ಕಲಬುರಗಿ : ಬೀದರ್ ಸಚಿನ್ ಪಾಂಚಾಳ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಖರ್ಗೆ ನಿವಾಸಕ್ಕೆ ಮುತ್ತಿಗೆ ಹೋರಾಟ ಹಮ್ಮಿಕೊಂಡಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ ಟಿ ರವಿ, ಎನ್ ರವಿಕುಮಾರ್ ಸೇರಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯ ನಾಯಕರ ದಂಡೆ ಹರಿದು ಬಂದಿದೆ. ಜಗತ್ ವೃತ್ತದಲ್ಲಿ ಬೃಹತ್ ವೇದಿಕೆಯಲ್ಲಿ ಮಾತನಾಡಿದ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.
ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿಗರಿಗೆ ತಂಪು ಪಾನೀಯ ವ್ಯವಸ್ಥೆ ಮಾಡಿದ ಕೈಪಡೆ (ETV Bharat) ವೇದಿಕೆ ಕಾರ್ಯಕ್ರಮ ನಂತರ ಎಸ್ವಿಪಿ ವೃತ್ತದಿಂದ ನಗರದ ಐವಾನ್ ಶಾಹಿ ಅತಿಥಿ ಗೃಹದ ಬಳಿ ಇರುವ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆ ಹಾಕಲಿದ್ದಾರೆ. ಆದರೆ ಮುತ್ತಿಗೆ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ಡಿ ಅವರ ನೇತೃತ್ವದಲ್ಲಿ 1200 ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನ ಭದ್ರತೆಗೆ ನೇಮಕ ಮಾಡಲಾಗಿದೆ.
ಇತ್ತ ಪ್ರಿಯಾಂಕ್ ಖರ್ಗೆ ಅವರ ಮನೆ ಮುಂದೆ ಕಾಂಗ್ರೆಸ್ ನಾಯಕರು ತಂಪು ಪಾನೀಯ ವ್ಯವಸ್ಥೆ ಮಾಡುವ ಮೂಲಕ ಪ್ರತಿಭಟನೆ ಆಧಾರ ರಹಿತವಾಗಿದೆ ಎಂದು ತಿರುಗೇಟು ನೀಡಿದ್ದಾರೆ. 'ಬಿಜೆಪಿ ಗುಂಡಾಗಿರಿಗೆ ನಮ್ಮ ಗಾಂಧಿಗಿರಿ' ಹೆಸರಿನಲ್ಲಿ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರಿಗೆ ಕೈ ಮುಖಂಡರು, ಎಳನೀರು, ಶುಗರ್ ಲೆಸ್ ಕಾಫಿ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಸ್ತಕ್ಷೇಪ ಇಲ್ಲದಿದ್ದರೂ ಸಹ ಬಿಜೆಪಿ ನಾಯಕರು ರಾಜಕಾರಣ ಮಾಡುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನ ಟಾರ್ಗೆಟ್ ಮಾಡಿಕೊಂಡು ಹೋರಾಟ ಮಾಡುತ್ತಿದ್ದಾರೆ. ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ, ಹೋರಾಟ ಮಾಡುವುದಾದರೆ ಉಸ್ತುವಾರಿ ಸಚಿವರ ಕಚೇರಿಗೆ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಬೇಕು, ಅದನ್ನು ಬಿಟ್ಟು ಮನೆಗೆ ಮುತ್ತಿಗೆ ಹಾಕಲು ಹೊರಟಿರುವುದು ಖಂಡನಾರ್ಹ. ಬಿಜೆಪಿ ಅವರದ್ದು ಗುಂಡಾಗಿರಿ, ನಮ್ಮದು ಗಾಂಧಿಗಿರಿ ಎಂದು ಕಿಡಿಕಾರಿದರು.
ಇದನ್ನೂ ಓದಿ :ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: 13 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ - FIR AGAINST 13 BJP LEADERS