ಕರ್ನಾಟಕ

karnataka

ಶಾಸಕ ವಸಂತ್ ಆಸ್ನೋಟಿಕರ್ ಕೊಲೆ ಕೇಸ್; ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ - Vasant Asnotikar Murder Case

By ETV Bharat Karnataka Team

Published : Apr 16, 2024, 5:10 PM IST

ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಕೊಲೆ ಪ್ರಕರಣದ ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಹೈಕೊರ್ಟ್
ಹೈಕೊರ್ಟ್

ಬೆಂಗಳೂರು: ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್‌ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ 6ನೇ ಆರೋಪಿಯಾಗಿದ್ದ ಮುಂಬೈ ಪಶ್ಚಿಮದ ಅಂಧೇರಿ ಮೂಲದ ಸಂಜಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್​.ಪಿ.ಸಂದೇಶ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ಧಾರವಾಠ ಪೀಠ ಈ ಆದೇಶ ನೀಡಿತು.

ದಾಖಲೆಗಳ ಪರಿಶೀಲನೆ ಮತ್ತು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಘಟನೆ ಸಂಬಂಧ ಲಭ್ಯವಿರುವ ಹಲವು ಪ್ರತ್ಯಕ್ಷ ಸಾಕ್ಷ್ಯಿಗಳಿದ್ದು, ಮೇಲ್ಮನವಿದಾರರ ಕೃತ್ಯವನ್ನು ಗುರುತಿಸಲಾಗಿದೆ. ವಿಚಾರಣಾ ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ಹೇಳಿಕೆಗಳನ್ನು ನೀಡಿದ್ದಾರೆ. ಕೆಲವು ಸಾಕ್ಷ್ಯಾಧಾರಗಳಲ್ಲಿ ವಿರೋಧಾಭಾಸವಿರಬಹುದು. ಆದರೆ, ಅದಕ್ಕೆಲ್ಲಾ ಖಚಿತ ಆಧಾರಗಳಿವೆ. ಪ್ರತ್ಯಕ್ಷ ಸಾಕ್ಷಿಗಳು ಆರೋಪಕ್ಕೆ ಪೂರಕವಾಗಿದ್ದಾಗ ಇತರೆ ಸಾಕ್ಷಿಗಳನ್ನು ನಂಬಬೇಕಾಗುತ್ತದೆ ಎಂದು ತಿಳಿಸಿದೆ.

ಗುಂಡಿನ ದಾಳಿ ಅಸಾಮಾನ್ಯವಾಗಿತ್ತು. ಕಾರವಾರದಂತಹ ನಗರದಲ್ಲಿ ಚಲನಚಿತ್ರಗಳಲ್ಲಿಯೂ ಕಾಣದಂತಹ ಘಟನೆಯಾಗಿದ್ದರ ಪರಿಣಾಮ ಪ್ರತ್ಯಕ್ಷ ಸಾಕ್ಷ್ಯಗಳಿಗೆ ನೆನಪಿನಲ್ಲಿ ಉಳಿಯುವಂತಾಗಿದೆ ಎಂದು ಪೀಠ ತಿಳಿಸಿದೆ.

ಸಾಕ್ಷಿದಾರರು ಪಾಟಿಸವಾಲು ಸಂದರ್ಭದಲ್ಲಿ ನೀಡಿರುವ ಹೇಳಿಕೆ ನಂಬಲಾರ್ಹವಲ್ಲ ಎಂಬುದಕ್ಕೆ ಸಾಧ್ಯವೇ ಇಲ್ಲ. ಕಾನೂನಿನಲ್ಲಿ ಈ ಎಲ್ಲ ವಾಸ್ತವಿಕ ಅಂಶಗಳನ್ನು ಪರಿಶೀಲನೆ ನಡೆಸಿದಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಕಾನೂನುಬಾಹಿರ ಹಾಗೂ ದೋಷದಿಂದ ಕೂಡಿದೆ ಎಂದು ಸಾಬೀತುಪಡಿಸುವುದಕ್ಕೆ ಯಾವುದೇ ಆಧಾರಗಳಿಲ್ಲ. ಆದ ಕಾರಣ ಮೇಲ್ಮನವಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ಹೇಳಿತು.

ಪ್ರಕರಣದ ಹಿನ್ನೆಲೆ:ಕಾರವಾರದ ಕಲ್ಯಾಣ ಮಂಟಪವೊಂದರಲ್ಲಿ ತಮ್ಮ ಮಗಳ ವಿವಾಹದ ಆರತಕ್ಷತೆ ಕಾರ್ಯಕ್ಕೆ ಸಿದ್ದತೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಆಸ್ನೋಟಿಕರ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದರು. ಘಟನೆಯಲ್ಲಿ ಗಣಪತಿ ಉಲ್ವೆಕರ್ ಎಂಬವರು ಗಾಯಗೊಂಡಿದ್ದರು.

ಪ್ರಕರಣದ ಮೊದಲ ಆರೋಪಿ ದಿಲೀಪ್ ಅರ್ಜಿನ್ ನಾಯ್ಕ್, ಇತರೆ ಆರೋಪಿಗಳಾದ ಆಂಟೋನಿ ಅಲಿಯಾಸ್ ಟೋನಿ ರೊಜಾರಿಯೋ ಮತ್ತು ಓಂ ಪ್ರಕಾಶ್ ಗಿರಿ ಅಲಿಯಾಸ್ ಪಕ್ಯಾ ಅಲಿಯಾಸ್ ಬಾಬು ಎಂಬವರು ವಿಚಾರಣೆ ಹಂತದಲ್ಲಿಯೇ ಮೃತಪಟ್ಟಿದ್ದರು. ಹೀಗಾಗಿ ಈ ಆರೋಪಿಗಳ ವಿರುದ್ಧದ ಆರೋಪವನ್ನು ನ್ಯಾಯಾಲಯ ಕೈಬಿಟ್ಟಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಉತ್ತರ ಕನ್ನಡ ಜಿಲ್ಲೆಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯ ವಿರುದ್ಧ ಕೊಲೆ, ಕೊಲೆಯತ್ನ, ಪಿತೂರಿ, ಸಾಕ್ಷ್ಯನಾಶ, ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಸಂಜಯ್ ಮೊಹಿತೆ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 68 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು.

ಮೇಲ್ಮನವಿಯಲ್ಲಿ ಅರ್ಜಿದಾರರು, ಘಟನೆ ನಡೆದ ದಿನದಂದು ಆರೋಪಿ ಕಾರವಾರದಲ್ಲಿದ್ದರು ಎಂಬುದಾಗಿ ತನಿಖಾಧಿಕಾರಿಗಳು ತಪ್ಪಾಗಿ ದಾಖಲೆಗಳನ್ನು ಸೃಷ್ಠಿಸಿದ್ದಾರೆ. ಹೊಸದಾಗಿ ಆರೋಪಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿದ್ದಾರೆ. ಅಲ್ಲದೆ, ಘಟನೆ ನಡೆದ ಎರಡು ವರ್ಷಗಳ ಬಳಿಕ ಸಾಕ್ಷ್ಯಗಳ ಪೆರೇಡ್ ನಡೆಸಿದ್ದಾರೆ. ಸಾಕ್ಷಿಗಳಿಗೆ ತರಬೇತಿ ನೀಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ವಾದ ವಿವರಿಸಿದ್ದರು.

ಇದನ್ನೂ ಓದಿ:ಸಂಸದ ಬಿ.ವೈ.ರಾಘವೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ - B Y Raghavendra

ABOUT THE AUTHOR

...view details