ಕರ್ನಾಟಕ

karnataka

ರಾಜ್ಯದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್ - High Court

By ETV Bharat Karnataka Team

Published : Jun 10, 2024, 6:59 PM IST

ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಮರುಕಳಿಸುತ್ತಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಬಾರಿ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಹೈಕೋರ್ಟ್
ಹೈಕೋರ್ಟ್ (IANS)

ಬೆಂಗಳೂರ:ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಅರ್ಜಿಯ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ವಕೀಲ ರಮೇಶ್ ಎಲ್. ನಾಯ್ಕ್ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ, ಸರ್ಕಾರದ ವಿವಿಧ ಪ್ರಾಧಿಕಾರಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಕುಡಿಯುವ ನೀರು ಮಾಲಿನ್ಯ ಆಗದಂತೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ನಿರ್ದೇಶನ ನೀಡಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ನೀರಿನ ಮೂಲಗಳನ್ನು ಆಗಾಗ ಪರಿಶೀಲಿಸಬೇಕು. ಹಳೆಯ ನೀರಿನ ಕೊಳವೆಗಳನ್ನು ಪರಿಶೀಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ದಿಷ್ಟ ಸಂಖ್ಯೆಯ ದಿನಗಳಿಗೊಮ್ಮೆ ನೀರು ಸಂಗ್ರಹಿಸುವ ಘಟಕಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ರಾಯಚೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಮರುಕಳಿಸುತ್ತಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಬಾರಿ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2022ರ ಜೂನ್ ತಿಂಗಳಲ್ಲಿ ಕಲುಷಿತ ನೀರು ಕುಡಿದು ರಾಯಚೂರು ಪಟ್ಟಣದಲ್ಲಿ ನಾಲ್ವರು ಸಾವನ್ನಪ್ಪಿ, ಅನೇಕ ಮಂದಿ ಅಸ್ವಸ್ಥರಾಗಿದ್ದರು ಮತ್ತು ಎರಡು ವಾರಗಳ ಕಾಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. 2023ರ ಮೇ ತಿಂಗಳಲ್ಲಿ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ್ದು, 34 ಮಂದಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಹಾಗೂ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಗೋರೆಬಾಳ ಗ್ರಾಮದಲ್ಲಿ 25 ಮಂದಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದವು ಎಂದು ಅರ್ಜಿಯಲ್ಲಿ ಮಾಹಿತಿ ನೀಡಲಾಗಿದೆ.

2023ರ ಜುಲೈ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಕಲುಷಿತ ನೀರು ಕುಡಿದ ಹಿನ್ನೆಲೆಯಲ್ಲಿ ಆರು ಮಂದಿ ಸಾವಿಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ 180 ಮಂದಿ ಆಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದಾಗಿ ವರದಿಯಾಗಿತ್ತು. ಈ ಎಲ್ಲ ಘಟನೆಗಳಲ್ಲಿ ಸರ್ಕಾರವು ಮೃತರಿಗೆ ಪರಿಹಾರವನ್ನು ನೀಡಿ ಕೈತೊಳೆದುಕೊಂಡಿದೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಂಡಿಲ್ಲ. ಇದರಿಂದಾಗಿ ಘಟನೆಗಳು ಮರುಕಳಿಸುತ್ತಿವೆ. ಸಂವಿಧಾನದ ಪರಿಚ್ಛೇದ 21ರಂತೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪಡೆಯುವುದು ಸಹ ಹಕ್ಕಾಗಿದೆ. ಅಲ್ಲದೆ, ಎಲ್ಲ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪಡೆಯುವುದು ಮೂಲಭೂತ ಹಕ್ಕಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕುಡಿಯುವ ನೀರು ಕಲುಷಿತವಾಗದಂತೆ ನಿಯಂತ್ರಣ ಮಾಡಲು ಸರ್ಕಾರದ ಪ್ರಾಧಿಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಇದೇ ಕಾರಣದಿಂದ ರಾಜ್ಯದಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಸಂವಿಧಾನದ ಪರಿಚ್ಛೇದ 21ರ ಉಲ್ಲಂಘನೆ ಆಗುತ್ತಿದೆ. ಅಲ್ಲದೆ, ಕಲುಷಿತ ನೀರನ್ನು ಸರಿಪಡಿಸದ ಹಿನ್ನೆಲೆಯಲ್ಲಿ ರಾಜ್ಯ ಜಲ ನೀತಿ 2022 ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪಿಎಫ್ ಹಣ ಸಿಬ್ಬಂದಿ ವೇತನಕ್ಕೆ ಸೇರಿಸಿ ಪಾವತಿಸಿದಲ್ಲಿ ಅಪರಾಧವಾಗುವುದಿಲ್ಲ: ಹೈಕೋರ್ಟ್ - High Court On PF Money

ABOUT THE AUTHOR

...view details