ಕರ್ನಾಟಕ

karnataka

ಸಿಎಸ್‌ಬಿ ಜಾರಿ ಮಾಡಿರುವ ರಾಜ್ಯಗಳ ಮಾಹಿತಿ ನೀಡುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ - CBS

By ETV Bharat Karnataka Team

Published : Jul 30, 2024, 8:31 PM IST

ನಾಗರಿಕ ಸೇವಾ ಮಂಡಳಿ ದೇಶದ ಬೇರೆ ಯಾವ ರಾಜ್ಯಗಳಲ್ಲಿ ಜಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು:ನಾಗರಿಕ ಸೇವಕರಾಗಿರುವ ಐಎಎಸ್ ಅಧಿಕಾರಿಗಳು ಒಂದು ನಿರ್ದಿಷ್ಟ ಸ್ಥಳ ಮತ್ತು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ಕನಿಷ್ಠ ಸೇವಾವಧಿ ನಿಗದಿಪಡಿಸುವ ಹಾಗೂ ಕರ್ತವ್ಯ ನಿರ್ವಹಣೆ ವೇಳೆ ಅವರ ಹಿತಕಾಯುವ ಉದ್ದೇಶವಿರುವ 'ನಾಗರಿಕ ಸೇವಾ ಮಂಡಳಿ' (ಸಿಎಸ್‌ಬಿ) ದೇಶದ ಬೇರೆ ಯಾವ ರಾಜ್ಯಗಳಲ್ಲಿ ಅಸ್ತಿತ್ವಕ್ಕೆ ಜಾರಿ ಮಾಡಲಾಗಿದೆ ಎಂಬುದರ ಕುರಿತಂತೆ ಮಾಹಿತಿ ನೀಡಲು ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕದಲ್ಲಿ ನಾಗರಿಕ ಸೇವಾ ಮಂಡಳಿ ರಚಿಸಬೇಕು ಎಂದು ನಾಗರಿಕ ಸೇವಕ ಅಧಿಕಾರಿಗಳ ಕನಿಷ್ಠ ಸೇವಾವಧಿ ನಿಗದಿಪಡಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರು ನಿವಾಸಿ, ಸಾಮಾಜಿಕ ಕಾರ್ಯಕರ್ತ ರಿಷಬ್ ಟ್ರಾಕ್ರೂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠದ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಐಎಎಸ್ ಅಧಿಕಾರಿಗಳು ಮೌಖಿಕ ಸೂಚನೆ, ಆದೇಶ, ಅಭಿಪ್ರಾಯ ಅಥವಾ ಪ್ರಸ್ತಾವನೆ ಆಧರಿಸಿ ಸೇವೆ ಸಲ್ಲಿಸುವಂತಾಗಬಾರದು. ಅಲ್ಲದೇ ಐಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಮೇಲಧಿಕಾರಿಗಳು, ರಾಜಕಾರಣಿಗಳು ಹಾಗೂ ಇತರರ ಕಾನೂನು ಬಾಹಿರ ಹಾಗೂ ನಿರಂಕುಶ ಒತ್ತಡದಿಂದ ರಕ್ಷಿಸಬೇಕು. ಈ ನಿಟ್ಟಿನಲ್ಲಿ ನಾಗರಿಕ ಸೇವಕ ಅಧಿಕಾರಿಗಳಿಗೆ ಕನಿಷ್ಠ ಸೇವಾವಧಿಗೆ ಮಾರ್ಗಸೂಚಿ ನಿಗದಿಪಡಿಸಲು ಕೇಂದ್ರ ಸರ್ಕಾರದಂತೆ ಎಲ್ಲ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ನಾಗರಿಕ ಸೇವಾ ಮಂಡಳಿ (ಸಿಎಸ್‌ಬಿ) ರಚಿಸಬೇಕು ಎಂದು 2013ರಲ್ಲಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ, ಹೈಕೋರ್ಟ್ ಸಹ 2021ರಲ್ಲಿ ಆದೇಶ ನೀಡಿದೆ. ಆದಾಗ್ಯೂ ರಾಜ್ಯದಲ್ಲಿ ಈವರೆಗೆ ನಾಗರಿಕ ಸೇವಾ ಮಂಡಳಿ ರಚನೆ ಆಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ ಆಲಿಸಿದ ನ್ಯಾಯಪೀಠ, ಸುಪ್ರೀಂಕೋರ್ಟ್ ನಿರ್ದೇಶನದಂತೆ ದೇಶದ ಬೇರೆ ಯಾವ ರಾಜ್ಯಗಳಲ್ಲಿ ನಾಗರಿಕ ಸೇವಾ ಮಂಡಳಿ ರಚಿಸಲಾಗಿದೆ ಎಂದು ಪ್ರಶ್ನಿಸಿತು. ಇತ್ತೀಚೆಗೆ ಪಂಜಾಬ್ ರಾಜ್ಯದಲ್ಲಿ ಸಿಎಸ್‌ಬಿ ರಚಿಸಲಾಗಿದೆ. ಉಳಿದ ರಾಜ್ಯಗಳ ಬಗ್ಗೆ ಸದ್ಯ ತಮ್ಮ ಬಳಿ ಮಾಹಿತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಹಾಗಿದ್ದರೆ, ಬೇರೆ ಯಾವ ರಾಜ್ಯಗಳಲ್ಲಿ ಸಿಎಸ್‌ಬಿ ರಚಿಸಲಾಗಿದೆ, ಸದ್ಯದ ವಸ್ತುಸ್ಥಿತಿ ಏನಿದೆ ಎಂಬ ಬಗ್ಗೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಜಡ್ಜ್​ಗಳಿಗೆ ಬೆದರಿಕೆ: ಆರೋಪಿಗಳಿಗೆ ಇಂಗ್ಲಿಷ್​​ ಚಾರ್ಜ್​ಶೀಟ್ ಪ್ರತಿ ನೀಡಲು ಹೈಕೋರ್ಟ್ ಆದೇಶ - Hijab Case

ABOUT THE AUTHOR

...view details