ಕರ್ನಾಟಕ

karnataka

ETV Bharat / state

'ರೈತರ ಪುತ್ರರನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಶೇ.20 ಮೀಸಲಾತಿ ಕೊಡಿ' - FEDERATION OF FARMERS ORGANIZATIONS

ಡಿ.23ರಂದು ವಿಶ್ವ ರೈತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕುರುಬೂರು ಶಾಂತಕುಮಾರ್
ರೈತ ಮುಖಂಡ ಕುರುಬೂರು ಶಾಂತಕುಮಾರ್ (ETV Bharat)

By ETV Bharat Karnataka Team

Published : Dec 11, 2024, 9:50 PM IST

ಮೈಸೂರು: "ರೈತರ ಪುತ್ರರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಶೇ.20ರಷ್ಟು ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು" ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಪಿಡಬ್ಲ್ಯೂಡಿ ಅತಿಥಿ ಗೃಹದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಎಪಿಎಂಸಿಗಳಲ್ಲಿ ದಲ್ಲಾಳಿಗಳು ರೈತರಿಂದ ಶೇ.10ರಷ್ಟು ಕಮಿಷನ್ ವಸೂಲಿ ನಿಲ್ಲಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎನ್‌ಡಿಆರ್​ಎಫ್​ ಮಾನದಂಡ ಬದಲಾಗಬೇಕು. ಮಳೆಹಾನಿ, ಬರ ಪರಿಹಾರ, ಪ್ರಕೃತಿ ವಿಕೋಪ ಪರಿಹಾರದ ಮಾನದಂಡ ಬದಲಾಯಿಸಿ ಸಂಪೂರ್ಣ ನಷ್ಟ ಪರಿಹಾರ ನೀಡಬೇಕು" ಎಂದರು.

"ತೆಲಂಗಾಣ ಮಾದರಿಯಲ್ಲಿ 60 ವರ್ಷ ತುಂಬಿದ ರೈತರಿಗೆ 10 ಸಾವಿರ ರೂ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರಾಜ್ಯದಲ್ಲಿ 10 ಲಕ್ಷ ರೈತರು ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ, ಕೂಡಲೇ ಅವರಿಗೆ ಬೇಷರತ್ತಾಗಿ ಸಾಗುವಳಿ ಪತ್ರ ನೀಡಬೇಕು. ಯುವಕರ ಭವಿಷ್ಯ ಹಾಳು ಮಾಡುತ್ತಿರುವ ಆನ್‌ಲೈನ್ ಗೇಮ್, ಜೂಜು ರಾಜ್ಯದಲ್ಲಿ ನಿಷೇಧಿಸಬೇಕು ಎಂಬ ತಮ್ಮ ಹಕ್ಕೊತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು" ಎಂದು ಹೇಳಿದರು.

"ಕೃಷಿ ಸಾಲ ನೀತಿ ಬದಲಾಗಬೇಕು. ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಸಾಲ ನೀಡುವಂತಾಗಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್, ರೈತರ ಕೃಷಿ ಸಾಲ ವಸೂಲಾತಿಗಾಗಿ ರೂಪಿಸಿರುವ ಸರ್ಪ್ರೈಸಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಕೃಷಿ ಪಂಪ್‌ಸೆಟ್​ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು" ಎಂದು ಒತ್ತಾಯಿಸಿದರು.

"ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕು. ಕೃಷಿ ಉಪಕರಣಗಳು, ರಸಗೊಬ್ಬರ, ಕೀಟನಾಶಕಗಳ ಮೇಲೆ ವಿಧಿಸಿರುವ ಜಿಎಸ್‌ಟಿ ಸುಂಕ ರದ್ದಾಗಬೇಕು. ಮಹಿಳಾ ಸಂಘಗಳಿಗೆ ಸಾಲ ನೀಡುವ ಮೈಕ್ರೋಫೈನಾನ್ಸ್ ಕಿರುಕುಳ ನಿಲ್ಲಿಸಲು ಕಠಿಣ ಕಾನೂನು ಜಾರಿಯಾಗಬೇಕು. ಕೃಷಿ ಮೇಳಗಳ ಬದಲು ರೈತರ ನೆನಪಿನ ಹಬ್ಬದ ದಿನಾಚರಣೆಗಳಾಗಬೇಕು" ಎಂದರು.

"ಪರಿಸರ ಸಂರಕ್ಷಿಸಲು ಸಾವಿರಾರು ಮರ ಬೆಳೆಸಿದ ಕಂಪನಿ, ಸಂಸ್ಥೆಗಳಿಗೆ ಶೇ.25ರಷ್ಟು ತೆರಿಗೆ ವಿನಾಯಿತಿ ನೀಡಬೇಕು. ಕಬ್ಬಿನ ಎಫ್​ಆರ್‌ಪಿ ದರ ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡುವ ಮಾನದಂಡ ಜಾರಿಯಾಗಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕಡಿಮೆ ತೋರಿಸುವ ಕಾರ್ಖಾನೆಗಳ ಮೋಸ ತಪ್ಪಿಸಲು ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು" ಎಂದು ಆಗ್ರಹಿಸಿದರು.

"ಡಿ.23ರಂದು ವಿಶ್ವ ರೈತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ:ತುಂಗಾ ಮೇಲ್ದಂಡೆ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಧಿಕಾರಿಗಳ ವಿರುದ್ಧ ರೈತರ ಅಸಮಾಧಾನ

ABOUT THE AUTHOR

...view details