ಕರ್ನಾಟಕ

karnataka

By ETV Bharat Karnataka Team

Published : Jun 27, 2024, 6:57 PM IST

ETV Bharat / state

ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ಅವ​ರಿಗೆ ಬೆಂಗಳೂರು ನಗರ ವಿವಿ ಗೌರವ ಡಾಕ್ಟರೇಟ್ - Gundappa Viswanath

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾರತದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದ್ದಾರೆ.

Cricket legend Gundappa Viswanath
ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ (ETV Bharat)

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ 3ನೇ ಘಟಿಕೋತ್ಸವದಲ್ಲಿ ದೇಶದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ಅವ​ರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ಮಾಹಿತಿ ನೀಡಿದರು.

ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದ ಬೋರ್ಡ್ ರೂಮ್​ನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್.ಜಯರಾಮ್ ಅವರಿಗೂ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ ಎಂದು ಹೇಳಿದರು.

ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂನ್ 29ರ ಶನಿವಾರ ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಯುನಿಫೈಡ್ ಯೂನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶದ ಪ್ರಕಾರ, ಸ್ನಾತಕ ಹಾಗೂ ಸ್ಟಾಂಡ್ ಅಲೋನ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡುತ್ತಿರುವ ರಾಜ್ಯದ ಪ್ರಥಮ ವಿಶ್ವವಿದ್ಯಾನಿಲಯ ನಮ್ಮದು ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್‌ ಪ್ರಮಾಣ ಪತ್ರ, ಚಿನ್ನದ ಪದಕ ಮತ್ತು ನಗದು ಬಹುಮಾನ ಸ್ವೀಕರಿಸಲಿದ್ದಾರೆ. ರ‍್ಯಾಂಕ್‌ ವಿಜೇತರಲ್ಲಿ 40 ವಿದ್ಯಾರ್ಥಿಗಳು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸ್ಥಾಪಿತ ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ. ವಿವಿಧ ದಾನಿಗಳು ಸ್ಥಾಪಿಸಿರುವ ಒಟ್ಟು 15 ಚಿನ್ನದ ಪದಕಗಳನ್ನೂ ಸಹ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ಬಿ.ಎ ಮ್ಯೂಸಿಕ್, ಟೂರಿಸಂ ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳಿಲ್ಲದ ಕಾರಣ ಈ ವರ್ಷ ಎರಡು ಚಿನ್ನದ ಪದಕ ವಿತರಿಸಲಾಗುತ್ತಿಲ್ಲ.

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸ್ಥಾಪಿಸಿದ 35 ಚಿನ್ನದ ಪದಕಗಳು ಮತ್ತು ನಗದು ಬಹುಮಾನಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಬಿ.ಎ. ಬಿ.ಎಸ್ಸಿ, ಬಿ.ಕಾಂ. ಬಿ.ಬಿ.ಎ. ಬಿ.ಇಡಿ. ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ನೀಡಲಾಗುವುದು ಎಂದು ಲಿಂಗರಾಜ ಗಾಂಧಿ ಮಾಹಿತಿ ನೀಡಿದರು.

ಇದನ್ನೂ ಓದಿ:ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿ ಮೂವರು ಗಣ್ಯರಿಗೆ ಮೈಸೂರು ವಿವಿಯ ಗೌರವ ಡಾಕ್ಟರೇಟ್

ABOUT THE AUTHOR

...view details