ಕರ್ನಾಟಕ

karnataka

By ETV Bharat Karnataka Team

Published : 18 hours ago

ETV Bharat / state

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಕೆ.ಬಿ.ಕೋಳಿವಾಡ - Muda Scam

ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಕಾಲಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಚಾರಣೆ ಎದುರಿಸುವುದು ಸೂಕ್ತ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

KB KOLIWAD ON SIDDARAMAIAH
ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ (ETV Bharat)

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುತ್ತಿರುವುದರ ಜೊತೆಗೆ ಇದೀಗ ಸ್ವಪಕ್ಷೀಯರಿಂದಲೂ ಸಿದ್ದರಾಮಯ್ಯ ರಾಜೀನಾಮೆ ಕೂಗು ಕೇಳಿಬಂದಿದೆ.

ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು ಪಕ್ಷದ ಹಿರಿಯ ಮುಖಂಡ ಹಾಗು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಲ್ಲಿಂದು ಮಾತನಾಡಿದ ಅವರು, ತನಿಖೆ ಮುಗಿಯುವ ತನಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ತನಿಖೆಯಲ್ಲಿ ಆರೋಪ ಮುಕ್ತರಾದರೆ ಬಳಿಕ ಅವರು ಮತ್ತೆ ಸಿಎಂ ಆಗಿ ಮುಂದುವರಿಯಲಿ ಎಂದು ಒತ್ತಾಯಿಸಿದ್ದಾರೆ.

ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ಸದ್ಯ ರಾಜೀನಾಮೆ ನೀಡುವುದು ಸೂಕ್ತ. ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ಸಹ ಸಿಎಂ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷಗಳು ರಾಜೀನಾಮೆ ವಿಚಾರ ಬಗ್ಗೆ ಮಾತನಾಡುತ್ತಿವೆ. ಪ್ರಧಾನಿ ಮೋದಿ ಹರಿಯಾಣ ರಾಜ್ಯದಲ್ಲಿ ಚುನಾವಣಾ ಪ್ರಚಾರ ವೇಳೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಅದರಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಒಳಿತು ಎಂದು ಸಲಹೆ ನೀಡಿದರು.

40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದ್ದಂತೆ ಕಳಂಕರಹಿತರಾಗಿದ್ದಾರೆ. ಹೈಕಮಾಂಡ್‌ ಸೇರಿದಂತೆ 136 ಶಾಸಕರ ಸಂಪೂರ್ಣ ಬೆಂಬಲವೂ ಇದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಜೆಡಿಎಸ್‌‍, ಬಿಜೆಪಿಯವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ತಮಗಿದೆ ಎಂದರು.

ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯ ಇದ್ದರೂ ಈಗ ಆತ್ಮೀಯರಾಗಿದ್ದೇವೆ. ನನ್ನ ಜೊತೆ ಬೇರೆ ಯಾವ ನಾಯಕರೂ ಇಲ್ಲ. ಇದು ನನ್ನ ವೈಯುಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ, ರಾಜೀನಾಮೆ ಕೇಳುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಸದ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಿ ಆ ಬಳಿಕ ತಪ್ಪಿಲ್ಲ ಅಂದರೆ ಅವರೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಸಿಎಂ ರಾಜೀನಾಮೆಗೆ ಆಗ್ರಹ: ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ, ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ - BJP Protest

ABOUT THE AUTHOR

...view details