ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ: ಮನೆ ಕುಸಿತ, ವೃದ್ಧ ದಂಪತಿ ರಕ್ಷಣೆ - KARNATAKA RAIN

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮನೆಯೊಂದು ಕುಸಿದಿದ್ದು, ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ: ಮನೆ ಕುಸಿತ, ವೃದ್ಧ ದಂಪತಿ ರಕ್ಷಣೆ
ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ: ಮನೆ ಕುಸಿತ, ವೃದ್ಧ ದಂಪತಿ ರಕ್ಷಣೆ (ETV Bharat)

By ETV Bharat Karnataka Team

Published : Dec 2, 2024, 12:04 PM IST

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದೆ. ಭಾನುವಾರ ಇಡೀ ದಿನ ಮತ್ತು ಇಂದು ಬೆಳಗಿನಿಂದ ಮೋಡ ಕವಿದ ವಾತಾವರಣ ಹಾಗೂ ಆಗಾಗ ಮಳೆಯಾಗುತ್ತಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನ 22.4 ಡಿಗ್ರಿ ದಾಖಲಾಗಿದೆ.

ಇಂದು ಕೂಡ ಕೆ.ಆರ್. ಮಾರುಕಟ್ಟೆ, ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೆಪೇಟೆ, ಕಾಟನ್‌ಪೇಟೆ, ವಿಜಯನಗರ, ಕಾಮಾಕ್ಷಿಪಾಳ್ಯ, ಮೆಜೆಸ್ಟಿಕ್, ಮೈಸೂರು ರಸ್ತೆ, ಬಸವನಗುಡಿ, ಜೆ.ಪಿ. ನಗರ, ಮಲ್ಲೇಶ್ವರ, ಜೆ.ಸಿ. ರಸ್ತೆ, ವಿಶ್ವೇಶ್ವರಯ್ಯಪುರ, ವಿದ್ಯಾಪೀಠ, ಹಗದೂರು, ಯಲಹಂಕ, ಆರ್.ಆ‌ರ್. ನಗರ, ವಿ. ನಾಗೇನಹಳ್ಳಿ, ಪುಲಿಕೇಶಿನಗರ, ಅರಕೆರೆ, ಹೆಚ್‌ಎಸ್‌ಆರ್ ಲೇಔಟ್, ನಾಗಪುರ, ಕಾಟನ್‌ಪೇಟೆ, ಚಾಮರಾಜಪೇಟೆ, ಬಿಟಿಎಂ ಲೇಔಟ್, ಹೂಡಿ ಸೇರಿದಂತೆ ನಗರ ವಿವಿಧೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ಸಿಲ್ಕ್​ ಬೋರ್ಡ್ ಜಂಕ್ಷನ್, ಓಕುಳಿಪುರ ಅಂಡರ್‌ಪಾಸ್, ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಂಭಾಗ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು.

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ: ಮನೆ ಕುಸಿತ, ವೃದ್ಧ ದಂಪತಿ ರಕ್ಷಣೆ (ETV Bharat)

ಹೆಬ್ಬಾಳ ಮೇಲ್ಸೇತುವೆ, ಎಸ್ಟೀಂ ಮಾಲ್‌ನಿಂದ ಮೇಕ್ರಿ ವೃತ್ತದ ಕಡೆಗೆ ಒಳ ಬರುವ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ಹೆಬ್ಬಾಳ ಫ್ಲೈ ಓವರ್ ಮೇಲೆ ವಾಹನ ದಟ್ಟಣೆ ಕಂಡುಬರುತ್ತಿದೆ. ಹಲವು ಕಡೆಗಳಲ್ಲಿ ಮಳೆಯಿಂದ ಸಿಗ್ನಲ್ ಕೆಟ್ಟು ಹೋಗಿರುವ ಕಾರಣ ವಾಹನದಟ್ಟಣೆ ಉಂಟಾಗುತ್ತಿದೆ. ಕೆಲ ರಸ್ತೆಗಳ ಮೇಲೆ ನೀರು ನಿಂತ ಪರಿಣಾಮ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ.

ನಾಳೆ ಭಾರಿ ಮಳೆಯ ಸಾಧ್ಯತೆ:ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮನೆ ಕುಸಿತ:ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಕಳೆದ ರಾತ್ರಿ ಮಳೆಯಿಂದಾಗಿ ಸುಮಾರು 70 ವರ್ಷದ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಜಿಟಿ ಜಿಟ ಮಳೆಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಸ್ಥಳೀಯರು ರಕ್ಷಿಸಿ, ಅವರಿಗೆ ಇರಲು ವ್ಯವಸ್ಥೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರ ರಾಜ್ಯದ ಮೇಲೂ ಪರಿಣಾಮ ಬೀರಿದೆ. ಬೆಂಗಳೂರು, ರಾಮನಗರ, ಮೈಸೂರು, ಚಾಮರಾಜನರ, ಮಂಡ್ಯ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ:ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆ: ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

ABOUT THE AUTHOR

...view details