ಕರ್ನಾಟಕ

karnataka

By ETV Bharat Karnataka Team

Published : Aug 26, 2024, 6:35 PM IST

ETV Bharat / state

ನಾನು ಮುಖ್ಯಮಂತ್ರಿ ಆಗಿರೋದು ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ - CM Siddaramaiah

ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ವಿರೋಧಿಗಳ ಕುರಿತು ಮಾತನಾಡಿ, ಹಿಂದುಳಿದ ವರ್ಗದ ನಾನು ಸಿಎಂ ಆಗಿರುವುದು ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಶೌರ್ಯ ಮತ್ತು ಆತನಿಗೆ ಮೋಸ ಮಾಡಿದವರ ವಿರುದ್ಧ ಹರಿಹಾಯ್ದರು.

CM Siddaramaiah
ಸಿಎಂ ಸಿದ್ದರಾಮಯ್ಯ (CM X Post)

ನಾನು ಮುಖ್ಯಮಂತ್ರಿ ಆಗಿರೋದು ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ (ETV Bharat)

ಬೆಳಗಾವಿ :ಸಂಗೊಳ್ಳಿ ರಾಯಣ್ಣನನ್ನು ನಮ್ಮ ಕಡೆಯವರೇ ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಅದೇ ರೀತಿ ಹಿಂದುಳಿದ ವರ್ಗದ ನಾನು ಮುಖ್ಯಮಂತ್ರಿ ಆಗಿರೋದು ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ವಿರೋಧಿಗಳ ವಿರುದ್ಧ ಗುಡುಗಿದರು.

ಬೆಳಗಾವಿ ಜಿಲ್ಲೆಯ ಕೌಜಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಹಾಗೂ ಕಲ್ಲಿನ ಕಿರು ಕೋಟೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ವೇದಿಕೆ ಮೇಲಿದ್ದ ಬಾಲಚಂದ್ರ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ಬಾಲಚಂದ್ರ ಯಾವಾಗಲೂ ನಮ್ಮ ಪರ. ಆದರೆ, ಅವರ ಸಹಪಾಠಿಗಳು ನನ್ನ ವಿರುದ್ಧ. ಹೇಗಾದರೂ ಮಾಡಿ ಸಿದ್ದರಾಮಯ್ಯನನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ ಎಂದರು.

ಆದರೆ, ಅದು ಎಂದಿಗೂ ಸಾಧ್ಯವಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ. ಎಲ್ಲಿಯವರೆಗೆ ನಿಮ್ಮ ಆಶೀರ್ವಾದ ಇರುತ್ತದೆಯೋ, ಅಲ್ಲಿಯವರೆಗೂ ನನ್ನ ಅಧಿಕಾರದಿಂದ ಕೆಳಗಿಸಲು ಯಾರ ಕೈಯಿಂದಲೂ ಸಾಧ್ಯವಿಲ್ಲ. ಒಬ್ಬ ಹಿಂದುಳಿದವ ಮುಖ್ಯಮಂತ್ರಿ ಆಗಿದ್ದಾನೆ ಎನ್ನುವುದನ್ನು ಇವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಅದೇ ರೀತಿ ರಾಯಣ್ಣನನ್ನು ಮೋಸದಿಂದ ಹಿಡಿದಿದ್ದರು ಎಂದು ತಮ್ಮ ರಾಜಕೀಯ ವಿರೋಧಿಗಳಿಗೆ ತಿರುಗೇಟು ಕೊಟ್ಟರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋಟೆ (CM X Post)

ವಿವಿಧ ಗ್ರಾಮಗಳಲ್ಲಿ ಏಕಕಾಲಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಲ್ಕು ಪ್ರತಿಮೆಗಳನ್ನು ಅನಾವರಣಗೊಳಿಸುತ್ತಿರುವುದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ಕಿತ್ತೂರು ಸಂಸ್ಥಾನದಲ್ಲಿ ಸೈನಿಕನಾಗಿ, ರಾಣಿ ಚನ್ನಮ್ಮನ ಬಲಗೈ ಬಂಟನಾಗಿ ಕಿತ್ತೂರು ಸಂಸ್ಥಾನದ ಉಳಿವಿಗೆ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ಚೇತನ. ಅತ್ಯಂತ ಪರಾಕ್ರಮಿ ಮತ್ತು ಧೈರ್ಯಶಾಲಿ ಯೋಧನಾಗಿದ್ದ ಎಂದು ಬಣ್ಣಿಸಿದರು.

