕ್ಷಿಣೆ ಹೊರಟು ದೀಪಾಲಂಕಾರ ವೀಕ್ಷಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಭಿನ್ನ ಅನ್ನಿಸಿತು.‌ ಮತ್ತೊಬ್ಬರ ಸಂತೋಷಕ್ಕೆ ಘಾಸಿ ಮಾಡುವ ಹುಡುಗಾಟದ ತುತ್ತೂರಿ, ಪೀಪಿಯನ್ನು ಈ ಬಾರಿ ಪೊಲೀಸರು ನಿಷೇಧಿಸಿದ್ದು ಒಳ್ಳೆಯದಾಯಿತು ಎನ್ನುವ ಅಭಿಪ್ರಾಯಗಳನ್ನೂ ನಗರ ಪ್ರದಕ್ಷಿಣೆ ವೇಳೆ ಹಲವರು ವ್ಯಕ್ತಪಡಿಸಿದರು. ರಾಜ್ಯದ, ಹೊರ ರಾಜ್ಯದ, ವಿದೇಶಿಯರಿಗೆ ಅಚ್ಚುಕಟ್ಟಾದ ವಸತಿ, ಆತಿಥ್ಯ ನೀಡಿ ಮೈಸೂರಿನ, ರಾಜ್ಯದ ಘನತೆ ಹೆಚ್ಚಿಸಿದ ಹೋಟೆಲ್ ಉದ್ಯಮ ಮತ್ತು ಊಟೋಪಚಾರ, ಸಂಜೆಯ ಕುರುಕ್ ತಿಂಡಿಯವರಿಗೆಲ್ಲಾ ದಸರಾ ಸಂಭ್ರಮ ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿ:ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ; 5ನೇ ಬಾರಿಗೆ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

ABOUT THE AUTHOR

...view details