ಕರ್ನಾಟಕ

karnataka

ETV Bharat / state

ನ.1ರಂದು ಬೆಳಗಾವಿಯಲ್ಲಿ ಅದ್ಧೂರಿ‌ ರಾಜ್ಯೋತ್ಸವ, ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ಬೆಳಗಾವಿಯಲ್ಲಿ ನ.1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

By ETV Bharat Karnataka Team

Published : 4 hours ago

ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸಭೆ
ಬೆಳಗಾವಿ ಜಿ.ಪಂ.ಸಭಾಂಗಣದಲ್ಲಿ ಸಭೆ (ETV Bharat)

ಬೆಳಗಾವಿ:ಪ್ರತೀ ವರ್ಷದಂತೆ ಈ ಬಾರಿಯೂ ನ.1ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು.

ಬೆಳಗಾವಿ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವದು. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ‌, ನಾಡು, ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು. ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ಬೆಳಗಾವಿ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಮೆರವಣಿಗೆ ಮಾರ್ಗದುದ್ದಕ್ಕೂ ಅಳವಡಿಸಬೇಕು ಎಂದು ಹೋರಾಟಗಾರ ಮೆಹಬೂಬ್ ಮಕಾನದಾರ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಈ ಬಾರಿಯ ಮೆರವಣಿಗೆಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು. ರೂಪಕಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ರಾಣಿ ಚನ್ನಮ್ಮನ ಮೂರ್ತಿಗೆ ಆಕಾಶದಿಂದ ಪುಷ್ಪವೃಷ್ಟಿ‌ಗೈಯ್ಯಲು ಪ್ರಯತ್ನಿಸಲಾಗುವದು ಎಂದರು.

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಮನವಿಗೆ‌ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ಜಿ.ಪಂ.ಸಭಾಂಗಣದಲ್ಲಿ ಸಭೆ (ETV Bharat)

ಅಶೋಕ ಚಂದರಗಿ ಹೆಸರು ಶಿಫಾರಸು:ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ ಅವರ ಹೆಸರನ್ನು ಶಿಫಾರಸು ಮಾಡಲಾಗುವುದು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.

ಕನ್ನಡ ಪರ ಹೋರಾಟಗಾರ ಶ್ರಿನಿವಾಸ ತಾಳೂಕರ ಮಾತನಾಡಿ, ಕರ್ನಾಟಕ ಸುವರ್ಣ ಸಂಭ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಕನ್ನಡ ಪರ ಹೋರಾಟಗಾರರಿಗೆ ಸನ್ಮಾನಿಸಬೇಕು. ಅದೇ ರೀತಿ ರಾಜ್ಯೋತ್ಸವದ ಮೆರವಣಿಗೆಯಲ್ಲಿ ವಿವಾದಾತ್ಮಕ ಧ್ವಜಗಳಿಗೆ ಅನುಮತಿ ನೀಡಬಾರದು ಎಂದರು.

ದೀಪಕ ಗುಡಗನಟ್ಟಿ ಮಾತನಾಡಿ, ಕಳೆದ ಬಾರಿಯಂತೆ ಈ ಬಾರಿಯೂ‌ ಚನ್ನಮ್ಮ‌ ವೃತ್ತವನ್ನು ಪುಷ್ಪಾಲಂಕಾರ ಮಾಡಬೇಕು. ರಾಜ್ಯೋತ್ಸವ ವೀಕ್ಷಣೆಗೆ ಬರುವ ಸಾರ್ವಜನಿಕರ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕು. ರೂಪಕ‌ ವಾಹನಗಳಿಗೆ ಗೌರವ ಧನ ನೀಡಲು ಹಾಗೂ ರೂಪಕ‌ ವಾಹನಗಳ ಮೆರವಣಿಗೆಗೆ ಹೆಚ್ಚಿನ‌ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಕನ್ನಡ ಹೋರಾಟಗಾರರಾದ ರಾಜಕುಮಾರ ಟೋಪಣ್ಣವರ, ಮಹದೇವ ತಳವಾರ, ಮಲ್ಲೇಶ ಚೌಗಲೆ, ರಾಜೇಂದ್ರ ಸೊಂಟಕ್ಕಿ, ಸುರೇಶ ಗವನ್ನವರ ಸೇರಿ ವಿವಿಧ ಪದಾಧಿಕಾರಿಗಳು ರಾಜ್ಯೋತ್ಸವ ಆಚರಣೆ ಕುರಿತು ಸಲಹೆಗಳನ್ನು ನೀಡಿದರು.

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ‌ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ ಸೇರಿ ಮತ್ತಿತರರು‌ ಸಭೆಯಲ್ಲಿ ಇದ್ದರು.

ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದೇನು?

ಇದನ್ನೂ ಓದಿ:ಬಡ ವಿದ್ಯಾರ್ಥಿಯ ಕಾಲೇಜು ಫೀಸ್ ಕಟ್ಟಿ ಮಾನವೀಯತೆ ಮೆರೆದ ಕ್ರಿಕೆಟಿಗ ಕೆ.ಎಲ್.ರಾಹುಲ್

ABOUT THE AUTHOR

...view details