ಕಿತ್ತೂರು ಸಂಸ್ಥಾನ ಬ್ರಿಟಿಷರ ವಿರುದ್ಧ ಮೊದಲ ಯುದ್ಧದಲ್ಲಿ ಜಯ ಗಳಿಸಿತ್ತು. ಬಳಿಕ ನಮ್ಮವರ ಕುತಂತ್ರದಿಂದ ಎರಡನೇ ಬಾರಿ ಕಿತ್ತೂರಿಗೆ ಸೋಲಾಗುತ್ತದೆ. ಸೋಲಿನ ಬಳಿಕ ರಾಣಿ ಚನ್ನಮ್ಮ ಅವರನ್ನು ಬ್ರಿಟಿಷರು ಸೆರೆವಾಸದಲ್ಲಿ ಇಡುತ್ತಾರೆ. ಆದರೆ ಅದಕ್ಕೆ ಬಗ್ಗದೆ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಏಕಾಂಗಿ ಹೋರಾಟವನ್ನು ಮುಂದುವರೆಸುತ್ತಾರೆ. ಗೆರಿಲ್ಲಾ ಯುದ್ಧ ತಂತ್ರದ ಮೂಲಕ ಹೋರಾಡುತ್ತಾರೆ. ರಾಯಣ್ಣ ಮಹಾನ್ ದೇಶಪ್ರೇಮಿ. ಆತನ ದೇಶಪ್ರೇಮ ನಮ್ಮೆಲ್ಲರಿಗೂ ಪ್ರೇರಣಾದಾಯಕ ಎಂದು ಸಿಎಂ ಹೇಳಿದರು.

ಅವರ ಹೆಸರು ಸದಾ ನಮ್ಮೊಂದಿಗೆ ಇರಬೇಕು. ಈ ನಿಟ್ಟಿನಲ್ಲಿ ರಾಯಣ್ಣನ ಹುಟ್ಟೂರು ಸಂಗೊಳ್ಳಿಯಲ್ಲಿ ಸೈನಿಕ ವಸತಿ ಶಾಲೆ, ಶೌರ್ಯ ವನ ಹಾಗೂ ಸಮಾಧಿ ಸ್ಥಳ ನಂದಗಡದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಈ ಮೂಲಕ ರಾಯಣ್ಣನ ಶೌರ್ಯ, ಸಾಹಸ ಚಿರಸ್ಥಾಯಿಗೊಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ವೇಳೆ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಡಾ. ರಾಜೇಂದ್ರ ಸಣ್ಣಕ್ಕಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ನೋಡಲು ಕಿಕ್ಕಿರಿದು ಸೇರಿದ್ದ ಜನಸ್ತೋಮ: ಮೆರವಣಿಗೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇಷಧಾರಿ, ಡೊಳ್ಳು ಕುಣಿತ, ಜಾಂಝ್ ಪಥಕ್ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಸಾವಿರಾರು ಕುಂಭ ಹೊತ್ತ ಮಹಿಳೆಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನ ಕಿಕ್ಕಿರಿದು ಸೇರಿದ್ದರು. ಮನೆಗಳ ತಾರಸಿ ಮೇಲೆ ನಿಂತು ಜನ ಮುಖ್ಯಮಂತ್ರಿಗಳನ್ನ ನೋಡಿದ್ದು ವಿಶೇಷವಾಗಿತ್ತು.

ಬಾಲಚಂದ್ರ ಕಿವಿಹಿಂಡಿದ ಸಿಎಂ ಸಿದ್ದು : ಕೌಜಲಗಿಯಲ್ಲಿ ವೇದಿಕೆ‌ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಿವಿಯನ್ನು ಸಿಎಂ ಸಿದ್ದರಾಮಯ್ಯ ಹಿಂಡಿದರು. ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿಗಳಿಗೆ ಬಾಲಚಂದ್ರ ಕೈಮುಗಿದು ನಕ್ಕರು.

ಸಿದ್ದರಾಮಯ್ಯಗೆ ಸನ್ಮಾನ:ಕಾರ್ಯಕ್ರಮ ಮುಗಿದ ಬಳಿಕ ಆಯೋಜಕರು ಸಿಎಂ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದಿಸಿ, ಬೆಳ್ಳಿ ಖಡ್ಗ ಮತ್ತು ರಾಯಣ್ಣನ ಮೂರ್ತಿ ನೀಡಿ ಸನ್ಮಾನಿಸಿದರು.

ಇದನ್ನೂ ಓದಿ :ಪೂಜ್ಯ ಸ್ವಾಮೀಜಿಗಳು ನನ್ನ ಬೆಂಬಲಕ್ಕೆ ನಿಂತು, ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ: ಸಿಎಂ - CM Siddaramaiah

ABOUT THE AUTHOR

...view details