ಕರ್ನಾಟಕ

karnataka

ETV Bharat / state

ಪೊಲೀಸ್ ಸಿಬ್ಬಂದಿ ಹಿತರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ಧರಾಮಯ್ಯ

ಸಮಾಜಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗಾಗಿ 2025ರಲ್ಲಿ 10 ಸಾವಿರ ವಸತಿ ನಿರ್ಮಾಣಕ್ಕೆ ಮುಂದಾಗಲಾಗಿದ್ದು, ಇದಕ್ಕಾಗಿ 2000 ಕೋಟಿ ರೂ ಮೀಸಲಿಡಲಾಗಿದೆ.

By ETV Bharat Karnataka Team

Published : 6 hours ago

CM Siddaramaiah Says Government is committed to protect the welfare of police personnel
ಪೊಲೀಸ್​ ಸಂಸ್ಮರಣಾ ದಿನದಲ್ಲಿ ಸಿಎಂ ಮತ್ತು ಗೃಹ ಸಚಿವರು (ಈಟಿವಿ ಭಾರತ್​)

ಬೆಂಗಳೂರು: ಪೊಲೀಸರ ಮುಕ್ತ ಹಾಗೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪೊಲೀಸ್ ಸಂಸ್ಮರಣಾ ದಿನವಾದ ಇಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಣೆ ಸೇರಿದಂತೆ ಸಮಾಜದ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದರು.

ಸಮಾಜಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗಾಗಿ 2025ರಲ್ಲಿ 10 ಸಾವಿರ ವಸತಿ ನಿರ್ಮಾಣಕ್ಕೆ ಮುಂದಾಗಲಾಗಿದ್ದು, ಇದಕ್ಕಾಗಿ 2000 ಕೋಟಿ ರೂ ಮೀಸಲಿಡಲಾಗಿದೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಸಿಬ್ಬಂದಿಗಳ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಪೊಲೀಸ್​ ಸಂಸ್ಮರಣಾ ದಿನದಲ್ಲಿ ಸಿಎಂ ಮತ್ತು ಗೃಹ ಸಚಿವರು (ಈಟಿವಿ ಭಾರತ್​​)

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಅವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಆ ಕುಟುಂಬದವರ ದುಃಖದಲ್ಲಿ ಭಾಗಿಯಾಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಕರ್ತವ್ಯದಲ್ಲಿದ್ದಾಗಲೇ ಇವರೆಲ್ಲಾ ಹುತಾತ್ಮರಾಗಿದ್ದಾರೆ. ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ ಪಾತ್ರ ಹಿರಿದು. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಸದಾ ಇರುತ್ತದೆ ಎಂದರು.

ಪೊಲೀಸ್​ ಸಂಸ್ಮರಣಾ ದಿನ (ಈಟಿವಿ ಭಾರತ್​)

ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯಕ್ಷಗಾನ 'ಹಾಸ್ಯರಾಜ' ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ABOUT THE AUTHOR

...view details