ಬೆಂಗಳೂರು:''ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಮತ್ತು ವಿಶಿಷ್ಟ ಕೃಷಿಯಾಗಿದೆ. ಈಗೆಲ್ಲಾ ಒಂದು ಪ್ರದೇಶದಲ್ಲಿ ಒಂದೇ ಬೆಳೆಯನ್ನು ಬೆಳೆಯುತ್ತಾರೆ. ಹಿಂದೆಲ್ಲಾ ಒಂದೇ ಕಾಲದಲ್ಲಿ ಒಂದೇ ಪ್ರದೇಶದಲ್ಲಿ ಇಂತಹ ಕನಿಷ್ಠ ಹತ್ತು ಬೆಳೆಗಳನ್ನು ಬೆಳೆಯುತ್ತಿದ್ದರು. ಆಗ ಅಕ್ಕಿ, ಗೋಧಿಗಿಂತಲೂ ನವಣೆ, ಸಜ್ಜೆಯ ಸೇವನೆಯೇ ಹೆಚ್ಚಾಗಿತ್ತು. ಮಳೆ ಕಡಿಮೆಯಾದರೂ, ಬಿಸಿಲು ಹೆಚ್ಚಾದರೂ ಯಾವ ಸಮಯದಲ್ಲಾದರೂ ಸಿರಿಧಾನ್ಯಗಳನ್ನು ಬೆಳೆಯಬಹುದಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಸಿರಿಧಾನ್ಯಗಳನ್ನು ಬೆಳೆಯಲು ಫಲವತ್ತಾದ ಭೂಮಿಯೇ ಬೇಕು ಎಂದಿಲ್ಲ'' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
''ಇಂತಹ ವಿಶಿಷ್ಟ ಗುಣಗಳಿಂದಲೇ ಸಿರಿಧಾನ್ಯಗಳು ರೈತರಿಗೆ ವರದಾನವಾಗಿರುವ ಬೆಳೆಗಳಾಗಿವೆ. ಈ ಧಾನ್ಯಗಳನ್ನು ಬೆಳೆಯಲು ರೈತರು ರಾಸಾಯನಿಕ ಗೊಬ್ಬರವನ್ನು ನೆಚ್ಚಿಕೊಂಡಿಲ್ಲ. ಕೊಟ್ಟಿಗೆ ಗೊಬ್ಬರ, ತರಗೆಲೆ ಗೊಬ್ಬರ ಬಳಸಿ ಸಿರಿಧಾನ್ಯಗಳನ್ನು ಬೆಳೆಯುತ್ತಾರೆ. ಇದರಿಂದ ಹಣ ಉಳಿಯುತ್ತದೆ. ಜೊತೆಗೆ ರಸಗೊಬ್ಬರ ಬಳಸದಿರುವುದರಿಂದ ಕೀಟಗಳ ತೊಂದರೆ ಇರುವುದಿಲ್ಲ. ಹಾಗಾಗಿ ಈ ಬೆಳೆಗಳನ್ನು ಕೀಟಮುಕ್ತ ಬೆಳೆಗಳು ಎನ್ನಬಹುದು. ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸದೇ ಇರುವುದರಿಂದ ಪರಿಸರದ ಮೇಲೂ ಕೆಟ್ಟಪರಿಣಾಮ ಬೀರುವುದಿಲ್ಲ. ಜೊತೆಗೆ ಜನರಿಗೆ ಆಹಾರ ಮತ್ತು ಪಶುಗಳ ಮೇವಿನ ಬೆಳೆಯಾಗಿರುವ ಈ ಧಾನ್ಯಗಳನ್ನು ಬೆಳೆಯಲು ಹೆಚ್ಚಿನ ನೀರು, ಗೊಬ್ಬರ ಮತ್ತು ಆರೈಕೆಯ ಅವಶ್ಯಕತೆ ಇರುವುದಿಲ್ಲ. ಮಳೆಯಾಧಾರಿತವಾಗಿ ಹಾಗೂ ಎಲ್ಲಾ ಹವಾಮಾನಕ್ಕೂ ಹೊಂದಿಕೊಳ್ಳುವ ಬೆಳೆಗಳೆಂದರೆ ಅದು ಸಿರಿಧಾನ್ಯಗಳು'' ಎಂದು ತಿಳಿಸಿದರು.
''ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಚಿವರು ಇತ್ತೀಚೆಗೆ ಸಭೆ ನಡೆಸಿದರು.