ಕರ್ನಾಟಕ

karnataka

ETV Bharat / state

ನಟ ಚೇತನ್‌ ವಿರುದ್ಧದ ಜಾಮೀನುರಹಿತ ವಾರಂಟ್‌ ಹಿಂಪಡೆದ ಹೈಕೋರ್ಟ್‌

ನಟ ಚೇತನ್‌ ಕುಮಾರ್‌ ಅಹಿಂಸಾ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಹೊರಡಿಸಿದ್ದ ಜಾಮೀನುರಹಿತ ವಾರಂಟ್‌ ಅನ್ನು ಇಂದು ಹೈಕೋರ್ಟ್‌ ಹಿಂಪಡೆದಿದೆ.

By ETV Bharat Karnataka Team

Published : 5 hours ago

ನಟ ಚೇತನ್‌
ನಟ ಚೇತನ್‌ (ETV Bharat)

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಆದೇಶ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌​ ಮಾಡಿದ್ದ ಆರೋಪದಡಿ ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ನಟ ಚೇತನ್ ಕುಮಾರ್ ಅಹಿಂಸಾ, ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನುರಹಿತ ವಾರಂಟ್‌ ಅನ್ನು ಹೈಕೋರ್ಟ್‌ ಇಂದು ಹಿಂಪಡೆಯಿತು.

ಚೇತನ್ ಕುಮಾರ್ ಅಹಿಂಸಾ ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್.ರಹಮತುಲ್ಲಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಬೆಂಗಳೂರಿನ ಗಿರೀಶ್ ಭಾರದ್ವಾಜ್ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ವೇಳೆ ಹಾಜರಿದ್ದ ಚೇತನ್ ಪರ ವಕೀಲರು, 2024ರ ಸೆಪ್ಟೆಂಬರ್ 14ರಂದು ನ್ಯಾಯಾಲಯ ಹೊರಡಿಸಿರುವ ಜಾಮೀನುರಹಿತ ವಾರೆಂಟ್ ಹಿಂಪಡೆಯುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಇದಕ್ಕಾಗಿ ಚೇತನ್‌ಗೆ 5 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಅದನ್ನು ಹೈಕೋರ್ಟ್ ಕಟ್ಟಡದಲ್ಲಿರುವ ವಕೀಲರ ಗ್ರಂಥಾಲಯ ಘಟಕಕ್ಕೆ ಪಾವತಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಜ್ಞಾಪನಾ ಪತ್ರ ಸಲ್ಲಿಸಲು ಆದೇಶಿಸಿದೆ.

ಈ ಹಿಂದೆಯೂ ಎರಡನೇ ಆರೋಪಿಯಾಗಿರುವ ಚೇತನ್ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸುವ ಮೂಲಕ ಅವರನ್ನು ನ್ಯಾಯಾಲಯದ ಮುಂದೆ ಬರುವಂತೆ ಮಾಡಲಾಗಿತ್ತು. ಆನಂತರ 75,000 ಸಾವಿರ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಪಡೆದು ಜಾಮೀನು ನೀಡಲಾಗಿತ್ತು. ಒಂದೊಮ್ಮೆ ಮತ್ತೆ ನ್ಯಾಯಾಲಯದ ಮುಂದೆ ಹಾಜರಾಗದಿದ್ದರೆ ಬಾಂಡ್ ರದ್ದಾಗಲಿದೆ ಎಂದು ಆದೇಶಿಸಲಾಗಿತ್ತು

ಆದೇಶ ಪಾಲಿಸಲು ವಿಫಲವಾಗಿರುವುದರಿಂದ ಈಗ ಚೇತನ್ ಜಾಮೀನು ರದ್ದಾಗಿದ್ದು, ಮತ್ತೆ 1 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆಯನ್ನು ಹೈಕೋರ್ಟ್‌ನ ನ್ಯಾಯಾಂಗ ರಿಜಿಸ್ಟ್ರಾರ್ ಅವರಿಗೆ ಒಂದು ವಾರದಲ್ಲಿ ಒದಗಿಸಬೇಕು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 6ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಕೇಸ್: ಅ.22ರಂದು ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ABOUT THE AUTHOR

...view details