ಕರ್ನಾಟಕ

karnataka

ETV Bharat / state

ಶಿರೂರು ಗುಡ್ಡ ಕುಸಿತ: ರಕ್ಷಣಾ ಕಾರ್ಯ ಸ್ಥಗಿತಗೊಳಿಸಿರುವುದಾಗಿ ಹೈಕೋರ್ಟ್​ಗೆ ಸರ್ಕಾರ ಮಾಹಿತಿ - High Court - HIGH COURT

ಶಿರೂರಿನ ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾದವರ ಹುಡುಕಾಟ ಹಾಗೂ ಇತರೆ ರಕ್ಷಣಾ ಕಾರ್ಯ ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ಹೈಕೋರ್ಟ್‌ಗೆ ಇಂದು ಸರ್ಕಾರ ಮಾಹಿತಿ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Aug 21, 2024, 10:08 PM IST

ಬೆಂಗಳೂರು: ಅತಿ ಹೆಚ್ಚು ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿರುವ ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾದವರ ಹುಡುಕಾಟ ಹಾಗೂ ಇತರೆ ರಕ್ಷಣಾ ಕಾರ್ಯ ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. ಘಟನೆ ಸಂಬಂಧ ರಕ್ಷಣಾ ಕಾರ್ಯಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ವಕೀಲ ಸಿ.ಜಿ.ಮಲೈಯಿಲ್ ಹಾಗೂ ಕೆ.ಎಸ್.ಸುಭಾಷ್ ಎಂಬವರು ಹೈಕೋರ್ಟ್​ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಮಾಹಿತಿ ನೀಡಿತು.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದ 11 ಜನರ ಪೈಕಿ 8 ಜನರ ಮೃತದೇಹಗಳನ್ನು ಪತ್ತೆ ಹಚ್ಚಿ ಹೊರತೆಗೆಯಲಾಗಿದ್ದು, ಇನ್ನೂ ಮೂವರು ಪತ್ತೆಯಾಗಬೇಕಿದೆ. ಆದರೆ, ನದಿಯಲ್ಲಿ ನೀರಿನ ಪ್ರಮಾಣ ಹಾಗೂ ರಭಸ ಹೆಚ್ಚಾಗಿರುವುದರ ಜೊತೆಗೆ ಸ್ಥಳೀಯವಾಗಿ ಪ್ರತಿಕೂಲ ಸಂದರ್ಭಗಳು ಎದುರಾಗಿದ್ದರ ಹಿನ್ನೆಲೆಯಲ್ಲಿ ಆಗಸ್ಟ್ 16ರಿಂದ ರಕ್ಷಣಾ ಕಾರ್ಯಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ರಕ್ಷಣಾ ಕಾರ್ಯ ಮುಂದುವರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೇ ಸರ್ಕಾರ ಸ್ಥಳೀಯ ಈಜುಗಾರ ಈಶ್ವರ್ ಮಲ್ಪೆ ನೆರವು ಪಡೆದುಕೊಳ್ಳುತ್ತಿಲ್ಲ, ಘಟನಾ ಸ್ಥಳದ ಬಳಿ ಬರುವುದಕ್ಕೂ ಆಕ್ಷೇಪಿಸಲಾಗುತ್ತಿದೆ, ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಅಲ್ಲಗಳೆದ ಅಡ್ವೊಕೇಟ್ ಜನರಲ್, ಅರ್ಜಿದಾರರ ಪರ ವಕೀಲರು ಒಬ್ಬ ವ್ಯಕ್ತಿಯ ಬಗ್ಗೆೆ ಮಾತನಾಡುತ್ತಿದ್ದಾರೆ. ಆದರೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆಯ ಸಿಬ್ಬಂದಿ ಸೇರಿ 171 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮನುಷ್ಯ ಸಾಧ್ಯ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ, ನದಿಯಲ್ಲಿ ನೀರಿನ ಪ್ರವಾಹ ವೇಗ 2 ನಾಟ್ಸ್ ಇದ್ದರಷ್ಟೇ ರಕ್ಷಣಾ ಕಾರ್ಯ ನಡೆಸಬಹುದು. ಆದರೆ, ಪ್ರವಾಹ ವೇಗ 7 ನಾಟ್ಸ್ ಇದೆ. ಇಂತಹ ಸಂದರ್ಭದಲ್ಲಿ ಈಜುಗಾರರ ತಂಡ ಅಥವಾ ಇತರ ರಕ್ಷಣಾ ಸಿಬ್ಬಂದಿಯನ್ನು ನೀರಿಗೆ ಇಳಿಸಿದರೆ ಅವರ ಜೀವವನ್ನು ಅಪಾಯಕ್ಕೆ ದೂಡಿದಂತೆ ಆಗುತ್ತದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಹಾಗೂ ಪುನರ್ವಸತಿ ಕಲ್ಪಿಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

ಇದನ್ನೂ ಓದಿ:ಸಿಎಸ್‌ಬಿ ರಚನೆಗೆ ಕೋರಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - High Court

ABOUT THE AUTHOR

...view details