ಬೆಂಗಳೂರು:ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಕುರಿತಂತೆ ಎಷ್ಟು ಪ್ರಕರಣಗಳಲ್ಲಿ ಈವರೆಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಯಾದಗಿರಿ ಜಿಲ್ಲೆಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ 1ರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಶ್ವಿನಿ ಓಬಳೇಶ್, ರಾಜ್ಯದಲ್ಲಿ ಸುಮಾರು 30 ಸಾವಿರ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ಇದೆ. ಅದರಲ್ಲಿ 10 ಸಾವಿರ ಜಾತಿ ಪ್ರಮಾಣಪತ್ರಗಳನ್ನು ಸರ್ಕಾರದ ವಿಶೇಷ ವಕೀಲರಿಗೆ ಒದಗಿಸಲಾಗಿದೆ ಎಂದು ಜಾತಿ ಪ್ರಮಾಣಪತ್ರಗಳುಳ್ಳ ಚೀಲವನ್ನು ನ್ಯಾಯಪೀಠಕ್ಕೆ ತೋರಿಸಿದರು. ಕಳೆದ ಏಪ್ರಿಲ್ನಲ್ಲಿ ಈ ಜಾತಿ ಪ್ರಮಾಣಪತ್ರಗಳನ್ನು ಕೊಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ. ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರ ವಿಶೇಷ ವಕೀಲರು ಹೇಳುತ್ತಿದ್ದಾರೆ. ಆದರೆ, ನ್ಯಾಯಾಲಯಕ್ಕೆ ದಾಖಲೆ ತೋರಿಸಲು 50-100 ಮಂದಿಗಷ್ಟೇ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಆಕ್ಷೇಪಿಸಿದ ಸರ್ಕಾರದ ವಿಶೇಷ ವಕೀಲ ಸಿ. ಜಗದೀಶ್, ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣಪತ್ರ ತೆಗೆದುಕೊಂಡು ಬಳಿಕ ಪರಿವಾರ ನಾಯಕ ಜಾತಿ ಪ್ರಮಾಣಪತ್ರ ಪಡೆದುಕೊಂಡವರ ವಿರುದ್ಧ ನೋಟಿಸ್ ನೀಡಲಾಗಿದೆ. ಅರ್ಜಿದಾರರು ಜಿಲ್ಲಾಧಿಕಾರಿ ಅಥವಾ ಉಪವಿಭಾಗಾಧಿಕಾರಿ ಮುಂದೆ ಹೋಗಬೇಕು. ಅದು ಬಿಟ್ಟು ನೇರವಾಗಿ ಹೈಕೋರ್ಟ್ಗೆ ಬಂದಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರಗಳ ಬಗ್ಗೆ ಮಾಹಿತಿಗಳಿದ್ದರೆ ಕೊಡಲಿ ಎಂದರು.