ಕರ್ನಾಟಕ

karnataka

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ: ಎಫ್‌ಐಆರ್, ವಿಚಾರಣೆಗೆ ಮಧ್ಯಂತರ ತಡೆ - Arun kumar Puthila case

By ETV Bharat Karnataka Team

Published : Sep 10, 2024, 9:22 PM IST

ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್​ಐಆರ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅರುಣ್ ಕುಮಾರ್ ಪುತ್ತಿಲ
ಅರುಣ್ ಕುಮಾರ್ ಪುತ್ತಿಲ (ETV Bharat)

ಬೆಂಗಳೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಈ ಸಂಬಂಧ ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಪ್ರಕರಣ ರದ್ದು ಪಡಿಸುವಂತೆ ಕೋರಿ ಅರುಣ್ ಕುಮಾರ್ ಪುತ್ತಿಲ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೂರುದಾರ ಮಹಿಳೆಗೆ ಪ್ರಸ್ತುತ 47 ವರ್ಷ. ಒಂದು ವರ್ಷದ ಹಿಂದೆ ಅಂದರೆ 2023ರ ಜೂನ್ ತಿಂಗಳಲ್ಲಿ ನಡೆದಿದೆ ಎನ್ನಲಾದ ಘಟನೆ ಸಂಬಂಧ ಈಗ ಅಂದರೆ ಸೆ.2ರಂದು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮ ಕಕ್ಷಿದಾರರ ಗೌರವ ಧಕ್ಕೆ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಆಗಸ್ಟ್​ 28ರಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ಹೊರಡಿಸಿದ ಬಳಿಕ ಅತ್ಯಾಚಾರ, ಲೈಂಗಿಕ ಶೋಷಣೆ ಆರೋಪದ ಎಫ್‌ಐಆರ್ ದಾಖಲಾಗಿದೆ ಎಂದು ವಾದ ಮಂಡಿಸಿದರು.

ಅಲ್ಲಿವರೆಗೆ ಈ ವಿಷಯದ ಪ್ರಸ್ತಾಪವೇ ಇರಲಿಲ್ಲ. ಹಾಗಾಗಿ, ಇದೊಂದು ದುರುದ್ದೇಶ ಪೂರಿತ ಪ್ರಕರಣವಾಗಿದೆ. ಅಲ್ಲದೆ, ದೂರುದಾರರ ನಡವಳಿಕೆ ಅಸಹಜ ಮತ್ತು ಅನುಮಾನಸ್ಪಾದವಾಗಿದೆ. ಮುಖ್ಯವಾಗಿ ದೂರು ದಾಖಲಿಸಲು ಒಂದೂವರೆ ವರ್ಷ ವಿಳಂಬವಾಗಿದೆ. ಆದ್ದರಿಂದ ಪ್ರಕರಣ ರದ್ದು ಪಡಿಸುವಂತೆ ಕೋರಿದರು.

ಪ್ರಕರಣದ ಹಿನ್ನೆಲೆ ಏನು?:ಅರುಣ್ ಕುಮಾರ್ ಪುತ್ತಿಲ ಅವರು 2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ತನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದಾದ ಬಳಿಕ ಅನೇಕ ಕಡೆ ಮುಖಾಮುಖಿ ಭೇಟಿ ಮಾಡಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಹಲವು ರೀತಿಯಲ್ಲಿ ಬೆದರಿಕೆ ಹಾಗೂ ಬ್ಲಾಕ್​ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಅದರಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಅದನ್ನು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮುಂದಿನ ಕ್ರಮಕ್ಕಾಗಿ ಸಲ್ಲಿಸಿದ್ದರು. ಎಫ್‌ಐಆರ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದು ಪಡಿಸುವಂತೆ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಆರೋಪ: ಎಸ್​​ಐಟಿ ತನಿಖೆಯಲ್ಲಿ ಇಲ್ಲದ ಮಾಜಿ ಸಚಿವ ನಾಗೇಂದ್ರ ಇ.ಡಿ. ಚಾರ್ಜ್​ಶೀಟ್​ನಲ್ಲಿ ಎ1 - Valmiki Corporation Scam

ABOUT THE AUTHOR

...view details