ಕರ್ನಾಟಕ

karnataka

ಲೈಂಗಿಕ ಕಿರುಕುಳ, ಸಂತ್ರಸ್ತೆಗೆ ಬೆದರಿಕೆ ಆರೋಪ: ಸ್ವಾಮೀಜಿ ವಿರುದ್ದದ ಪ್ರಕರಣಕ್ಕೆ ಮಧ್ಯಂತರ ತಡೆ - Bala Manjunatha Swamiji Case

By ETV Bharat Karnataka Team

Published : Jul 3, 2024, 8:22 AM IST

ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧದ ನ್ಯಾಯಾಲಯ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

High Court
ಹೈಕೋರ್ಟ್ (ETV Bharat)

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧದ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿತು.

ಸ್ವಾಮೀಜಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ಸ್ವಾಮೀಜಿ ಪರ ವಕೀಲರು, ಸ್ವಾಮೀಜಿ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧಾರರಹಿತ ಮತ್ತು ಕಾನೂನುಬಾಹಿರ. ಮೇಲ್ನೋಟಕ್ಕೆ ಇದು ದುರುದ್ದೇಶಪೂರಿತ ಮತ್ತು ಸುಳ್ಳು ಅಂಶಗಳಿಂದ ಆವೃತವಾಗಿದೆ. ಸ್ವಾಮೀಜಿಯ ವ್ಯಕ್ತಿತ್ವ ಮತ್ತು ಕೀರ್ತಿಗೆ ಧಕ್ಕೆ ತರುವಂತಿದೆ ಎಂದರು.

ಸ್ವಾಮೀಜಿ ಸಂತ್ರಸ್ತ ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂಬುದನ್ನು ದೂರಿನಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ. ಪ್ರಾಸಿಕ್ಯೂಷನ್ ವಿನಾಕಾರಣ ದೂರಿನ ವ್ಯಾಪ್ತಿಯಿಂದ ಆಚೆಗೆ ಸಲ್ಲದ ಆರೋಪಗಳನ್ನು ಹೊರಿಸುತ್ತಿದೆ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿದರು. ಈ ಅಂಶವನ್ನು ದಾಖಲಿಸಿಕೊಂಡ ಪೀಠ, ವಿಚಾರಣಾ ಕೋರ್ಟ್ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ಹುಲಿಯೂರು ದುರ್ಗ ಮಾಗಡಿ ರಸ್ತೆಯಲ್ಲಿರುವ ಕಾಡು ಶನೈಶ್ಚರ ದೇವಸ್ಥಾನದಲ್ಲಿ ಅರ್ಚಕ ವೃತ್ತಿ ಮಾಡಿಕೊಂಡಿದ್ದ ಮಂಜುನಾಥ ಸ್ವಾಮೀಜಿ, 2016ರಲ್ಲಿ ಹಂಗರಹಳ್ಳಿಯಲ್ಲಿ ವಿದ್ಯಾ ಚೌಡೇಶ್ವರಿ ದೇವಸ್ಥಾನ ಮತ್ತು ಮಠ ನಿರ್ಮಿಸಿ ಖ್ಯಾತಿ ಪಡೆದಿದ್ದಾರೆ. ಇವರ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 7ರಂದು ನೀಡಲಾದ ದೂರಿನ ಅನುಸಾರ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012) ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಹು-ಧಾ ಪೊಲೀಸ್ ಕಮೀಷನರೇಟ್ ವಿಶೇಷ ಕಾರ್ಯಾಚರಣೆ: 248 ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ - Police Special Operation

ಈ ಸಂಬಂಧ ದೂರು ನೀಡಿದ ಬಾಲಕಿಗೆ ಸ್ವಾಮೀಜಿ ಸಾಕ್ಷ್ಯ ಒದಗಿಸದಂತೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ, ಭಾರತೀಯ ದಂಡ ಸಂಹಿತೆ 1860ರ ಕಲಂ 195 ಎ (ಸುಳ್ಳು ಸಾಕ್ಷ್ಯ ನೀಡುವಂತೆ ವ್ಯಕ್ತಿಗೆ ಬೆದರಿಕೆ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 506 (ಕ್ರಿಮಿನಲ್ ಬೆದರಿಕೆ), 34 (ಸಾಮಾನ್ಯ ಉದ್ದೇಶದಿಂದ ಹಲವು ವ್ಯಕ್ತಿಗಳು ಕೂಡಿ ಮಾಡಿದ ಅಪರಾಧ) ಅನುಸಾರ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ:ಹೈ-ಕ ಮೀಸಲಿನ ನೌಕರರನ್ನು ಹೊರಪ್ರದೇಶಕ್ಕೆ ವರ್ಗಾಯಿಸಲು ನಿರ್ಬಂಧವಿಲ್ಲ: ಹೈಕೋರ್ಟ್ - High Court

ABOUT THE AUTHOR

...view details