ಬೆಂಗಳೂರು : ನಕಲಿ ವೇತನ ದಾಖಲೆಗಳು ಮತ್ತು ಪ್ರಮಾಣ ಪತ್ರಗಳನ್ನು ಸಲ್ಲಿಸಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ (State Bank Of India) 7.17 ಕೋಟಿ ಹಣವನ್ನು ಸಾಲದ ರೂಪದಲ್ಲಿ ಪಡೆದು ದುರ್ಬಳಕೆ ಮಾಡಿರುವ ಪ್ರಕರಣ ಸಂಬಂಧ ಮಾಜಿ ಸಚಿವ ಎಸ್. ಎನ್ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರನ್ನು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದರು.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ವ್ಯವಸ್ಥಾಪಕ ಹಾಗೂ ಒಂದನೇ ಆರೋಪಿ ಎಂಟಿವಿ ರೆಡ್ಡಿ, ಕೃಷ್ಣಯ್ಯ ಶೆಟ್ಟಿ, ಕೆ ಮುನಿರಾಜು, ಕೆ ಶ್ರೀನಿವಾಸ್ ಅವರನ್ನು ದೋಷಿಗಳು ಎಂದು ನ್ಯಾಯಾಲಯ ತೀರ್ಮಾನಿಸಿದೆ. ಐದನೇ ಆರೋಪಿ ಬಿಡ್ಡಪ್ಪ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಕೈಬಿಡಲಾಗಿದೆ. ಶಿಕ್ಷೆ ಪ್ರಮಾಣವನ್ನು ಇನ್ನಷ್ಟೇ ನ್ಯಾಯಾಲಯ ಪ್ರಕಟಿಸಬೇಕಿದ್ದು, ವಿಸ್ತೃತ ಆದೇಶ ಲಭ್ಯವಾಗಬೆಕಾಗಿದೆ.
ಶೆಟ್ಟಿ ಮತ್ತು ಇತರ ಆರೋಪಿಗಳು ಮೆಸರ್ಸ್ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮೂಲಕ ನಕಲಿ ವೇತನ ಸರ್ಟಿಫಿಕೇಟ್ಗಳು, ಹೆಚ್ಎಎಲ್, ಐಟಿಐ, ಬಿಇಎಂಎಲ್, ಬಿಎಂಟಿಸಿ, ಬೆಸ್ಕಾಂ, ಎಡಿಇ, ಕೆಎಸ್ಆರ್ಟಿಸಿ, ಬಿಎಸ್ಎನ್ಎಲ್ ನೋವಾ ಟೆಕ್ನಾಲಜೀಸ್ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ಮಾಡದ ಉದ್ಯೋಗಿಗಳ ಫಾರ್ಮ್ ನಂಬರ್ 16 ಸಲ್ಲಿಸಿ 7.17 ಕೋಟಿ ರೂ.ಗಳ ಮೊತ್ತದ 181 ಗೃಹ ಸಾಲಗಳನ್ನು ಪಡೆದಿದ್ದಾರೆ. ಈ ಪೈಕಿ ವಿವಿಧ ಖಾತೆಗಳ 3.53 ಕೋಟಿ ರೂ.ಗಳ ಸಾಲ ಬಾಕಿ ಉಳಿಸಿಕೊಂಡಿದ್ದು, ಆ ಮೂಲಕ ಕಾನೂನು ಬಾಹಿರವಾಗಿ ಬ್ಯಾಂಕ್ಗೆ ನಷ್ಟ ಉಂಟು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
ಪ್ರಕರಣ ಸಂಬಂಧ ಬೆಂಗಳೂರಿನ ಕೆ. ಜಿ ರಸ್ತೆಯಲ್ಲಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮುಖ್ಯ ವಿಚಕ್ಷಣಾಧಿಕಾರಿಯು 2008ರ ಜನವರಿಯಲ್ಲಿ ನೀಡಿದ ದೂರು ಆಧರಿಸಿ ಸಿಬಿಐ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.
ಇದನ್ನೂ ಓದಿ :ಲಂಚ ಬೇಡಿಕೆ ಆರೋಪದಲ್ಲಿ ಬಂಧನ ಪ್ರಕರಣ : ಪೊಲೀಸ್ ಇನ್ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು - COURT GRANTED BAIL TO POLICE