ಬೆಂಗಳೂರು: ಮುಡಾ ಅಕ್ರಮ ಆರೋಪ ಬೆನ್ನಲ್ಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ. ಮರೀಗೌಡ ರಾಜೀನಾಮೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.
ಮುಡಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವ ವೇಳೆ ಕೆ. ಮರೀಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಸೂಚಿಸಿದ ಹಿನ್ನೆಲೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮರೀಗೌಡ ತಿಳಿಸಿದ್ದಾರೆ.
ಮುಡಾ ಅಕ್ರಮ ಸಂಬಂಧ ಮರೀಗೌಡ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರು ಅಸಮಾಧಾನಗೊಂಡಿದ್ದರು. ಮರೀಗೌಡ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದರು. ಇದೀಗ ಮುಡಾ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ನನ್ನ ಆರೋಗ್ಯವೂ ಸರಿ ಇಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ರಾಜೀನಾಮೆಗೆ ನಗರಾಭಿವೃದ್ಧಿ ಸಚಿವರು ಒತ್ತಡ ಹೇರಿಲ್ಲ ಎಂದು ಇದೇ ವೇಳೆ ಮರೀಗೌಡ ಸ್ಪಷ್ಟಪಡಿಸಿದ್ದಾರೆ.
ಕೆ ಮರೀಗೌಡ ಸ್ಪಷ್ಟನೆ; ಮುಡಾ ಅಕ್ರಮ ಆರೋಪ ಸಂಬಂಧ ತನಿಖೆ ನಡೆಯುತ್ತಿದೆ. ಆ ಬಗ್ಗೆ ಈಗ ನಾನು ಏನೂ ಪ್ರತಿಕ್ರಿಯಿಸಲ್ಲ. ನಿವೇಶನ ಹಂಚಿಕೆ ಸಂಬಂಧ ಸಿಎಂ ನನ್ನ ಮೇಲೆ ಯಾವುದೇ ಒತ್ತಡ ಹಾಕಿರಲಿಲ್ಲ. ತನಿಖೆಯಲ್ಲಿ ಸತ್ಯ ಹೊರ ಬರಲಿದೆ. ಆರೋಗ್ಯ ಸರಿ ಇಲ್ಲದ ಕಾರಣ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ. ಯಾವುದೇ ಒತ್ತಡಕ್ಕೆ ಒಳಗಾಗಿ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ನಾನು ಸಿದ್ದರಾಮಯ್ಯ ಅವರ ಜೊತೆಯಲ್ಲಿ ಇದ್ದೇನೆ. ನನ್ನನ್ನು ಅವರು ತಾಲೂಕು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಮಾಡಿದ್ದರು. ಯಾವತ್ತೂ ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತಾ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ. ನನಗೆ ಎರಡು ಬಾರಿ ಸ್ಟ್ರೋಕ್ ಆಗಿರುವುದರಿಂದ ಆರೋಗ್ಯ ಸರಿ ಇಲ್ಲ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.