ಕರ್ನಾಟಕ

karnataka

ETV Bharat / state

ತೀವ್ರ ಸ್ವರೂಪ ಪಡೆಯುತ್ತಿರುವ ಚಂಡಮಾರುತಗಳು: ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಂಡಮಾರುತಗಳ ಪರಿಣಾಮ ರಾಜ್ಯದ ಮೇಲೂ ಬೀರುವ ಮುನ್ಸೂಚನೆ ಹಿನ್ನೆಲೆಯಲ್ಲಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

By ETV Bharat Karnataka Team

Published : 4 hours ago

Updated : 4 hours ago

ಕರ್ನಾಟಕದಲ್ಲಿ ಮಳೆ ಮುನ್ಸೂಚನೆ
ಕರ್ನಾಟಕದಲ್ಲಿ ಮಳೆ ಮುನ್ಸೂಚನೆ (ETV Bharat)

ಬೆಂಗಳೂರು:ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತಗಳು ತೀವ್ರ ಸ್ವರೂಪ ಪಡೆಯುತ್ತಿರುವ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಅಕ್ಟೋಬರ್ 17 ರಂದು 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಅಲರ್ಟ್: ಪ್ರಮುಖವಾಗಿ ಅಕ್ಟೋಬರ್ 17 ರ ಬೆಳಗ್ಗೆ 8.30 ರಿಂದ ಅಕ್ಟೋಬರ್ 18 ರ ಬೆಳಗ್ಗೆ 8.30 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.

ಅಲ್ಲದೆ ಪ್ರತ್ಯೇಕವಾಗಿ ಇಂದಿನಿಂದ ಮೂರು ದಿನ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಮೊದಲ ಎರಡು ದಿನ ಯೆಲ್ಲೋ ಮತ್ತು ಇನ್ನೊಂದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜನಗರಕ್ಕೆ ಇಂದು ಯೆಲ್ಲೋ, ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ 18ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅಕ್ಟೋಬರ್ 17 ರಂದು ಯೆಲ್ಲೋ ಅಲರ್ಟ್ ಇರಲಿದೆ. ಇನ್ನು ಕೊಡಗು ಜಿಲ್ಲೆಗೆ ಇಂದು, ಅಕ್ಟೋಬರ್ 16 ರಂದು ಯೆಲ್ಲೋ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದಂತೆ ಹಾವೇರಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಅಕ್ಟೋಬರ್ 16 ಮತ್ತು 17 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಳಿದ ಹಲವು ಕರಾವಳಿ, ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಒಂದೆರಡು ದಿನಗಳ ಕಾಲ ನೀಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಚಂಡಮಾರುತದ ಪರಿಚಲನೆಯು ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ಎತ್ತರದಲ್ಲಿದೆ. ಮುಂದಿನ ದಿನಗಳಲ್ಲಿ ನೈಋತ್ಯಕ್ಕೆ ವಾಲಲಿದೆ. ಇದು ಅಕ್ಟೋಬ‌ರ್ 15 ರ ನಂತರ, ಮುಂದಿನ 2 ದಿನದಲ್ಲಿ ಪಶ್ಚಿಮ-ವಾಯುವ್ಯವಾಗಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇನ್ನು ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತ ದಕ್ಷಿಣ ಕೇರಳದಾದ್ಯಂತ ಮತ್ತು ಕೊಮೊರಿನ್ ಪ್ರದೇಶದವರೆಗೆ ಹಾಗೂ ತಮಿಳುನಾಡಿನಲ್ಲಿ ಚಂಡಮಾರುತದ ರೂಪ ಪಡೆದಿದ್ದು, 3.1 ಕಿ.ಮೀ ಮತ್ತು 5.8 ಕಿ.ಮೀ ನಡುವೆ ಸರಾಸರಿ ಸಮುದ್ರ ಮಟ್ಟದಲ್ಲಿ ಮುಂದುವರೆಯುತ್ತಿದೆ. ಚಂಡಮಾರುತಗಳ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಿದೆ. ಕರಾವಳಿಯಲ್ಲಿ ಸಾಮಾನ್ಯವಾಗಿದೆ ಮತ್ತು ಉತ್ತರ ಒಳನಾಡಿನಲ್ಲಿ ಕಡಿಮೆಯಿದೆ. ನಿನ್ನೆಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಚಿಕ್ಕಮಗಳೂರು ಜಿಲ್ಲೆಯ ಯುಗಟಿಯಲ್ಲಿ ಅತೀ ಹೆಚ್ಚು ಮಳೆ (5 ಸೆಂ.ಮೀ) ಸುರಿದಿದೆ - ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ ಎಸ್ ಪಾಟೀಲ್

ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ: ಐಟಿ ಉದ್ಯೋಗಿಗಳಿಗೆ ಅ.18ರವರೆಗೆ ವರ್ಕ್‌ ಫ್ರಂ ಹೋಮ್‌ಗೆ ಸೂಚನೆ

ಇದನ್ನೂ ಓದಿ:50 ವರ್ಷಗಳ ನಂತರ ಸಹರಾ ಮರುಭೂಮಿಯಲ್ಲಿ ಪ್ರವಾಹ! ಬಸವಳಿದ ಬುವಿಗೆ ಮತ್ತೆ ಬಂತು ಜೀವಕಳೆ

Last Updated : 4 hours ago

ABOUT THE AUTHOR

...view details