ಕರ್ನಾಟಕ

karnataka

ಗ್ಯಾರಂಟಿ ಯೋಜನೆಗಳಿಂದ ಸಂವಿಧಾನದ 14ನೇ ವಿಧಿ ಉಲ್ಲಂಘನೆ: ಹೈಕೋರ್ಟ್​ನಲ್ಲಿ ವಕೀಲರ ವಾದ - Guarantee Schemes In Karnataka

By ETV Bharat Karnataka Team

Published : 5 hours ago

ಕರ್ನಾಟಕದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳು ಮೂಲಭೂತ ಹಕ್ಕುಗಳು ಮತ್ತು ಸಂವಿಧಾನದ ನಿರ್ದೇಶಕ ತತ್ವಗಳಿಗೆ ವಿರುದ್ಧವಾಗಿವೆ ಎಂದು ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

high court
ಹೈಕೋರ್ಟ್ (ETV Bharat)

ಬೆಂಗಳೂರು: ''ರಾಜ್ಯದಲ್ಲಿ ಮಹಿಳೆಯರಿಗಾಗಿ ಘೋಷಣೆ ಮಾಡಿರುವ ಗ್ಯಾರಂಟಿ‌ ಯೋಜನೆಗಳು ಸಂವಿಧಾನದ ಪರಿಚ್ಛೇದ 14ರ ಉಲ್ಲಂಘನೆ ಮತ್ತು ಪುರುಷರನ್ನು ಅಸಮಾನತೆಯಿಂದ ಕಾಣಲು ಕಾರಣವಾಗಲಿದೆ'' ಎಂದು ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿದಾರರ ಪರ ವಕೀಲರಾದ ಪ್ರಮೀಳಾ ನೇಸರ್ಗಿ ಹೈಕೋರ್ಟ್​​ಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಆಯ್ಕೆ ಏಕೆ ಅಸಿಂಧು - ವಕೀಲರ ವಾದವೇನು?:ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ.ಎಂ.ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠಕ್ಕೆ ವಿವರಿಸಿದರು.

''ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರೆಗೆ ನೀಡಬಹುದಿತ್ತು. ಅದನ್ನು ಎಲ್ಲರಿಗೂ ವಿಸ್ತರಿಸಲಾಗದು. ಇಲ್ಲಿ ಕರ್ನಾಟಕದ ಮತದಾರರನ್ನು ಲಘುವಾಗಿ ಪರಿಗಣಿಸಲಾಗಿದೆ. ಇದು ಸಂವಿಧಾನಬಾಹಿರ'' ಎಂದು ಪೀಠಕ್ಕೆ ತಿಳಿಸಿದರು.

''ವಿಶ್ವದ ಅನೇಕ ದೇಶಗಳು ಅಧಿಕಾರಿಗಳು ಅಥವಾ ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿ ತಲುಪಿವೆ. ಕಾಂಗ್ರೆಸ್‌ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಕೊನೆಗೊಳಿಸದಿದ್ದರೆ, ನಮ್ಮ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ'' ಎಂದು ವಾದ ಮಂಡಿಸಿದರು.

ಸಂವಿಧಾನದ ನಿರ್ದೇಶಕ ತತ್ವಗಳಿಗೆ ವಿರುದ್ಧ:''ಗ್ಯಾರಂಟಿ ಯೋಜನೆಗಳು ಮೂಲಭೂತ ಹಕ್ಕುಗಳು ಮತ್ತು ಸಂವಿಧಾನದ ನಿರ್ದೇಶಕ ತತ್ವಗಳಿಗೆ ವಿರುದ್ಧವಾಗಿವೆ. ಆ ಯೋಜನೆಗಳನ್ನು ಒಳಗೊಂಡ ಪ್ರಣಾಳಿಕೆಯು ನೋಂದಾಯಿತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ (ಐಎನ್‌ಸಿ) ಪ್ರಣಾಳಿಕೆ ಅಲ್ಲ. ಅದು ಕೆಪಿಸಿಸಿಯ ಪ್ರಣಾಳಿಕೆಯಾಗಿದೆ. ಕೆಪಿಸಿಸಿಯು ನೋಂದಾಯಿತ ಪಕ್ಷವಲ್ಲ. ಹೀಗಾಗಿ, ಅದರ ಹೆಸರಿನಲ್ಲಿ ರೂಪಿಸಿರುವ ಪ್ರಣಾಳಿಕೆಯು ಭ್ರಷ್ಟಾಚಾರಕ್ಕೆ ಸಮ. ಸಿದ್ದರಾಮಯ್ಯನವರೇ ಪ್ರಣಾಳಿಕೆ ರೂಪಿಸಿ, ಪ್ರಚಾರ ಮಾಡಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ. ಹೀಗಾಗಿ, ಅವರ ಆಯ್ಕೆ ಅನೂರ್ಜಿತಗೊಳಿಸಬೇಕು'' ಎಂದು ಪೀಠಕ್ಕೆ ತಿಳಿಸಿದರು.

''ಗ್ಯಾರಂಟಿ ಯೋಜನೆಗಳ ಕಾರ್ಡ್‌ಗೆ ಸಹಿ ಮಾಡಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ. ಹೀಗಾಗಿ, ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು. ಕ್ರೋಢೀಕೃತ ನಿಧಿಯನ್ನು ಉಚಿತ ಯೋಜನೆಗೆ ಬಳಸಲಾಗದು. ಅದಕ್ಕೆ ವಿಶೇಷ ಮಸೂದೆಯನ್ನು ಹಣಕಾಸು ಮಸೂದೆಯ ಪ್ರಕಾರ ಅಂಗೀಕರಿಸಬೇಕು. ಹಾಲಿ ಪ್ರಕರಣದಲ್ಲಿ ಯಾವುದೇ ಹಣಕಾಸು ಮಸೂದೆಯನ್ನು ಅಂಗೀಕರಿಸಲಾಗುವುದಿಲ್ಲ, ಇದು ತೆರಿಗೆದಾರರ ಹಣದ ದುರ್ಬಳಕೆಯಾಗಲಿದೆ'' ಎಂದು ವಾದ ಮಂಡಿಸಿದರು.

''ಪ್ರಕರಣದಲ್ಲಿ ಸಿದ್ದರಾಮಯ್ಯ ಅಪರಾಧಿಯಾಗಿದ್ದಾರೆ. ಹೀಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು. ನ್ಯಾಯಾಲಯವು ಉಚಿತ ಯೋಜನೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು. ಪ್ರಣಾಳಿಕೆ ಮತ್ತು ಅದರಲ್ಲಿನ ಅಂಶಗಳನ್ನು ಒಪ್ಪಿದರೆ ಅದನ್ನು ಕೆಪಿಸಿಸಿ ಮಾಡಬಹುದೇ? ಅದು ಭ್ರಷ್ಟಾಚಾರವಾಗುತ್ತದೆಯೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಬೇಕು'' ಎಂದು ಕೋರಿದರು. ವಾದ ಆಲಿಸಿದ ಪೀಠ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ನ್ಯಾಯಾಲಯದ ಕಲಾಪದ ವೇಳೆ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ - High Court Justice Regret

ABOUT THE AUTHOR

...view details