ದಾವಣಗೆರೆ:ಬೆಣ್ಣೆ ನಗರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಖಾಡ ರಂಗೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದಾವಣಗೆರೆ ಅಭಿವೃದ್ಧಿ ಬಗ್ಗೆ ಸವಾಲಿಗೆ ಪ್ರತಿ ಸವಾಲ್ ರಾಜಕೀಯ ಶುರುವಾಗಿದೆ. ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ದಾವಣಗೆರೆಗೆ ಏನು ಕೊಡುಗೆ ಕೊಟ್ಟಿದ್ದಾರೆ, ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಸವಾಲು ಹಾಕಿದ್ದಾರೆ.
ಇದೀಗ ಕಾಂಗ್ರೆಸ್ನ ಕಲಿಗಳು ಬಿಜೆಪಿ ಮೇಲೆ ಮುಗಿಬಿದ್ದಿದ್ದಾರೆ. ಕುಂದವಾಡ ಕೆರೆ, ಟಿವಿ ಸ್ಟೇಷನ್ ಕೆರೆ ಕಟ್ಟಿಸಿ ನೀರು ನೀಡಿದ ಜಲದಾತ, ಇಡೀ ದಾವಣಗೆರೆಯನ್ನು ಅಭಿವೃದ್ಧಿ ಪಡಿಸಿದ್ದು ಮಲ್ಲಿಕಾರ್ಜುನ್ ಅವರು ಎಂದು ಕಾಂಗ್ರೆಸ್ನವರು ಕುಟುಕುತ್ತಿದ್ದಾರೆ. ಇದಲ್ಲದೇ ಸವಾಲು ಹಾಕಿದ್ದ ಎಂಎಲ್ಸಿ ರವಿಕುಮಾರ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ ಪ್ರಭಾ ಮಲ್ಲಿಕಾರ್ಜುನ್ ಕೂಡ ತಿರುಗೇಟು ನೀಡಿದ್ದಾರೆ. ದಾವಣಗೆರೆಗೆ ನಿಮ್ಮ ಸಂಸದರ ಕೊಡುಗೆ ಏನೂ ಎಂದು ಪ್ರಶ್ನಿಸಿದ್ದಾರೆ.
ಜಿಎಂ ಸಿದ್ದೇಶ್ವರ್ ಮಾಡಿದ ಅಭಿವೃದ್ಧಿ ಏನು?: ಪ್ರಭಾ ಮಲ್ಲಿಕಾರ್ಜುನ್;ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರು ಹಲವು ಬಾರಿ ಆಯ್ಕೆಯಾಗಿದ್ದಾರೆ, ಇಪ್ಪತ್ತೈದು ವರ್ಷಗಳಿಂದ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.