ಕಾರವಾರ (ಉತ್ತರ ಕನ್ನಡ) : ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿಯೂ ಬಂದರು ನಿರ್ಮಾಣ ಸಂಬಂಧ ಸಂಪರ್ಕ ರಸ್ತೆ ಸಮೀಕ್ಷೆಗೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬೇರೆಡೆ ಕರೆದೊಯ್ದಿದ್ದಾರೆ.
ಸಮೀಕ್ಷೆಗೆ ಅನುಕೂಲವಾಗುವಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದರು. ಆದರೆ ಈ ಆದೇಶವನ್ನು ಲೆಕ್ಕಿಸದೆ ಇದೀಗ ಸ್ಥಳೀಯರು ಶಾಲಾ ಮಕ್ಕಳೊಂದಿಗೆ ಸೇರಿ ಸರ್ವೆ ಕಾರ್ಯ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.
ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುತ್ತಿದೆ. ಸುತ್ತಲಿನ ಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಇಂದು (ಫೆಬ್ರವರಿ 25) ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ, ಗರಿಷ್ಠ/ಕನಿಷ್ಠ 5 ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಧರಣಿ ಹಾಗೂ ಪ್ರತಿಭಟನೆ ಉದ್ದೇಶಕ್ಕೆ ಸೇರುವುದನ್ನು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುವಂತೆ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳು/ಗುಂಪುಗಳು ಆಯುಧ, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕುಗಳು, ಕುಡುಗೋಲು, ಚಾಕು, ಕೋಲುಗಳು ಅಥವಾ ಲಾಠಿಗಳನ್ನು ಇಲ್ಲವೆ ದೈಹಿಕ ಹಿಂಸೆಯನ್ನುoಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಅಲ್ಲದೆ, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದು, ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಶೇಖರಿಸುವುದು ಮತ್ತು ತಯಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದರೆ ಆದೇಶದ ನಡುವೆಯೂ ಸ್ಥಳೀಯರು ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಸರ್ವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆ ಕೈಗೊಂಡಿದ್ದಾರೆ.