ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಂಗೆ ಸರ್ಕಾರದಿಂದ ಅಗತ್ಯ ಸಹಕಾರ: ದಿನೇಶ್ ಗುಂಡೂರಾವ್

ಹೆಲ್ತ್​​ ಟೂರಿಸಮ್ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಬೇಕಿರುವ ಅಗತ್ಯಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಶನಿವಾರ ಸಮಾಲೋಚನೆ ನಡೆಸಿದರು.

By ETV Bharat Karnataka Team

Published : 8 hours ago

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ನಡೆಸಿದ ಸಭೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ನಡೆಸಿದ ಸಭೆ (ETV Bharat)

ಬೆಂಗಳೂರು:ರಾಜ್ಯದಲ್ಲಿ ಆರೋಗ್ಯ ಇಲಾಖೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ಬೆಂಗಳೂರಿನ ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ಹೆಲ್ತ್ ಟೂರಿಸಮ್​ಗೆ ಉತ್ತೇಜನ ನೀಡಲು ಮುಂದಾಗಿದೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಿನ್ನೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಲ್ತ್​​ ಟೂರಿಸಮ್​ ಬೆಳೆಸಲು ಸರ್ಕಾರದಿಂದ ಆಗಬೇಕಾಗಿರುವ ಕಾರ್ಯಗಳ ಕುರಿತು ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಮಣಿಪಾಲ್ ಆಸ್ಪತ್ರೆ, ನಾರಾಯಣ ಹೃದಯಾಲಯ, ಅಪೋಲೋ ಹೆಲ್ತ್ ಕೇರ್ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರದ ವತಿಯಿಂದ ಅಧಿಕೃತ ಪೊರ್ಟಲ್​ ರಚಿಸಿ, ಆ ಮೂಲಕ ಖಾಸಗಿ ಆಸ್ಪತ್ರೆಗಳ ಗುಣಮಟ್ಟದ ಚಿಕಿತ್ಸೆಗಳ ಕುರಿತು ಸರ್ಕಾರವೇ ಕ್ರೆಡಿಟ್ ಪಾಯಿಂಟ್ಸ್​​ ನೀಡಬಹುದು ಎಂದು ಸಭೆಯಲ್ಲಿ ಹಲವು ಖಾಸಗಿ ವಲಯದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೇ ಪ್ರತಿ ಚಿಕಿತ್ಸೆಗೆ ದರ ಎಷ್ಟು ಹಾಗೂ ಗುಣಮಟ್ಟದ ಬಗ್ಗೆ ಸರ್ಕಾರವೇ ಸರ್ಟಿಫೈ ಮಾಡಲಿ ಎಂಬ ಅಭಿಪ್ರಾಯಗಳೂ ವ್ಯಕ್ತವಾದವು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ನಡೆಸಿದ ಸಭೆ (ETV Bharat)

ಹೆಲ್ತ್​​ ಟೂರಿಸಮ್ ಬಗ್ಗೆ ಹೆಚ್ಚು ಚರ್ಚೆಗಳು ನಡೆಯಲಿ. ಮತ್ತೊಮ್ಮೆ ಸಭೆ ಸೇರಿ ನಿರ್ಣಯಗಳನ್ನು ಕೈಗೊಳ್ಳೋಣ ಎಂದು ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿದ್ದ ಆಹ್ವಾನಿತರಿಗೆ ತಿಳಿಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರಿಗೆ ಜನರು ಬರುತ್ತಾರೆ. ಹೀಗೆ ಬರುವ ಜನರಿಗೆ ಇಲ್ಲಿಯ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳು ಹಾಗೂ ಚಿಕಿತ್ಸೆ ಬಗ್ಗೆ ಭರವಸೆ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳ ಗುಣಮಟ್ಟದ ಚಿಕಿತ್ಸೆ ಕುರಿತು ಸರ್ಕಾರ ಸರ್ಟಿಫೈ ಮಾಡುವ ಕ್ರಮಗಳಾಗಬೇಕು. ಸರ್ಕಾರದಿಂದ ಈ ರೀತಿಯ ಕ್ರಮಗಳನ್ನು ತೆಗೆದುಕೊಂಡಾಗ ಜನರಲ್ಲಿ ವಿಶ್ವಾಸ ಮೂಡುತ್ತದೆ. ಇದರಿಂದ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಬೆಳೆಯುವುದರ ಜೊತೆಗೆ, ಐಟಿ ಸಿಟಿ ಬೆಂಗಳೂರು, ಹೆಲ್ತ್ ಸಿಟಿಯಾಗಿಯೂ ಹೆಸರು ಗಳಿಸಬಹುದು ಎಂದು ಹೇಳಿದರು.

ಕೆಲವು ಗುಣಮಟ್ಟದ ಚಿಕಿತ್ಸೆಗಳನ್ನು ಪಡೆಯಲು ಮಾತ್ರ ಜನರು ದೊಡ್ಡ ದೊಡ್ಡ ಆಸ್ಪತ್ರೆಗಳಿಗೆ ಬರುತ್ತಾರೆ. ಬೆಂಗಳೂರಿನಲ್ಲಿ ಉತ್ತಮ ಆಸ್ಪತ್ರೆಗಳಿವೆ. ಇಂದು ವಿದೇಶಗಳಲ್ಲಿ ತಜ್ಞ ವೈದ್ಯರ ಸಮಯಕ್ಕಾಗಿ ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಮೂಲಕ ವಿದೇಶಿಗರನ್ನು ಹೆಚ್ಚು ಆಕರ್ಷಿಸಬಹುದು. ಅಲ್ಲದೇ ಆರೋಗ್ಯ ಸೇವೆಗಳಿಗೆ ಬೆಂಗಳೂರಿಗೆ ಬರುವ ಜನರು ರಾಜ್ಯದ ಇತರ ಪ್ರವಾಸ ಸ್ಥಳಗಳಿಗೂ ಭೇಟಿ ನೀಡುತ್ತಾರೆ. ಇದರಿಂದ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ:ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳ ಯಶಸ್ವಿ: ಪ್ರಮಾಣಪತ್ರ ವಿತರಿಸಿದ ಹೆಚ್​ಡಿಕೆ

ABOUT THE AUTHOR

...view details