ಕರ್ನಾಟಕ

karnataka

ETV Bharat / state

ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಅಪರಾಧಿಗೆ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್ - High Court - HIGH COURT

ಪ್ರಕರಣವೊಂದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಅಪರಾಧಿಗೆ ಶಿಕ್ಷೆ ಕಾಯಂಗೊಳಿಸಿ ಹೈಕೋರ್ಟ್ ಆದೇಶಿಸಿದೆ.

high court
ಹೈಕೋರ್ಟ್ (ETV Bharat)

By ETV Bharat Karnataka Team

Published : May 8, 2024, 5:14 PM IST

ಬೆಂಗಳೂರು:ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಕುರಿತಂತೆ ಬಂಧನಕ್ಕೆ ಒಳಗಾಗಿದ್ದ ಅಪರಾಧಿಯು ಪೊಲೀಸರ ಕಣ್ತಪ್ಪಿಸಿ, ತಪ್ಪಿಸಿಕೊಂಡಿದ್ದ ಪರಿಣಾಮ ಶಿಕ್ಷೆ ಅನುಭವಿಸುವಂತಾಗಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸೋಮಶೇಖರ್ ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಕಠಿಣ ಶಿಕ್ಷೆ ಹಾಗೂ ಒಂದು ಸಾವಿರ ರೂ. ದಂಡದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ, ಅರ್ಜಿದಾರರು ಉದ್ದೇಶಪೂರ್ವಕವಾಗಿ ಎಎಸ್‌ಐನನ್ನು ತಳ್ಳಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದಾರೆ. ಅದನ್ನು ಪ್ರಾಸಿಕ್ಯೂಷನ್ ಸಾಕ್ಷಿಗಳೂ ಸಹ ದೃಢೀಕರಿಸಿದ್ದಾರೆ. ಹಾಗಾಗಿ, ಶಿಕ್ಷೆ ರದ್ದುಗೊಳಿಸಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಪರಾಧ ಎಸಗುವ ಸಂಭವನೀಯತೆ ಇದೆ ಎಂಬ ಅಂಶ ಪೊಲೀಸರಿಗೆ ಗೊತ್ತಾದಲ್ಲಿ ಮ್ಯಾಜಿಸ್ಟ್ರೇಟ್ ಅದೇಶ ಅಥವಾ ವಾರಂಟ್ ಇಲ್ಲದೆಯೂ ಘಟನೆ ತಪ್ಪಿಸುವುದಕ್ಕಾಗಿ ಯಾವುದೇ ವ್ಯಕ್ತಿಯನ್ನು ಬಂಧಿಸುವುದಕ್ಕೆ ಅವಕಾಶವಿದೆ. ಹಾಗಾಗಿ, ಶಿಕ್ಷೆ ಕಡಿತಗೊಳಿಸಲು ಸಾಧ್ಯವಿಲ್ಲ, ಆರೋಪಿ ಶಿಕ್ಷೆಯನ್ನು ಎದುರಿಸಲೇಬೇಕು ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ:2012ರ ಏಪ್ರಿಲ್​ 7 ರಂದು ರಾತ್ರಿ ಹೊಸಹುಡ್ಯ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿತ್ತು. ಆಗ ಸಹಾಯಕ ಸಬ್ ಇನ್ಸ್​ಪೆಕ್ಟರ್ ಸಾದಪ್ಪ ಮತ್ತಿತರ ಪೊಲೀಸರು ಗ್ರಾಮಕ್ಕೆ ತೆರಳಿದ್ದರು. ಆ ವೇಳೆ ಸೋಮಶೇಖರ್ ಮತ್ತು ವೆಂಕಟೇಶ್ ಅವರನ್ನು ಬಂಧಿಸಿ, ಅವರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಆರೋಪಿಯನ್ನು ಪಾತಪಾಳ್ಯ ಪೊಲೀಸ್ ಠಾಣೆಗೆ ಕರೆತಂದಾಗ ಜೀಪಿನಲ್ಲಿ ಕೆಳಗೆ ಇಳಿಯುವಾಗ​ ಸಿಬ್ಬಂದಿಯನ್ನು ತಳ್ಳಿ ಸೋಮಶೇಖರ್ ತಪ್ಪಿಸಿಕೊಂಡು ಓಡಿದ್ದ. ಬಳಿಕ ಎಷ್ಟೇ ಹುಡುಕಿದರೂ ಸಿಗದ ಕಾರಣ, ಆತನ ಮೇಲೆ ದೂರು ದಾಖಲಿಸಿಕೊಳ್ಳಲಾಗಿತ್ತು.

ಆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದ ಬಾಗೇಪಲ್ಲಿ ಜೆಎಂಎಫ್​ಸಿ ನ್ಯಾಯಾಲಯವು 2014ರ ಜೂನ್​ 9ರಂದು ಕಾನೂನುಬದ್ಧ ಬಂಧನದಿಂದ ಆರೋಪಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಆತನಿಗೆ 6 ತಿಂಗಳು ಕಠಿಣ ಜೈಲು ಮತ್ತು ಒಂದು ಸಾವಿರ ರೂ. ದಂಡ ವಿಧಿಸಿತ್ತು. 2016ರ ಡಿಸೆಂಬರ್ ೩31ರಂದು ಚಿಕ್ಕಬಳ್ಳಾಪುರ ಸೆಷನ್ಸ್ ನ್ಯಾಯಾಲಯ ಕೂಡ ಆ ಅದೇಶವನ್ನು ಎತ್ತಿಹಿಡಿದಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ''ಸೋಮಶೇಖರ್ ತಪ್ಪಿಸಿಕೊಂಡಿದ್ದಾಗ ಆತನ ವಿರುದ್ಧ ಯಾವುದೇ ಆರೋಪ ಇರಲಿಲ್ಲ. ಒಂದೇ ಘಟನೆಯ ಬಗ್ಗೆ ಅವರಿಗೆ ಎರಡು ವಿಚಾರಣೆಗಳನ್ನು ಎದುರಿಸಬೇಕಾಗಿತ್ತು. ಆದ್ದರಿಂದ ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ರದ್ದುಗೊಳಿಸಬೇಕು'' ಎಂದು ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ''ಭಾರತೀಯ ದಂಡ ಸಂಹಿತೆ ಸೆಕ್ಷನ್ 224 ಹೇರಿರುವುದನ್ನು ಸಮರ್ಥಿಸಿಕೊಂಡು, ಬೇರೆ ಪ್ರಕರಣಗಳು ಬೇರೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದವುಗಳು'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ:ರಸ್ತೆ ಅಪಘಾತಗಳಿಗೆ ಕಾರಣರಾಗುವ ಚಾಲಕರಿಗೆ ಕನಿಷ್ಠ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ ಮಾಡಿದಂತೆ : ಹೈಕೋರ್ಟ್ - Road accident

ABOUT THE AUTHOR

...view details