ಮೈಸೂರು:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ ಹಾಗೂ ಮಹಿಳೆಯರಿಗೆ ಒಂದು ಲಕ್ಷ ಹಣ ನೀಡುತ್ತೇವೆಂದು ಘೋಷಿಸಿದ್ದು, ದೇಶದಲ್ಲಿ ಕಾಂಗ್ರೆಸ್ 50 ಸೀಟ್ ಸಹ ಗೆಲ್ಲುವುದಿಲ್ಲ. ಇನ್ನು ಪ್ರಣಾಳಿಕೆ ಜಾರಿ ಹೇಗೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನೆ ಮಾಡಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ರಾಜ್ಯಕ್ಕೆ ಮೋದಿ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ನ ಮುಖಂಡರು ಹಾಗೂ ನಲಪಾಡ್ ಚೊಂಬು ಪ್ರದರ್ಶನ ಮಾಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಅದೇ ಸ್ಥಿತಿ ಬರಲಿದೆ. ಫಲಿತಾಂಶದ ನಂತರ ಚೊಂಬು ಹಿಡಿದುಕೊಂಡು ರಸ್ತೆಗೆ ಬರುವ ಸ್ಥಿತಿ ಕಾಂಗ್ರೆಸ್ ಗೆ ಬಂದೊದಗಲಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಕವಡೆಕಾಸಿನ ಕಿಮ್ಮತ್ತು ಇಲ್ಲ. ಅವರು ಏನಾದರೂ ಯಾವುದಾದರೂ ಜಾಹೀರಾತು ಕೊಡಲಿ. ಈ ಬಾರಿ ಕೇಂದ್ರದಲ್ಲಿ ಮೋದಿ ಅವರೇ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.