ಬೆಂಗಳೂರು:ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ತನಿಖೆ ಹಾಗೂ ಎಸ್ಐಟಿ ತನಿಖೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ದೂರು ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗವು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರಿನ ಮನವಿ ಸಲ್ಲಿಕೆ ಮಾಡಿತು.
ಎಸ್ಐಟಿಯು ಸರ್ಕಾರ ಹೇಳಿದಂತೆ ತನಿಖೆ ಮಾಡುತ್ತಿದೆ. ಪೆನ್ ಡ್ರೈವ್ ಹಂಚಿಕೆ ಬಗ್ಗೆ ನಿಷ್ಪಕ್ಷವಾದ ತನಿಖೆ ನಡೆಸಬೇಕು ಎಂದು ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಲಾಗಿದೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವಿಡಿಯೋಗಳ ಬಗ್ಗೆ ಪ್ರಸ್ತಾಪಿಸಿದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ವಿಡಿಯೋಗಳ ಬಗ್ಗೆ ಗೊತ್ತಿದ್ದರೂ ಪ್ರಜ್ವಲ್ ರೇವಣ್ಣನವರಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟರು. ಇಂತಹ ಹೇಳಿಕೆಗಳು ಪ್ರಧಾನಿ ಮತ್ತು ಗೃಹ ಸಚಿವರ ಪ್ರತಿಷ್ಠೆಗೆ ಮಸಿ ಬಳಿಯಲು ರಾಜಕೀಯ ಪ್ರೇರಿತವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಶೇಷ ತನಿಖಾ ತಂಡಗಳಿಂದ ಮುಕ್ತ ಮತ್ತು ನ್ಯಾಯೋಚಿತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಿರೀಕ್ಷಿಸುವುದು ಅಸಾಧ್ಯವಾಗಿದೆ. ಎಸ್ಐಟಿ ತಂಡವು ರಾಜ್ಯ ಸರ್ಕಾರದಿಂದ ಪ್ರಭಾವಿತವಾಗಿದೆ ಮತ್ತು ತಪ್ಪಾಗಿ ಮಾರ್ಗದರ್ಶನ ನೀಡುತ್ತದೆ. ಆದ್ದರಿಂದ, ಕೇಂದ್ರೀಯ ತನಿಖಾ ದಳ (ಸಿಬಿಐ) ದಿಂದ ಸಂಪೂರ್ಣ ತನಿಖೆಗಾಗಿ ಪ್ರಕರಣವನ್ನು ಶಿಫಾರಸು ಮಾಡುವಲ್ಲಿ ತಾವು ಮಧ್ಯಸ್ಥಿಕೆಯನ್ನು ವಹಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.