ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಿಂದ ತಮ್ಮ ಕುಟುಂಬಸ್ಥರಿಗೆ ಅಕ್ರಮವಾಗಿ ಬದಲಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯ ವಿಚಾರಣೆ ನಡೆಸಿ, ಈ ಆದೇಶ ನೀಡಿದ್ದಾರೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಪರಿಶೀಲಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದ್ದಾರೆ.
ಪ್ರಕರಣ ಸಂಬಂಧ ಮೇಲ್ನೋಟಕ್ಕೆ ತನಿಖೆ ಅಗತ್ಯವೆಂದು ಹೈಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ. ಹೀಗಾಗಿ ತನಿಖೆಗೆ ಮುಖ್ಯಮಂತ್ರಿ ಹಿಂಜರಿಯಬಾರದೆಂಬ ಹೈಕೋರ್ಟ್ ತೀರ್ಪಿನ ಅಂಶವನ್ನು ವಿಶೇಷ ನ್ಯಾಯಾಲಯ ಉಲ್ಲೇಖಿಸಿದೆ.
ಮುಡಾದಲ್ಲಿ ತಮ್ಮ ಪತ್ನಿ ಹೆಸರಿಗೆ ಬದಲಿ ನಿವೇಶನ ಹಂಚಿಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಕ್ರಮವನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ರಾಜ್ಯಪಾಲರು ವಿವೇಚನೆ ಬಳಸಿಯೇ ಅನುಮತಿ ನೀಡಿದ್ದ ನಿರ್ಧಾರದಲ್ಲಿ ದೋಷ ಕಂಡು ಬಂದಿಲ್ಲ ಎಂದು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಮಂಗಳವಾರ ಈ ಆದೇಶ ನೀಡಿದೆ. ರಾಜ್ಯಪಾಲರು ಕೈಗೊಂಡಿರುವ ಸ್ವತಂತ್ರ ನಿರ್ಧಾರದಲ್ಲಿ ಯಾವುದೇ ಲೋಪ ಕಂಡು ಬರುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಪ್ರಾಧಿಕಾರ (ಸಕ್ಷಮ ಪ್ರಾಧಿಕಾರ) ಅದರಲ್ಲೂ ರಾಜ್ಯಪಾಲರಂತಹ ಉನ್ನತ ಕಚೇರಿಯು ಕಡತದಲ್ಲಿರುವ ಕಾರಣಗಳನ್ನು ದಾಖಲಿಸಿದರೆ ಸಾಕಾಗುತ್ತದೆ. ಆ ಕಾರಣಗಳು ರಾಜ್ಯಪಾಲರ ಆದೇಶದ ಭಾಗದಲ್ಲಿ ಸಂಕ್ಷಿಪ್ತವಾಗಿದೆ. ಕಾರಣಗಳು ಕಡತದಲ್ಲಿರಬೇಕು. ಮೊದಲ ಬಾರಿಗೆ ಕಾರಣಗಳನ್ನು ಆಕ್ಷೇಪಣೆಗಳ ಮೂಲಕ ಸಾಂವಿಧಾನಿಕ ನ್ಯಾಯಾಲಯದ ಮುಂದೆ ತರಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.
ಇದನ್ನೂ ಓದಿ:ಕೆಸರೆ ಗ್ರಾಮದ ಜಮೀನಿಗೆ ಮೈಸೂರು ನಗರದಲ್ಲಿ ಬದಲಿ ನಿವೇಶನ ನೀಡಿರುವ ಬಗ್ಗೆ ತನಿಖೆ ಅಗತ್ಯ: ಹೈಕೋರ್ಟ್ - MUDA Scam