ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನವಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕರಾಗಿರುವ ರಮಣಗೌಡ ಬಿ ಪಾಟೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆಯನ್ನು ನಿಯಮದ ಪ್ರಕಾರವಾಗಿ ನಡೆಸಲಾಗುತ್ತಿಲ್ಲ. ಹೀಗಾಗಿ, ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ವಿವರಿಸಿದರು.
ಈ ವೇಳೆ ನ್ಯಾಯಪೀಠ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ಗುರುವಾರ ತಿಳಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು. ಅಲ್ಲದೇ, ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ಈಗ 2024ನೇ ಇಸ್ವಿ. ಈ ಅವಧಿಯಲ್ಲಿ ನೀವು ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲಾಗದು ಎಂದು ತಿಳಿಸಿತು.