ಬೆಳಗಾವಿ: ಇನ್ನೊಂದು ವಾರದಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ಳಲಾಗಿದ್ದು, ಈಗಾಗಲೇ ಕಾರ್ಯಕರ್ತರಿಗೆ ಸೂಚನೆ ಸಹ ನೀಡಿದ್ದೇವೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಹೈಕಮಾಂಡ್ ಫೈನಲ್ ಮಾಡಲಿದೆ ಎಂದು ಹೇಳಿದರು.
ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವೆ ಹೆಬ್ಬಾಳ್ಕರ್ ಸ್ಪರ್ಧೆ ಮಾಡ್ತಾರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ, ಹೆಬ್ಬಾಳ್ಕರ್ ಅವರ ಹೆಸರು ಇಲ್ಲ. ಅವರ ಪುತ್ರ ಮೃಣಾಲ್ ಹೆಸರು ಸೇರಿದಂತೆ ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರಕ್ಕೆ ತಲಾ ಎರಡು ಹೆಸರು ಫೈನಲ್ ಮಾಡಿ ಹೈಕಮಾಂಡ್ಗೆ ಕಳುಹಿಸಲಾಗಿದೆ. ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂಬುವದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.
ಪುತ್ರಿ ಪ್ರಿಯಾಂಕಾ ಸ್ಪರ್ಧಿಸುವದಿಲ್ಲ:ಪುತ್ರಿ ಪ್ರಿಯಾಂಕಾ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಹಿಂದೆಯೂ ನಾನು ಹೇಳಿದ್ದೇನೆ. ಚಿಕ್ಕೋಡಿ ಕ್ಷೇತ್ರಕ್ಕೆ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದ್ದೇವೆ. ಜಾತಿ ಲೆಕ್ಕಾಚಾರಕ್ಕಿಂತ ಗೆಲ್ಲಲು ಮಾನದಂಡ ಇಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ. ಚಿಕ್ಕೋಡಿಯಿಂದ ಹೊಸಮುಖ ಪ್ರಯೋಗ ಮಾಡಲಾಗುತ್ತಿದೆ. ಹೊಸ ನಾಯಕರು, ಕಾರ್ಯಕರ್ತರು ಬರಬೇಕು. ಅದಕ್ಕೆ ಹೊಸ ಪ್ರಯೋಗ ಮಾಡಲಾಗುತ್ತಿದೆ ಎನ್ನುವ ಮೂಲಕ ಈ ಬಾರಿ ಹೊಸಬರಿಗೆ ಟಿಕೆಟ್ ಎಂಬ ಸುಳಿವನ್ನು ಸಚಿವ ಸತೀಶ್ ಜಾರಕಿಹೊಳಿ ಬಿಟ್ಟುಕೊಟ್ಟರು.