ಕರ್ನಾಟಕ

karnataka

ದಕ್ಷಿಣ ಕನ್ನಡ: ಪ್ರಕೃತಿ ವಿಕೋಪ ಅನಾಹುತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ - Natural disaster

By ETV Bharat Karnataka Team

Published : May 15, 2024, 9:42 PM IST

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಕುಡಿವ ನೀರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.

Mangalore DC office
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. (ETV Bharat)

ಮಂಗಳೂರು(ದಕ್ಷಿಣ ಕನ್ನಡ):ಪ್ರಕೃತಿ ವಿಕೋಪದಿಂದ ಯಾವ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ನಿಗಾವಹಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೆಸ್ಕಾಂ ಇಲಾಖೆ:ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕುಡಿವ ನೀರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಳೆಯ ಕಾರಣದಿಂದಾಗಿ ಯಾವುದೇ ಸಮಸ್ಯೆಗಳು ಉಂಟಾಗಿದ್ದಲ್ಲಿ ಮೆಸ್ಕಾಂ ಇಲಾಖೆಯು ತ್ವರಿತವಾಗಿ ಕಾರ್ಯ ಪ್ರವೃತ್ತರಾಗಬೇಕು. ವಿದ್ಯುತ್ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು. ವಿದ್ಯುತ್ ಸಮಸ್ಯೆ ಉಂಟಾದ 6 ಗಂಟೆಯ ಒಳಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.

ಕುಡಿವ ನೀರು ಪೂರೈಕೆ:ಕುಡಿಯುವ ನೀರಿನ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಕೆಲವು ಕಡೆಗಳಲ್ಲಿ ಟ್ಯಾಂಕರ್​​ಗಳ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಅನಾವಶ್ಯಕ ಉದ್ದೇಶಗಳಿಗೆ ನೀರು ಪೋಲಾಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕು. ಅಂತವರ ವಿರುದ್ಧ ದಂಡ ವಿಧಿಸಬೇಕು. ಟ್ಯಾಂಕರ್​ಗಳಿಂದ ಪೂರೈಸುತ್ತಿರುವ ನೀರು ಹಾಗೂ ನೀರಿನ ಮೂಲಗಳು ಶುದ್ಧವಾಗಿದೆ ಎಂಬುದನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿಸಲು ಕ್ರಮ ತೆಗೆದುಕೊಳ್ಳುವಂತೆ ಹೇಳಿದರು.

ಮುಂಗಾರು ಪೂರ್ವದಲ್ಲಿಯೇ ಡಂಪಿಂಗ್ ಯಾರ್ಡ್, ಕಸ ವಿಲೇವಾರಿ ಪ್ರದೇಶಗಳನ್ನು ಸ್ವಚ್ಛಗೊಳಿಸಬೇಕು, ಇಂತಹ ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗದಂತೆ ಮುಂಜಾಗ್ರತ ಕ್ರಮ ವಹಿಸಬೇಕು. ಅಧಿಕಾರಿಗಳು ಕೂಡಲೇ ಅಂತಹ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಆರೋಗ್ಯ ಇಲಾಖೆ:ಆರೋಗ್ಯ ಇಲಾಖೆಯು ಮಳೆಯ ಸಂದರ್ಭದಲ್ಲಿ ಬರುವ ಡೆಂಘೀ ಮಲೇರಿಯಾ ಮುಂತಾದ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸುವುದರ ಜೊತೆಗೆ ಮಳೆಯಿಂದ ಹಾನಿ ಪ್ರದೇಶದಲ್ಲಿ ತಮ್ಮ ಚಿಕಿತ್ಸೆ ಒದಗಿಸಲು ನಿಗಾವಹಿಸುವಂತೆ ಹೇಳಿದರು. ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದವರು ಜಂಟಿಯಾಗಿ ಮಾತುಕತೆ ನಡೆಸಿ ಮರದ ರೆಂಬೆ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲಿ ಉಂಟಾಗುವ ಅಪಾಯವನ್ನು ತಡೆಯಲು ಕೂಡಲೇ ರೆಂಬೆಕೊಂಬೆಗಳನ್ನು ಕತ್ತರಿಸಬೇಕು ಎಂದರು.

