ಕರ್ನಾಟಕ

karnataka

ಬೆಂಗಳೂರು ನಗರ ವಿವಿ 3ನೇ ಘಟಿಕೋತ್ಸವ: ಮಾಜಿ ಕ್ರಿಕೆಟರ್​ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್ ಪ್ರದಾನ - Convocation Ceremony

By ETV Bharat Karnataka Team

Published : Jun 29, 2024, 10:18 PM IST

ಬೆಂಗಳೂರು ನಗರ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ವಿಶ್ವ ಪ್ರಸಿದ್ಧ ಕ್ರಿಕೆಟರ್ ಜಿ.ಆರ್. ವಿಶ್ವನಾಥ್ ಮತ್ತು ಸಮಾಜ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಆರ್. ಜೈರಾಮ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.

ಜಿ.ಆರ್. ವಿಶ್ವನಾಥ್ , ಎಂ.ಆರ್. ಜೈರಾಮ್ ಅವರುಗಳಿಗೆ ಗೌರವ ಡಾಕ್ಟರೇಟ್
ಜಿ.ಆರ್. ವಿಶ್ವನಾಥ್ , ಎಂ.ಆರ್. ಜೈರಾಮ್ ಅವರುಗಳಿಗೆ ಗೌರವ ಡಾಕ್ಟರೇಟ್ (ETV Bharat)

ಬೆಂಗಳೂರು:ಬೆಂಗಳೂರು ನಗರ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ಸಮಾಜ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಆರ್. ಜೈರಾಮ್ ಮತ್ತು ವಿಶ್ವ ಪ್ರಸಿದ್ಧ ಕ್ರಿಕೆಟರ್ ಜಿ.ಆರ್. ವಿಶ್ವನಾಥ್ ಅವರುಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಶಿಕ್ಷಣವು ನಿಮ್ಮ ವೃತ್ತಿಜೀವನವನ್ನು ಯಶಸ್ವಿಗೊಳಿಸುವುದರ ಜೊತೆಗೆ ಜೀವನವನ್ನು ಅರ್ಥಪೂರ್ಣವಾಗಿಸುವಲ್ಲಿ ಸಹಾಯಕವಾಗುತ್ತದೆ. ಶಿಕ್ಷಣ ಮತ್ತು ಜ್ಞಾನವನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಜ್ಞಾನ ಹಂಚಿದಷ್ಟು ವೃದ್ಧಿಯಾಗಲಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ದೇಶದ ಸಾಂಸ್ಕೃತಿಕ ಸಂಪ್ರದಾಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಮತ್ತು ದೇಶದಲ್ಲಿ ಸಮಾನತೆ ಮತ್ತು ಸಾಮರಸ್ಯದ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ಇದರಿಂದ ದೇಶದ ಏಕತೆ ಮತ್ತು ಸಮಗ್ರತೆಯು ಬಲಗೊಳ್ಳುತ್ತದೆ ಮತ್ತು ಅದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗವಾಗಿ ಚಲಿಸುತ್ತದೆ ಎಂದು ಹೇಳಿದರು.

ಬೆಂಗಳೂರು ನಗರ ವಿವಿ 3ನೇ ಘಟಿಕೋತ್ಸ (ETV Bharat)

ಪ್ರಾಚೀನ ಕಾಲದಲ್ಲಿ, ನಮ್ಮ ದೇಶ ಭಾರತವನ್ನು ವಿಶ್ವ ಗುರು ಎಂದು ಕರೆಯಲಾಗುತ್ತಿತ್ತು. ನಳಂದ, ತಕ್ಷಶಿಲಾ, ವಿಕ್ರಮಶಿಲಾ ಮುಂತಾದವು ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳಿದ್ದವು. ನಳಂದಾ ವಿಶ್ವವಿದ್ಯಾನಿಲಯವು ಭಾರತದ ಶ್ರೀಮಂತ ಶೈಕ್ಷಣಿಕ ಪರಂಪರೆಯ ಸಂಕೇತವಾಗಿದೆ ಮತ್ತು ಜಾಗತಿಕ ಜ್ಞಾನ ಮತ್ತು ಸಂಸ್ಕೃತಿಗೆ ಕೊಡುಗೆಯಾಗಿದೆ. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ, ನಳಂದ ಮಹಾವಿಹಾರದ ಬಳಿ ಕೆಲವು ಸಮಯದ ಹಿಂದೆ ಹೊಸ ನಳಂದ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಯಿತು. ಇದರ ಹೊಸ ಕ್ಯಾಂಪಸ್ ಅನ್ನು ದೇಶದ ಪ್ರಧಾನಿ ಉದ್ಘಾಟಿಸಿದ್ದಾರೆ ಎಂದು ತಿಳಿಸಿದರು.

ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ಭಾರತದ ಆರ್ಥಿಕತೆಯು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮತ್ತು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ. ಇದಕ್ಕೆ ಅಗತ್ಯ ಸಹಕಾರ ನೀಡಬೇಕು. ಸ್ವಾತಂತ್ರ್ಯ ಗಳಿಸಿ 75 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಪ್ರಸ್ತುತ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಭಾರತವನ್ನು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕಿದೆ. ಇದಕ್ಕೆ ಇಂದಿನ ಯುವಪೀಳಿಗೆ ಸಹಕಾರ ಅತ್ಯಗತ್ಯ. ಅದೇ ರೀತಿ ಶಿಕ್ಷಣ ಸಂಸ್ಥೆಗಳು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಾಗಿ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಬೆಂಗಳೂರು ನಗರ ವಿವಿ 3ನೇ ಘಟಿಕೋತ್ಸ (ETV Bharat)

ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನದ ಪದಕ ಮತ್ತು ಪದವಿಗಳನ್ನು ಪಡೆದುಕೊಂಡಿದ್ದು ಬಹಳ ಸಂತಸವಾಯಿತು. ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯುತ್ತಿರುವುದು ಶ್ಲಾಘನೀಯವಾಗಿದೆ. ಮಹಿಳಾ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ ಸಾಧ್ಯವಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಭಾರತ ವಿಕಸಿತ ಭಾರತವಾಗಿ ಶೀಘ್ರವಾಗಿ ಹೊರಹೊಮ್ಮಲಿದೆ ಎಂದರು.

ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಎಐಸಿಟಿಇ ಅಧ್ಯಕ್ಷ ಟಿ.ಜಿ. ಸೀತಾರಾಂ, ಕುಲಪತಿ ಪ್ರೊ.ಲಿಂಗರಾಜು ಗಾಂಧಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ:ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ 1 ಕೋಟಿ ಲೀಟರ್ ದಾಟಿದ ಹಾಲಿನ ಸಂಗ್ರಹಣೆ: ಸಿಎಂ ಹರ್ಷ - KMF Milk Collection record

ABOUT THE AUTHOR

...view details