ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು: ಕೋರ್ಟ್​ ಆದೇಶದ ಉಲ್ಲಂಘನೆ ಎಂದ ಹೆಚ್​ಡಿಕೆ - H D Kumaraswamy

ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಸಿಎಂ ಅವರ ಪತ್ನಿ ನಿವೇಶನಗಳನ್ನು ಮುಡಾಗೆ ವಾಪಸ್​ ನೀಡಿದ್ದು, ಇದು ನ್ಯಾಯಾಂಗ ನಿಂದನೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Union Minister H D Kumarswamy
ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (ETV Bharat)

ಬೆಂಗಳೂರು: "ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, "ನ್ಯಾಯಾಲಯಗಳ ಆದೇಶ ಉಲ್ಲಂಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ" ಎಂದು ಆರೋಪಿಸಿದರು.

ಮುಡಾ ಆಯುಕ್ತರನ್ನ ಬಂಧಿಸಿ ಎಂದ ಹೆಚ್​ಡಿಕೆ:ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, "ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು. ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇವೆಲ್ಲವನ್ನೂ ಮಾಡುತ್ತಿದ್ದಾರೆ" ಎಂದು ಹೇಳಿದರು.

"ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಐಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಪತ್ರ ನೀಡಿದ್ದರು. ಇದರ ನಂತರ ಎಲ್ಲ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. 14 ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ" ಎಂದು ತಿಳಿಸಿದರು.

ಯಾವ ಆಧಾರದ ಮೇಲೆ ಈ ವಾಪಸ್​​​​​?: "ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯಗಳ ಆದೇಶಗಳಿವೆ. ಹೀಗಿದ್ದೂ ಮುಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ, ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮುಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು" ಎಂದು ಆಗ್ರಹಿಸಿದರು.

"ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್​ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದಿದ್ದಾರೆ. ಅವುಗಳ ಮೌಲ್ಯ ₹62 ಕೋಟಿ. ಇಷ್ಟಕ್ಕೂ ಮುಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ" ಎಂದು ದೂರಿದರು.

ಇದನ್ನೂ ಓದಿ:ಸಿಎಂ ಪತ್ನಿ ಹೆಸರಿನ 14 ನಿವೇಶನಗಳ ಕ್ರಯಪತ್ರ ರದ್ದತಿಗೆ ಮುಡಾ ಆಯುಕ್ತರಿಂದ ಆದೇಶ - Plot Deed Cancel

ABOUT THE AUTHOR

...view details