ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿ (ವ್ಯವಸ್ಥಾಪಕ ನಿರ್ದೇಶಕ) ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗಿನ ಆಡಳಿತ ಮಂಡಳಿ ಚುನಾವಣೆ ಬಾಕಿ ಇದೆ. ಪ್ರಸ್ತುತ ಸಂಘ-ಸಂಸ್ಥೆಗಳ ಕಾಯ್ದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ. ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಚುನಾವಣೆಯನ್ನು ನಡೆಸಲು ವಿಫಲವಾಗಿದೆ ಎಂದು ದೂರುಗಳು ಕೇಳಿ ಬಂದಿದ್ದವು.
ರಾಜ್ಯದಲ್ಲಿ ಸುಮಾರು 4.50 ಲಕ್ಷ ಸರ್ಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಕ ಅನಿವಾರ್ಯವಾಗಿರುತ್ತದೆ ಎಂದು ಹಲವರು ಒತ್ತಾಯಿಸಿದ್ದರು. ಈ ಸಂಬಂಧ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಕೆಲ ಪದಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೃಹತ್ ಸಂಘವಾಗಿದ್ದು, ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಓದಿ:ವೇತನ ಆಯೋಗದ ಶಿಫಾರಸುಗಳಿಗೆ ಸರ್ಕಾರಿ ನೌಕರರ ಸಂಘ ಹರ್ಷ, ಯಥಾವತ್ ಜಾರಿಗೆ ಆಗ್ರಹ