ಕರ್ನಾಟಕ

karnataka

ಬಿಜೆಪಿ ಪಾದಯಾತ್ರೆಗೆ ಕೌಂಟರ್; ಕಾಂಗ್ರೆಸ್​​ನಿಂದ ನೈತಿಕತೆ ಪ್ರಶ್ನೆಯ ಸಭೆ - Congress Counter to BJP

By ETV Bharat Karnataka Team

Published : Aug 2, 2024, 6:59 AM IST

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ತಿರುಗೇಟು ನೀಡಲು ಕಾಂಗ್ರೆಸ್​ ನೈತಿಕತೆ ಪ್ರಶ್ನೆ ಸಭೆ ಕೈಗೊಳ್ಳಲು ನಿರ್ಧರಿಸಿದೆ. ಪಾದಯಾತ್ರೆ ಹೋಗುವ ಕಡೆಗಳಲ್ಲಿ ಒಂದು ದಿನ ಮುಂಚಿತವಾಗಿ ಕಾಂಗ್ರೆಸ್ ಸಭೆ ನಡೆಸಿ, ಬಿಜೆಪಿಗೆ ಪ್ರಶ್ನೆಗಳನ್ನು ಕೇಳಲಿದೆ.

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಬೆಂಗಳೂರು:ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಇಂದಿನಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ನಡೆಸಿ ಕೌಂಟರ್ ಕೊಡಲು ನಿರ್ಧರಿಸಿದೆ. ನೈತಿಕ ಪ್ರಶ್ನೆ ಸಭೆಯಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಬಿಜೆಪಿಗರನ್ನು ಪ್ರಶ್ನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ತುರ್ತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಶುಕ್ರವಾರ ಬಿಡದಿಯಲ್ಲಿ ಬೆಳಗ್ಗೆ 11 ಗಂಟೆಗೆ ನೈತಿಕ ಪ್ರಶ್ನೆ ಸಭೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಹಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲಿ ಒಂದೊಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ. ಆಗಸ್ಟ್ 2ರಂದು ಬಿಡದಿ, 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ರಂದು ಮಂಡ್ಯ, 9ರಂದು ಮೈಸೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದೆ ಎಂದು ಜನರಿಗೆ ತಿಳಿಸುತ್ತೇವೆ. ಪ್ರತಿನಿತ್ಯ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ. ನಾವು ಪಾದಯಾತ್ರೆ ಮಾಡುವುದಿಲ್ಲ. ಸತ್ಯ ಹರಿಶ್ಚಂದ್ರರಂತೆ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಅವರ ಕಾಲದಲ್ಲಿನ ಅಕ್ರಮಗಳ ಬಗ್ಗೆ, ರಾಜ್ಯಕ್ಕೆ ಮಾಡಿರುವ ಅನ್ಯಾಯ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರಾವಧಿಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಮ್ಮ ಬಳಿಯೂ ದಾಖಲೆಗಳಿವೆ. ದಾಖಲೆ ಸಮೇತ ನಾವು ಪ್ರಶ್ನೆ ಮಾಡುತ್ತೇವೆ ಎಂದು ತಿಳಿಸಿದರು.

ಇದು ಎನ್​​ಡಿಎ ಅಲ್ಲ, ಬಿಜೆಪಿ ಪಾದಯಾತ್ರೆ: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗೂ ಜೆಡಿಎಸ್​ನವರು ಈ ವಿಚಾರದಲ್ಲಿ ಅತಂತ್ರವಾಗಿದ್ದರು. ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ಜೆಡಿಎಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥರು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದನ್ನೂ ಗಮನಿಸಿದ್ದೇನೆ. ಬಿಜೆಪಿಯವರು ಕೂಡ ಗೊಂದಲದಲ್ಲಿದ್ದರು. ಈಗ ಎರಡೂ ಪಕ್ಷಗಳ ನಾಯಕರು ಪಾದಯಾತ್ರೆ ಮಾಡುವುದಾಗಿ ಘೋಷಣೆ ಮಾಡಿದ್ದು, ಅದಕ್ಕೂ ಮುನ್ನ ನಾವು ಅವರನ್ನು ಪ್ರಶ್ನೆ ಮಾಡಬೇಕಿದೆ ಎಂದರು.

ಈ ಪಾದಯಾತ್ರೆಯನ್ನು ಎನ್​​ಡಿಎ ಮೈತ್ರಿಕೂಟ ಘೋಷಣೆ ಮಾಡಿಲ್ಲ. ಕೇವಲ ಬಿಜೆಪಿ ಮಾತ್ರ ಘೋಷಣೆ ಮಾಡಿದೆ. ಪಾದಯಾತ್ರೆ ಸಂಬಂಧ ಪೊಲೀಸರು ಹಾಗೂ ಮಾಧ್ಯಮಗಳಿಗೆ ನೀಡಿರುವ ಮಾಹಿತಿಯಲ್ಲಿ ಬಿಜೆಪಿಯ ಪಾದಯಾತ್ರೆ ಎಂದು ಹೇಳಲಾಗಿದೆಯೇ ಹೊರತು, ಜೆಡಿಎಸ್ ಪಕ್ಷದ ಚಿಹ್ನೆ ಸಹ ಇಲ್ಲ. ಪಾದಯಾತ್ರೆಗೆ ಅಪಸ್ವರ ಎತ್ತಿದ್ದ ಜೆಡಿಎಸ್ ನಾಯಕರು ಒಪ್ಪಿದ್ದಾರೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಭಾವಿಸಿದ್ದೆ ಎಂದು ಟೀಕಿಸಿದರು.

ನಾಳೆಯಿಂದ ಮೈತ್ರಿ ಪಾದಯಾತ್ರೆ:ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್​ ಆಗಸ್ಟ್ 3 ರಿಂದ ಬೆಂಗಳೂರಿಂದ ಮೈಸೂರುವರೆಗೆ ಪಾದಯಾತ್ರೆ ಹಮ್ಮಿಕೊಂಡಿವೆ. ನಾಳೆ ನೈಸ್​ ರಸ್ತೆ ಜಂಕ್ಷನ್​ನಿಂದ ಆರಂಭವಾಗುವ ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣ: ರಾಜ್ಯಪಾಲರು ಸಿಎಂಗೆ ಕಳುಹಿಸಿದ ಶೋಕಾಸ್ ನೋಟಿಸ್​ನಲ್ಲಿ ಏನಿದೆ? - Governor Show Cause Notice

ABOUT THE AUTHOR

...view details