ಕರ್ನಾಟಕ

karnataka

ETV Bharat / state

ನಾಡಗೀತೆ ಹಾಡುವ ಕುರಿತ ಗೊಂದಲ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - High Court Judgment - HIGH COURT JUDGMENT

ನಾಡಗೀತೆ ಹಾಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದತಿಗೆ ಕೋರಲಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

ಹೈಕೋರ್ಟ್
ಹೈಕೋರ್ಟ್

By ETV Bharat Karnataka Team

Published : Apr 20, 2024, 9:40 AM IST

ಬೆಂಗಳೂರು :ದಿವಂಗತ ಸಂಗೀತ ಸಂಯೋಜಕ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದತಿಗೆ ಕೋರಲಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌, ತೀರ್ಪು ಅನ್ನು ಕಾಯ್ದಿರಿಸಿದೆ.

ರಾಜ್ಯ ಸರ್ಕಾರ 2023ರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ಸಂಬಂಧ ಅರ್ಜಿದಾರರ ಮತ್ತು ಸರ್ಕಾರದ ಪರ ವಕೀಲರ ವಾದ ಮತ್ತು ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠ ಶುಕ್ರವಾರ ತೀರ್ಪು ಕಾಯ್ದಿರಿಸಿದೆ.

ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎಸ್‌.ಎ. ಅಹ್ಮದ್‌, ರಾಜ್ಯದ ಎಲ್ಲ ಶಾಲೆಗಳಲ್ಲಿ ನಿರ್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ನಿಗದಿಪಡಿಸಲು ಸಂವಿಧಾನದ ಪರಿಚ್ಛೇದ 162 ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಹಾಗೂ ಹಕ್ಕು ಇದೆ. ಅದೇ ರೀತಿ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್‌ 133ರ ಅಡಿ ಇಂತಹದೊಂದು ಆದೇಶ ಮಾಡಲು ಸರ್ಕಾರ ಅಧಿಕಾರ ಹೊಂದಿದೆ. ಅದರಂತೆ ನಾಡಗೀತೆ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಆದೇಶ ಕಾನೂನುಬದ್ಧವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.

ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಜರಾಗಿ, ನಾಡಗೀತೆ ವಿಚಾರದಲ್ಲಿ ಸರ್ಕಾರ ಕಾರ್ಯಕಾರಿ ಆದೇಶ ಹೊರಡಿಸಿದೆ. ಇದು ಸಂವಿಧಾನದ ಪರಿಚ್ಛೇದ 19ರ ಅಡಿ ಪ್ರಜೆಗಳಿಗೆ ದೊರೆತಿರುವ ಮೂಲಭೂತ ಹಕ್ಕುಗಳಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ. ವಾಕ್‌ ಮತ್ತು ಅಭಿವ್ಯಕ್ತಿ ರಾಜ್ಯ ಅಥವಾ ರಾಷ್ಟ್ರಗೀತೆಯನ್ನು ತನ್ನ ಇಚ್ಛೆಯ ರಾಗ/ಧಾಟಿಯಲ್ಲಿ ಹಾಡುವ ಹಕ್ಕು ಸೇರಿದೆ. ಅದನ್ನು ಸರ್ಕಾರ ಮೊಟಕುಗೊಳಿಸಿದ್ದು, ಅದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಅಗತ್ಯವಿದ್ದರೆ ಪ್ರತ್ಯೇಕ ಶಾಸನವ ರೂಪಿಸಿ, ಅದರಡಿ ಇಂತಹ ಆದೇಶ ಮಾಡಬಹುದು. ಶಾಸನದ ಬೆಂಬಲವಿಲ್ಲದೇ ಮೂಲ ಹಕ್ಕು ಮೊಟಕುಗೊಳಿಸಲು ಅಥವಾ ನಿರ್ಬಂಧಿಸಲು ಕಾರ್ಯಕಾರಿ ಅಧಿಕಾರವನ್ನು ಬಳಕೆ ಮಾಡಲಾಗದು. ಆದ್ದರಿಂದ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ವಾದ ಮತ್ತು ಪ್ರತಿವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ:ಅನಿರ್ಬಂಧಿತ ವಿದ್ಯುತ್ ಪೂರೈಕೆ ಕೋರಿದ್ದ ಅರ್ಜಿ: ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಅಂತಿಮ ಅವಕಾಶ - High Court

ABOUT THE AUTHOR

...view details