ಕರ್ನಾಟಕ

karnataka

ರೈತರು, ತುಂಗಭದ್ರಾ ಅಣೆಕಟ್ಟಿನ ಹಿತರಕ್ಷಣೆಗೆ ತಜ್ಞರ ವರದಿ ಆಧರಿಸಿ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ - Tungabhadra Dam

By ETV Bharat Karnataka Team

Published : Aug 11, 2024, 1:56 PM IST

ತುಂಗಭದ್ರಾ ಕ್ರಸ್ಟ್ ಗೇಟ್ ಚೈನ್ ಕಡಿತದ ಬಗ್ಗೆ ಅಣೆಕಟ್ಟಿನ ಹಿತರಕ್ಷಣೆ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

DCM DK SHIVAKUMAR  TUNGABHADRA DAM  Bengaluru
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ (ETV Bharat)

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು:''ರೈತರು ಮತ್ತು ತುಂಗಭದ್ರಾ ಅಣೆಕಟ್ಟಿನ ರಕ್ಷಣೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ'' ಎಂದುಜಲಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಲು ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಅವರು ಮಾತನಾಡಿದರು. ''ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟಿನ ಚೈನ್ ಲಿಂಕ್ ಕಟ್​​​ ಆಗಿದ್ದು, ನೀರು ಬಹಳ ರಭಸವಾಗಿ ಹೋಗುತ್ತಿದೆ. ಇಲಾಖೆಯು ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ತಜ್ಞರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿರುವವರು ಬಹಳ ಹುಷಾರಾಗಿರುವಂತೆ ಸೂಚನೆ ನೀಡಲಾಗಿದೆ'' ಎಂದು ತಿಳಿಸಿದರು.

''ನೀರು ಬಿಡುಗಡೆ ಮಾಡದೇ ಕ್ರಸ್ಟ್ ಗೇಟ್ ಚೈನ್ ಲಿಂಕ್​ ದುರಸ್ತಿ ಮಾಡಲಾಗುವುದಿಲ್ಲ ಎಂಬ ಅಭಿಪ್ರಾಯ ಇದೆ. ತಜ್ಞರ ಸಮಿತಿ ಏನು ಶಿಫಾರಸು ಮಾಡುತ್ತೆದೆಯೋ, ಅದರ ಪ್ರಕಾರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಮುಂಜಾಗ್ರತಾ ಕ್ರಮ ತೆಗದುಕೊಂಡಿದ್ದೇವೆ. ಸದ್ಯ ಜಲಾಶಯದ ಎಲ್ಲಾ ಗೇಟ್ ತೆರದಿದ್ದೇವೆ. ಸದ್ಯ 60 ಟಿಎಂಸಿಯಷ್ಟು ನೀರು ಇದೆ. ಇದು ಅತಿ ದೊಡ್ಡ ಅಣೆಕಟ್ಟಾಗಿದೆ. ಮೂರು ರಾಜ್ಯಗಳಿಗೆ ಸಂಬಂದ ಪಟ್ಟ ಜಲಾಶಯವಾಗಿದೆ. ಅಣೆಕಟ್ಟಿನ ಸುರಕ್ಷತೆಗೆ ಏನು ಮಾಡಬೇಕು ಅದನ್ನೆಲ್ಲಾ ಮಾಡುತ್ತಿದ್ದೇವೆ. ಈ ಸಂಬಂಧ ಬೇರೆ ಬೇರೆ ಕಡೆಯಿಂದ ತಜ್ಞರನ್ನು ಕರೆಸಿದ್ದೇವೆ'' ಎಂದು ವಿವರಿಸಿದರು.

''ಈಗಾಗಲೇ ನನಗೆ ವರದಿ ಕಳುಹಿಸಿದ್ದಾರೆ. ಈ ವಿಚಾರದಲ್ಲಿ ನಾನು ರೈತರು, ಮಂತ್ರಿಗಳು, ಶಾಸಕರು ಏನು ಹೇಳುತ್ತಾರೆ ಎಂಬುದನ್ನು ಕೇಳಲು ತಯಾರಿಲ್ಲ. ತಜ್ಞರು ಹೇಳುವಂತೆಯೇ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಅಣೆಕಟ್ಟಿಗೆ ತೊಂದರೆ ಆಗಬಾರದು, ರೈತರ ಹಿತದೃಷ್ಟಿಯಿಂದ ಮುಂದೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕಾಗಿದೆ'' ಎಂದರು.

ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ:ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

ಇದನ್ನೂ ಓದಿ:ತುಂಗಭದ್ರಾ ಡ್ಯಾಂ ಗೇಟ್ ಚೈನ್ ಲಿಂಕ್ ಕಟ್: 2 ಲಕ್ಷ ಕ್ಯೂಸೆಕ್​ ನೀರು ಹರಿಬಿಡುವ ಸಾಧ್ಯತೆ - Tungabhadra Dam

ABOUT THE AUTHOR

...view details