ಮರ ಬಿದ್ದು ರಸ್ತೆ ಬ್ಲಾಕ್ ಆದ ಸಂದರ್ಭದಲ್ಲಿ ಕೂಡಲೇ ಬದಲಿ ರಸ್ತೆಯ ವ್ಯವಸ್ಥೆಯನ್ನು ಮಾಡಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಅಗ್ನಿಶಾಮಕ ದಳದಿಂದ ಸಿಬ್ಬಂದಿ ನಿಯೋಜಿಸಬೇಕು, ಸಮಸ್ಯೆಗಳು ಉಂಟಾದಲ್ಲಿ ಸ್ಥಳಿಯ ಮಟ್ಟದಲ್ಲಿ ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು. ಸ್ಥಳಿಯವಾಗಿ ಲಭ್ಯವಿರುವ ಜೆಸಿಬಿ, ಹಿಟಾಚಿಗಳ ಮಾಲೀಕರೊಂದಿಗೆ ಸಂಪರ್ಕಿಸಿ ವಿಪತ್ತಿನ ಸಮಯದಲ್ಲಿ ಲಭ್ಯರಿರುವಂತೆ ನೋಡಿಕೊಳ್ಳಬೇಕು ಎಂದರು.

ಚಾರ್ಮಾಡಿ ಘಾಟ್:ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ರಾಷ್ಟ್ರೀಯ ಹೆದ್ದಾರಿಯವರು ಪಟ್ಟಿ ಮಾಡಬೇಕು. ಘಾಟಿ ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾದ ಬಗ್ಗೆ ಗೂಗಲ್ ನ ಮುಖಾಂತರ ಮಾಹಿತಿ ಜನರಿಗೆ ತಲುಪುವ ವ್ಯವಸ್ಥೆ ಆಗಬೇಕು, ರಸ್ತೆ ಕಡಿತ ಉಂಟಾದರೆ ಪರ್ಯಾಯ ರಸ್ತೆಗಳ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಮಳೆಯ ಸಂದರ್ಭದಲ್ಲಿ ಮೀನುಗಾರಿಕೆಗೆ ಹೋಗದಂತೆ ಮೀನುಗಾರರಿಗೆ ಜಾಗೃತ ಕ್ರಮ ಸಭೆಯನ್ನು ನಡೆಸಬೇಕು. ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಮುಂದಾಳತ್ವದಲ್ಲಿ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಿಸಲು ತಂಡಗಳನ್ನು ಸಿದ್ಧಪಡಿಸಬೇಕು. ಕೋಸ್ಟ್ ಗಾರ್ಡ್​​​​​ನ ವತಿಯಿಂದ ಕೂಡ ಸಿಬ್ಬಂದಿಯನ್ನು ಒದಗಿಸಬೇಕು. ಮೀನುಗಾರರ ವಾಟ್ಸ್​ಆ್ಯಪ್​ ಗ್ರೂಪ್​​​ಗಳನ್ನು ರಚಿಸಿ ಮಾಹಿತಿಯನ್ನು ರವಾನಿಸುವ ಕೆಲಸವಾಗಬೇಕು ಎಂದು ಮೀನುಗಾರಿಕಾ ಇಲಾಖೆಗೆ ಸೂಚಿಸಿದರು.

ಪ್ರತಿ ತಾಲೂಕು ಅಧಿಕಾರಿಗಳು ಸಭೆಯನ್ನು ನಡೆಸಿ ಅಗತ್ಯ ಕ್ರಮ ವಹಿಸುವುದರ ಜೊತೆಗೆ ಅಣುಕು ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ಜಿಪಂ ಸಿಇಒ ಡಾ. ಆನಂದ್ ಕೆ, ಎಸ್ಪಿ ರಿಷ್ಯಂತ್ ಸಿಬಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಡಿಸಿಪಿ ಸಿದ್ದಾರ್ಥ್ ಗೋಯಲ್ ಭಾಗವಹಿಸಿದ್ದರು.

ಇದನ್ನೂಓದಿ:ಮಂಗಳೂರು: ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - MDMA drug

ABOUT THE AUTHOR

...view details