ಕರ್ನಾಟಕ

karnataka

ಸಿಗರೇಟ್ ಹೆಚ್ಚು ಸೇದಿದರೆ ಆಯಸ್ಸು ಕಡಿಮೆಯಾಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ: ಸಿಎಂ ಸಿದ್ದರಾಮಯ್ಯ - CM SIDDARAMAIAH

By ETV Bharat Karnataka Team

Published : Jul 1, 2024, 5:30 PM IST

ಸಿಗರೇಟ್ ಆರೋಗ್ಯಕ್ಕೆ ಮಾರಕ, ಕ್ಯಾನ್ಸರ್ ಬರುತ್ತದೆ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಒಂದು ಕಾಲದಲ್ಲಿ ನಾನು ಸಿಗರೇಟ್ ಹೆಚ್ಚು ಸೇದುತ್ತಿದ್ದೆ. ಸಿಗರೇಟ್ ಹೆಚ್ಚು ಸೇದುವುದರಿಂದ ಆಯಸ್ಸು ಕಡಿಮೆ ಆಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು ಆಯೋಜಿಸಿದ್ದ “ರಾಷ್ಟ್ರೀಯ ವೈದ್ಯರ ದಿನಾಚರಣೆ”ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿಗರೇಟ್ ಆರೋಗ್ಯಕ್ಕೆ ಮಾರಕ, ಕ್ಯಾನ್ಸರ್ ಬರುತ್ತದೆ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ (ETV Bharat)

ಹಿಂದೆ ತಮಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಹಾರ್ಟ್ ಸಮಸ್ಯೆ ಬಂತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದ ಸಿಎಂ, ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಳ್ಳಿ, ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ, ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಾಧಕರಿಗೆ ಪ್ರಶಸ್ತಿ ಪ್ರದಾನ (ETV Bharat)

ಕೊರೊನಾ ಸಂದರ್ಭದಲ್ಲಿ ವೈದ್ಯರ ಸೇವೆ ಮರೆಯಲಾಗದು:ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೊನಾ ಸಂದರ್ಭದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ. ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ ಎಂದರು.

ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು: ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು. ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿದ್ದು, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಿಎಂ (ETV Bharat)

ಇದೇ ವೇಳೆ ಜೀವನ ಸಾಧನೆ ಹಾಗೂ ಇತರೆ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಾಸಕ ಡಾ. ಎಂ.ಟಿ. ಶ್ರೀನಿವಾಸ್, ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ವೈದ್ಯರ ಸಂಘದ ಅಧ್ಯಕ್ಷರು ಡಾ ವಿವೇಕ್ ದೊರೆ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಬಹಿರಂಗ ಹೇಳಿಕೆ ನೀಡುತ್ತಿರುವವರಿಗೆ ಶೋಕಾಸ್ ನೋಟಿಸ್​ ಜಾರಿ: ಡಿಕೆಶಿಯಿಂದ ಮತ್ತೊಮ್ಮೆ ವಾರ್ನಿಂಗ್​ - D K Shivakumar warning

ABOUT THE AUTHOR

...view details