ಕರ್ನಾಟಕ

karnataka

2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಗುರಿ: ಸಿದ್ದರಾಮಯ್ಯ ಆಶಯ - GDP of 1 trillion dollars by 2032

By ETV Bharat Karnataka Team

Published : Jun 20, 2024, 7:30 AM IST

ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೆಂಗಳೂರಿನಲ್ಲಿ ಕರ್ಟನ್​ ರೈಸರ್​ ಕಾರ್ಯಕ್ರಮ ನಡೆಯಿತು. ಇದರಲ್ಲಿ ರಾಜ್ಯ ಸರ್ಕಾರ 2032ರ ಹೊತ್ತಿಗೆ 1 ಟ್ರಿಲಿಯನ್​ ಡಾಲರ್​ ಜಿಡಿಪಿ ಸಾಧಿಸುವ ಗುರಿ ಹೊಂದಿರುವುದಾಗಿ ಸಿಎಂ ತಿಳಿಸಿದ್ದಾರೆ.

ಇನ್ವೆಸ್ಟ್​ ಕರ್ನಾಟಕ 2024
ಇನ್ವೆಸ್ಟ್​ ಕರ್ನಾಟಕ 2024 (ETV Bharat)

ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ವೆಸ್ಟ್​ ಕರ್ನಾಟಕ 2024 (ETV Bharat)

ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಜಾಗತಿಕ ಹೂಡಿಕೆದಾರರ ಸಮಾವೇಶ'ದ ಭಾಗವಾಗಿ ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ ಎಲ್ಲ ಭಾಗಗಳಲ್ಲೂ ಕೈಗಾರಿಕಾ ಕ್ಲಸ್ಟರ್​ಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ. ಮಹಾನಗರಗಳ ಆಚೆಗೂ ಆರ್ಥಿಕ ಪ್ರಗತಿಯನ್ನು ಕೊಂಡೊಯ್ಯಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ ಎಂದು ಅವರು ನುಡಿದರು.

ಇನ್ವೆಸ್ಟ್​ ಕರ್ನಾಟಕ 2024 (ETV Bharat)

ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚು ಹೆಚ್ಚು ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗಸೃಷ್ಟಿ ಎರಡಕ್ಕೂ ನಾವು ಒತ್ತು ಕೊಡುತ್ತಿದ್ದೇವೆ ಎಂದು ಅವರು ವಿವರಿಸಿದರು.

ಇನ್ವೆಸ್ಟ್​ ಕರ್ನಾಟಕ 2024 (ETV Bharat)

ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್​​ಗೆ ಒತ್ತು:ಕಾರ್ಯಕ್ರಮದಲ್ಲಿ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ. ಇದರ ಭಾಗವಾಗಿ 'ಎಸ್ಎಂಇ ಕನೆಕ್ಟ್- 25' ಮತ್ತು 'ವೆಂಚರೈಸ್- 24' ಪರಿಕಲ್ಪನೆಗಳನ್ನು ರೂಪಿಸಲಾಗಿದೆ ಎಂದರು.

ಇನ್ವೆಸ್ಟ್​ ಕರ್ನಾಟಕ 2024 (ETV Bharat)

ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯದ ತಯಾರಿಕಾ ವಲಯದ ಕಾರ್ಯ ಪರಿಸರವನ್ನು ಜಾಗತಿಕ ಮಟ್ಟದ ಉದ್ದಿಮೆಗಳಿಗೆ ತೋರಿಸಲು ನಾಲ್ಕು ರೋಡ್ ಶೋ ನಡೆಸಲಾಗುವುದು. ಅಲ್ಲದೇ, ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಆಹ್ವಾನಿಸಲು ಜೂನ್ 24ರಿಂದ 28ರವರೆಗೆ ಜಪಾನಿನ ಟೋಕಿಯೋ, ನಗೋಯ ಮತ್ತು ಒಸಾಕ ನಗರಗಳಿಗೆ ಹಾಗೂ ಜುಲೈ ಮೊದಲ ವಾರದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್, ಇಂಚೆಯಾನ್ ಮತ್ತು ಜಿಯಾಂಗಿ ನಗರಗಳಿಗೆ ಭೇಟಿ ಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

'ಬೆಳವಣಿಗೆಯ ಹೊಸಪರಿಕಲ್ಪನೆʼ (Reimagining Growth) ಧ್ಯೇಯದಡಿ ನಡೆಯಲಿರುವ ಸಮಾವೇಶದ ಮೂಲಕ ತಯಾರಿಕಾ ವಲಯ, ಮೂಲಸೌಕರ್ಯ ಅಭಿವೃದ್ಧಿ, ಐಟಿ, ಇಂಧನ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಬಂಡವಾಳ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ:ಸೆಮಿಕಂಡಕ್ಟರ್ ಉದ್ಯಮ: ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೂ ಸಬ್ಸಿಡಿ ಕೊಡಲಿ- ಎಂ.ಬಿ.ಪಾಟೀಲ್‌ - M B Patil

ABOUT THE AUTHOR

...view details