ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಇದು ನಿಮ್ಮೆಲ್ಲರ ಸರ್ಕಾರ. ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ. ಸರ್ಕಾರ ಅಂದರೆ ಎಲ್ಲಾ ಸರ್ಕಾರಿ ನೌಕರರೂ ಸೇರುತ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ ಸಮಾಜದ ಕನಸು ಕಂಡಿದ್ದರು. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಸಿಎಂಗೆ ಅಭಿನಂದನಾ ಸಮಾರಂಭ (ETV Bharat) ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ. ನಿಮ್ಮೆಲ್ಲರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ/ಹಳೆ ಪಿಂಚಣಿ ಯೋಜನೆ ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರುತ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದು ಸಿಎಂ ಹೇಳಿದರು.
ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಗದೆ ನೀಡಿ ಸನ್ಮಾನ (ETV Bharat) ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಷಿಕ್ಯೂಷನ್ಗೆ ಅನುಮತಿ: ಪಾದಯಾತ್ರೆಯ ಫಲ ಎಂದ ಬಿಜೆಪಿ ನಾಯಕರು - prosecution against cm siddaramaiah