ಬೆಂಗಳೂರು :ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ರಾಜ್ಯ ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ ಎಂದು ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ.
''ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರೆದಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಜೆಡಿಎಸ್ ಕಿಡಿಕಾರಿದೆ.
ತುರುವೇಕೆರೆಯಲ್ಲಿ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ'' ಎಂದಿದೆ.
"ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ" ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ; ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?'' ಎಂದು ತಿರುಗೇಟು ನೀಡಿದೆ.
''2018-19ರಲ್ಲಿ ರಾಜ್ಯ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ ₹25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?'' ಎಂದು ಕೇಳಿದೆ.
''ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ. ಅಷ್ಟೇ ಏಕೆ ? ಒಂದು ಕೈಯಲ್ಲಿ ₹2000 ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಡೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ. ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?'' ಎಂದು ಜೆಡಿಎಸ್ ಪ್ರಶ್ನಿಸಿದೆ.