ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಪೂರ್ಣ ಸ್ಥಿತಿಗತಿ ವರದಿ ಸಲ್ಲಿಸಿದಲ್ಲಿ ಎಲ್ಲ ಅಂಶಗಳು ಬೆಳಕಿಗೆ ಬರಲಿವೆ ಎಂದು ಮೌಖಿಕವಾಗಿ ತಿಳಿಸಿರುವ ಹೈಕೋರ್ಟ್ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಕೆಎಂವಿಎಸ್ಟಿಡಿಸಿಎಲ್ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ ಎಫ್ಐಆರ್ ಕುರಿತಂತೆ ತನಿಖೆ ನಡೆಸಿ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಆದೇಶಿಸುವಂತೆ ಕೋರಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಶಾಸಕರಾದ ಅರವಿಂದ್ ಲಿಂಬಾವಳಿ ಮತ್ತು ಕುಮಾರ ಬಂಗಾರಪ್ಪ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ವರದಿ ಸಲ್ಲಿಸಿದ್ದು, ಅಕ್ರಮ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸುಮಾರು 20 ಕೋಟಿ ರೂ.ಗಳು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ. ಅಂದಿನ ಹಣಕಾಸು ಇಲಾಖೆ ಮತ್ತು ಹಣಕಾಸು ಸಚಿವರ ಸಹಮತಿ ಇಲ್ಲದೇ ಇಂಥ ಹಗರಣ ನಡೆಯುವುದಕ್ಕೆ ಅವಕಾಶವಿಲ್ಲ'' ಎಂದು ಪೀಠಕ್ಕೆ ತಿಳಿಸಿದರು.