ಕರ್ನಾಟಕ

karnataka

ಸರಳವಾಸ್ತು ಚಂದ್ರಶೇಖರ​ ಗುರೂಜಿ ಕೊಲೆ ಕೇಸ್‌: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ - Sarala Vastu Guruji Murder Case

By ETV Bharat Karnataka Team

Published : Aug 2, 2024, 10:55 PM IST

ಸರಳವಾಸ್ತು ಗುರೂಜಿ ಕೊಲೆ ಆರೋಪಿಗೆ ಹೈಕೋರ್ಟ್​ ಜಾಮೀನು ನಿರಾಕರಿಸಿದೆ.

high-court
ಹೈಕೋರ್ಟ್ (ETV Bharat)

ಬೆಂಗಳೂರು:ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ​ ಅಂಗಡಿ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಂತೇಶ ಶಿರೂರ್‌ ಎಂಬಾತನಿಗೆ ಹೈಕೋರ್ಟ್ ಇಂದು ಜಾಮೀನು ನಿರಾಕರಿಸಿತು. ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಸ್.ರಾಚಯ್ಯ ಆದೇಶಿಸಿದರು.

ಹಳೆಯ ದ್ವೇಷದಿಂದ ಅರ್ಜಿದಾರ ಆರೋಪಿ ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿರುವ ರೀತಿ ನೋಡಿದರೆ, ಗುರೂಜಿ ಮೇಲೆ ಆರೋಪಿ ಎಷ್ಟು ದ್ವೇಷ ಬೆಳೆಸಿಕೊಂಡಿದ್ದ ಎನ್ನುವುದನ್ನು ಸೂಚಿಸುತ್ತದೆ. ಈ ಬೆಳವಣಿಗೆ ಗುರೂಜಿ ಹತ್ಯೆ ಪೂರ್ವಯೋಜಿತ ಎಂದು ತಿಳಿಯುತ್ತದೆ. ಅರ್ಜಿದಾರ ಮಾರಕಾಸ್ತ್ರಗಳೊಂದಿಗೆ ಗುರೂಜಿಯನ್ನು ಭೇಟಿ ಮಾಡಿ ಚಾಕುವಿನಿಂದ 56 ಬಾರಿ ಇರಿದು ಗಾಯಗೊಳಿಸಿ ಕೊಲೆ ಮಾಡಿದ್ದಾರೆ. ಅರ್ಜಿದಾರನ ಕೃತ್ಯ ಸಮಾಜದಲ್ಲಿ ಸಂಚಲನ ಮೂಡಿಸಿದ್ದಲ್ಲದೇ ದೊಡ್ಡ ಪ್ರಮಾಣದಲ್ಲಿ ಭಯವನ್ನೂ ಸೃಷ್ಟಿಸಿದೆ ಎಂದು ಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ಗುರೂಜಿಯ ಕುಟುಂಬದ ಸದಸ್ಯರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜಾಮೀನು ಅರ್ಜಿ ತೀರ್ಮಾನಿಸುವಾಗ ಆರೋಪಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ಆದರೆ, ವೈಯಕ್ತಿಕ ಸ್ವಾತಂತ್ರ್ಯ ನಿರಂಕುಶವಾಗಿರುವುದಿಲ್ಲ. ಅದನ್ನು ನ್ಯಾಯಯುತವಾದ ಕಾರಣಗಳಿಂದ ನಿರ್ಬಂಧಿಸಬಹುದು. ವ್ಯಕ್ತಿ ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದಾಗ ವೈಯಕ್ತಿಕ ಸ್ವಾತಂತ್ರ್ಯವನ್ನು ನಿರ್ಬಂಧಿಸಬಹುದು.

ಸಮಾಜ ಓರ್ವ ವ್ಯಕ್ತಿಯಿಂದ ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ನಿರೀಕ್ಷಿಸುತ್ತದೆ. ಪ್ರಜೆ ಕಾನೂನು ಪಾಲಿಸಬೇಕಾಗುತ್ತದೆ. ಸಮಾಜದ ನಿಯಮಗಳಿಗೆ ಗೌರವ ತೋರಿಸಬೇಕಾಗುತ್ತದೆ. ಅರ್ಜಿದಾರ ಚಂದ್ರಶೇಖರ ಗುರೂಜಿಯನ್ನು ಕೊಲೆ ಮಾಡಿರುವುದು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಮತ್ತು ದಾಖಲೆಗಳಿಂದ ತಿಳಿದುಬರುವ ಕಾರಣ ಜಾಮೀನು ಪಡೆಯಲು ಮಹಂತೇಶ್ ಅರ್ಹನಾಗಿಲ್ಲ ಎಂದು ಕೋರ್ಟ್‌ ಆದೇಶದಲ್ಲಿ ನ್ಯಾಯಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ:ಕಾರಣಾಂತರಗಳಿಂದ ಸರಳ ವಾಸ್ತು ಸಂಸ್ಥೆಯ ಉದ್ಯೋಗದಿಂದ ಅರ್ಜಿದಾರ ಮಹಂತೇಶ್‌ನನ್ನು ಗುರೂಜಿ ತೆಗೆದುಹಾಕಿದ್ದರು. ಈ ದ್ವೇಷದಿಂದ ಕಾರ್ಯಕ್ರಮವೊಂದಕ್ಕೆ ಹಾಜರಾಗಲು ಹುಬ್ಬಳ್ಳಿಗೆ ಬಂದಿದ್ದ ಗುರೂಜಿಯನ್ನು ಹೋಟೆಲ್ ಪ್ರೆಸಿಡೆಂಟ್​ ಎಂಬಲ್ಲಿ ಭೇಟಿಯಾಗಿದ್ದ ಆರೋಪಿ ಆಶೀರ್ವಾದ ಪಡೆಯುವ ನೆಪದಲ್ಲಿ ಚಾಕುವಿನಿಂದ ಬರ್ಬರವಾಗಿ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಗುರೂಜಿ ಸಾವನ್ನಪ್ಪಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿಯ ವಿದ್ಯಾನಗರ ಠಾಣಾ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ನಂತರ ತನಿಖೆ ನಡೆಸಿ ಕೊಲೆ ಪ್ರಕರಣದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಜಾಮೀನು ಕೋರಿ ಮಹಂತೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ.

ಇದನ್ನೂ ಓದಿ:ಪಿಟಿಸಿಎಲ್ ಕಾಯಿದೆಯಡಿ ಮಂಜೂರಾದ ಜಮೀನನ್ನು ಸೊಸೈಟಿ ಸಾಲಕ್ಕೆ ಜಪ್ತಿ ಮಾಡಲಾಗದು: ಹೈಕೋರ್ಟ್ - High Court

ABOUT THE AUTHOR

...view details